ಹಾಸನ: ರೈಲುಗಳ ಎಸಿ ಬೋಗಿಗಳಲ್ಲಿ ಪ್ರಯಾಣಿಕರ ಚಿನ್ನಾಭರಣ, ನಗದು ಕಳವು ಮಾಡುತ್ತಿದ್ದ ಖತರ್ನಾಕ್ ಅಂತಾರಾಜ್ಯ ಕಳ್ಳನನ್ನು ಬಂಧಿಸಿರುವ ಅರಸೀಕೆರೆ ರೈಲ್ವೆ ಪೊಲೀಸರು, ಆರೋಪಿಯಿಂದ 22.75 ಲಕ್ಷ ಮೌಲ್ಯದ 218 ಗ್ರಾಂ. ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಜಿತೇಂದ್ರಕುಮಾರ ಚಾವ್ಲಾ (37) ಬಂಧಿತ ಆರೋಪಿ. ಈತನ ಮೇಲೆ ಮಹಾರಾಷ್ಟ್ರ, ತಮಿಳುನಾಡು ಹಾಗೂ ಉತ್ತರಾಖಂಡ ರೈಲ್ವೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಸುಮಾರು 13 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಆರೋಪಿಯು ಪೊಲೀಸ್ ತನಿಖೆ ವೇಳೆ ಒಪ್ಪಿಕೊಂಡಿದ್ದಾನೆ. ಎಸಿ ಕೋಚ್ಗಳಲ್ಲಿ ಪ್ರಯಾಣ ಮಾಡುತ್ತಿದ್ದ ಆರೋಪಿ ಶ್ರೀಮಂತ ವ್ಯಕ್ತಿಗಳನ್ನೇ ಟಾರ್ಗೆಟ್ ಮಾಡಿ ಕಳವು ಮಾಡುತ್ತಿದ್ದ ಎಂದು ರೈಲ್ವೆ ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ.
7 ವರ್ಷಗಳ ಬಳಿಕ ಸೆರೆಸಿಕ್ಕ ಖದೀಮ: ಹಾಸನ ಜಿಲ್ಲೆಯ ಅರಸೀಕೆರೆಯ ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಅವರ ಚಿನ್ನಾಭರಣ ಕಳ್ಳತನವಾಗಿತ್ತು. ಇದೇ ಆರೋಪಿ ಸ್ವಾಮೀಜಿಯ ಚಿನ್ನಾಭರಣ, ನಗದು ಕಳವು ಮಾಡಿದ್ದ. ಸದ್ಯ ಏಳು ವರ್ಷಗಳ ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಹಿನ್ನೆಲೆ: ಆರೋಪಿ 2018ರಲ್ಲಿ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಬಾಗಲಕೋಟೆಯಿಂದ ಅರಸೀಕೆರೆಗೆ ರೈಲಿನ ಎಸಿ ಕೋಚ್ನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಲೆದರ್ ಬ್ಯಾಗ್ನಲ್ಲಿ ಚಿನ್ನದ ಆಭರಣ ಹಾಗೂ ನಗದು ಹಣವನ್ನು ಇಟ್ಟು ಸ್ವಾಮೀಜಿ ನಿದ್ದೆಗೆ ಜಾರಿದ್ದರು. ತಡರಾತ್ರಿ ಎಚ್ಚರಗೊಂಡು ನೋಡಿದ ವೇಳೆ ಬ್ಯಾಗ್ನಲ್ಲಿದ್ದ ಚಿನ್ನಾಭರಣ, ನಗದು ಕಳ್ಳತನವಾಗಿತ್ತು.
Laxmi News 24×7