ಬೆಂಗಳೂರು: ವಂದೇ ಭಾರತ್ ರೈಲುಗಳಲ್ಲಿ ಪ್ರಯಾಣಿಕರ ಗಮನ ಸೆಳೆದು ಕ್ಷಣಾರ್ಧದಲ್ಲಿ ದುಬಾರಿ ಬೆಲೆಯ ಮೊಬೈಲ್ ಕಳ್ಳತನ ಮಾಡಿದ್ದ ಆರೋಪಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಸೂರಜ್ ಪಾಸ್ವನ್ ಬಂಧಿತ ಆರೋಪಿ. ಈತನಿಂದ 28 ಲಕ್ಷ ಮೌಲ್ಯದ 13 ಐ-ಫೋನ್ ಸೇರಿದಂತೆ ವಿವಿಧ ಕಂಪನಿಗಳ 49 ಮೊಬೈಲ್ಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ಕೃತ್ಯದಲ್ಲಿ ಮೂವರು ಪ್ರಮುಖ ಆರೋಪಿಗಳು ಭಾಗಿಯಾಗಿ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ಧಾರೆ.
ಕಳೆದ ಏಳು ತಿಂಗಳ ಹಿಂದೆ ನಗರಕ್ಕೆ ಬಂದಿದ್ದ ಆರೋಪಿಯು ಮಾರತ್ ಹಳ್ಳಿಯಲ್ಲಿ ವಾಸವಾಗಿದ್ದ. ಅಕ್ರಮವಾಗಿ ಹಣ ಸಂಪಾದಿಸಲು ಪೂರ್ಣ ಪ್ರಮಾಣದಲ್ಲಿ ಕಳ್ಳತನ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ. ಬೆಂಗಳೂರು ನಗರದಿಂದ ಹೊರಡುವ ವಂದೇ ಭಾರತ್ ಹಾಗೂ ವಿಶೇಷ ಎಕ್ಸ್ಪ್ರೆಸ್ ರೈಲುಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡಿದ್ದ. ಸಾಮಾನ್ಯ ರೈಲುಗಳಿಗೆ ಹೋಲಿಸಿದರೆ ವಂದೇ ಭಾರತ್ ರೈಲಿನ ಪ್ರಯಾಣ ದರ ಹೆಚ್ಚಿದೆ. ಇಲ್ಲಿ ಪ್ರಯಾಣಿಸುವ ಪ್ರಯಾಣಿಕರ ಬಳಿ ದುಬಾರಿ ಬೆಲೆಯ ಮೊಬೈಲ್ ಇರಲಿದೆ. ಇದೇ ಕಾರಣಕ್ಕಾಗಿ ಈ ರೈಲುಗಳಲ್ಲಿ ಸಂಚರಿಸಿ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ಧಾರೆ.
ಜೂನ್ 2 ರಂದು ಸಂಗಮೇಶ್ ಎಂಬುವರು ಬೆಂಗಳೂರು ನಗರ ರೈಲು ನಿಲ್ದಾಣದಿಂದ ವಿಜಯಪುರಕ್ಕೆ ತೆರಳಲು ಗೋಲ್ ಗುಂಬಜ್ ಎಕ್ಸ್ ಪ್ರೆಸ್ ರೈಲಿಗೆ ಹತ್ತುವಾಗ ಪ್ರಯಾಣಿಕರ ದಟ್ಟಣೆ ವೇಳೆ ಜೇಬಿನಲ್ಲಿದ್ದ 61 ಸಾವಿರ ಮೊಬೈಲ್ನ್ನು ಆರೋಪಿ ಕಳ್ಳತನ ಮಾಡಿದ್ದ. ಈ ಸಂಬಂಧ ದೂರು ನೀಡಿದ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಸಿಸಿಟಿವಿ ಪರಿಶೀಲಿಸಿದಾಗ ಚೋರನ ಕೃತ್ಯ ಸೆರೆಯಾಗಿತ್ತು. ಇದೇ ಆಧಾರದ ಮೇರೆಗೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ರೈಲ್ವೆ ಎಸ್ಪಿ ಸೌಮ್ಯಲತಾ ಹೇಳಿದ್ಧಾರೆ.
Laxmi News 24×7