ರಾಮನಗರ: ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ, ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಓರ್ವನಿಗೆ ತೀವ್ರ ಗಾಯಗಳಾದ ಘಟನೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ.
ಬೆಂಗಳೂರು-ಮೈಸೂರು ಹೆದ್ದಾರಿಯ ಜಯಪುರ ಬ್ರಿಡ್ಜ್ ಬಳಿ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದರೆ, ಗಂಭೀರ ಗಾಯಗೊಂಡ ಮತ್ತೋರ್ವನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರೆಲ್ಲರೂ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ಮೂಲದವರಾಗಿದ್ದಾರೆ. ಮೃತರನ್ನು ಮುತ್ತುರಾಜು (55), ತಮ್ಮನಗೌಡ (27), ಹಾಗೂ ಕಾರು ಚಾಲಕ ಸಚಿನ್ (27) ಎಂದು ಗುರುತಿಸಲಾಗಿದೆ. ಸಂಜು (28) ಎಂಬಾತನಿಗೆ ಚಿಕಿತ್ಸೆ ಮುಂದುವರೆದಿದೆ. ಸ್ವಿಫ್ಟ್ ಕಾರು ಮೈಸೂರಿನಿಂದ ಬೆಂಗಳೂರು ಕಡೆ ಹೋಗುತ್ತಿತ್ತು.
ಕಾರು ಗುದ್ದಿದ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜಾಗಿದೆ. ನಿದ್ದೆ ಮಂಪರಿನಲ್ಲಿದ್ದ ಚಾಲಕ ನಿಯಂತ್ರಣ ಕಳೆದುಕೊಂಡು ತಡೆಗೋಡೆಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗುತ್ತಿದೆ. ಸ್ಥಳಕ್ಕೆ ರಾಮನಗರ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಕೈಗೊಂಡಿದ್ದಾರೆ.
Laxmi News 24×7