ಜು.8 ರಿಂದ 120 ದಿನಗಳ ಕಾಲ ಮುಂಗಾರು ಹಂಗಾಮಿಗೆ ನೀರು ಹರಿಸಲು ತೀರ್ಮಾನ
ಬೆಂಗಳೂರಿನ ವಿಕಾಸಸೌಧದಲ್ಲಿ ಮಂಗಳವಾರ ಅಬಕಾರಿ ಸಚಿವರೂ ಆದ ಐಸಿಸಿ ಅಧ್ಯಕ್ಷ ಆರ್.ಬಿ. ತಿಮ್ಮಾಪುರ ಅಧ್ಯಕ್ಷತೆಯಲ್ಲಿ ಮೇಲ್ದಂಡೆ ಯೋಜನೆ (ಯುಕೆಪಿ)ಯ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ (ಐಸಿಸಿ) ಸಭೆ ನಡೆಯಿತು. ಈ ಸಭೆಯಲ್ಲಿ ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಎಲ್ಲಾ ಕಾಲುವೆಗಳಿಗೆ ಕೃಷಿ ಚಟುವಟಿಕೆಗಾಗಿ ಜುಲೈ 8 ರಿಂದ 120 ದಿನಗಳ ಕಾಲ ಮುಂಗಾರು ಹಂಗಾಮಿಗೆ ನೀರು ಹರಿಸಲು ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ)ಯ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ (ಐಸಿಸಿ) ನಿರ್ಣಯಿಸಲಾಗಿದೆ.
ಇದೇ ಮೊದಲ ಬಾರಿಗೆ ಜುಲೈನಲ್ಲೇ ಕಾಲುವೆಗೆ ನೀರು ಬಿಡಲಾಗುತ್ತಿದೆ. ಮುಂದಿನ ಒಂದು ವಾರಗಳ ಕಾಲ ಕಾಲುವೆಗಳ ಸ್ವಚ್ಛತೆ ಕಾರ್ಯ ಕೈಗೊಳ್ಳಬೇಕು, ಏತ ನೀರಾವರಿ ಯೋಜನೆಗಳಿದ್ದರೆ, ಅವುಗಳ ಪಂಪ್ ಸೆಟ್ ದುರಸ್ತಿ ಮತ್ತಿತರ ನಿರ್ವಹಣೆಯ ಕಾರ್ಯ ಕೈಗೊಳ್ಳಬೇಕು, ಜುಲೈ 8 ರೊಳಗೆ ಕಾಲುವೆಗೆ ನೀರು ಹರಿಸಲು ಕಾಲುವೆಗಳನ್ನು ಸಿದ್ಧಗೊಳಿಸಿಕೊಳ್ಳಬೇಕು, ರೈತರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಸೂಚಿಸಲಾಯಿತು.
ಸದ್ಯ ಆಲಮಟ್ಟಿ ಜಲಾಶಯದಲ್ಲಿ 87 ಟಿಎಂಸಿ ಅಡಿ ಹಾಗೂ ನಾರಾಯಣಪುರ ಜಲಾಶಯ 26 ಟಿಎಂಸಿ ಅಡಿ ನೀರು ಸಂಗ್ರಹವಿದೆ. ಎರಡು ಜಲಾಶಯಗಳಲ್ಲಿ ಬಳಕೆ ಯೋಗ್ಯ 91 ಟಿಎಂಸಿ ಅಡಿ ನೀರಿದೆ. ಸದ್ಯಕ್ಕೆ ಮುಂಗಾರು ಹಂಗಾಮಿಗೆ ನೀರು ಹರಿಸಲು ಯಾವುದೇ ತೊಂದರೆಯಿಲ್ಲ ಎಂದು ಸಭೆಗೆ ಅಧಿಕಾರಿಗಳು ತಿಳಿಸಿದರು.
ಮುಂಗಾರು ಮಳೆಯ ಅಬ್ಬರ ಹೆಚ್ಚಾಗಿದ್ದು, ಜಲಾಶಯಕ್ಕೆ ಒಳಹರಿವು ನಿತ್ಯವೂ ಇದೆ. ಹೀಗಾಗಿ ಕಾಲುವೆಗೆ ಸದ್ಯಕ್ಕೆ ಯಾವುದೇ ವಾರಾಬಂಧಿ ಇಲ್ಲದೇ ನಿರಂತರ ನೀರು ಹರಿಸಲು ನಿರ್ಧರಿಸಲಾಗಿದೆ. ನೀರಿನ ಮಿತವ್ಯಯ ಬಳಕೆಯ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಸಲು ಸಭೆಯಲ್ಲಿ ನಿರ್ಣಯಿಸಲಾಗಿದೆ.
Laxmi News 24×7