ಬೆಂಗಳೂರು, ಆಗಸ್ಟ್ 5: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಮುಷ್ಕರ (Karnataka Transport Strike) ಆರಂಭಿಸಿದ್ದಾರೆ. ಇದರಿಂದಗಿ ಸಾರ್ವಜನಿಕರಿಗೆ ಆತಂಕ ಶುರುವಾಗಿದೆ. ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ಗಳನ್ನೇ (BMTC, KSRTC Buses) ಅವಲಂಬಿಸಿರುವ ಜನರು ಕೆಲಸಗಳಿಗೆ, ಶಾಲೆಗಳಿಗೆ ಕಾಲೇಜುಗಳಿಗೆ ಹೋಗಲು ಪರದಾಡಬೇಕಾದ ಆತಂಕದಲ್ಲಿದ್ದಾರೆ. ಹೀಗಿದ್ದರೂ, ಯಾವುದೇ ಚಿಂತೆ ಬೇಡ ಎಂದು ಸಾರ್ವಜನಿಕರಿಗೆ ರಾಜ್ಯ ಸರ್ಕಾರ ಅಭಯ ನೀಡಿದೆ. ಯಾಕೆಂದರೆ, ಸಾರಿಗೆ ನಿಗಮಗಳು ತಮ್ಮದೇ ಆದ ವ್ಯವಸ್ಥೆಗಳನ್ನು ಮಾಡಿಕೊಂಡಿವೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಸಾರಿಗೆ ನೌಕರರ ಮುಷ್ಕರದ ಬಿಸಿ ಭಾಗಶಃ ತಟ್ಟಿದೆ. ಹಲವೆಡೆ ಬಸ್ಗಳು ಸಂಚರಿಸುತ್ತಿವೆ. ಏರ್ಪೋರ್ಟ್ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗಿಲ್ಲ. ಆದರೆ, ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಯಶವಂತಪುರ ಬಸ್ ನಿಲ್ದಾಣಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರ ಆರಂಭವಾಗಿಲ್ಲ.
ಸಾರ್ವನಿಕರಿಗೆ ತೊಂದರೆ ತಪ್ಪಿಸಲು ಸಾರಿಗೆ ಇಲಾಖೆ ಕ್ರಮಗಳೇನು?
- ಐಟಿ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ಗೆ ಸೂಚನೆ
- ಖಾಸಗಿ ಶಾಲಾ ವ್ಯಾನ್ಗಳಲ್ಲಿ ಸರ್ಕಾರಿ ಶಾಲೆ ಮಕ್ಕಳಿಗೆ ಅವಕಾಶ
- ಹೆಚ್ಚುವರಿ ಟ್ರಿಪ್ ಮೆಟ್ರೋ ರೈಲುಗಳನ್ನ ನಿಯೋಜಿಸಲು ಸೂಚನೆ
- ರೈಲ್ವೆ ಇಲಾಖೆಯು ಒಳ ಜಿಲ್ಲೆ ರೈಲುಗಳ ಸಂಚಾರ ಹೆಚ್ಚಿಸಬೇಕು
- ಡಿಸಿ, ಎಸ್ಪಿಗಳು ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕು
ರಾಜ್ಯ ಸರ್ಕಾರದ ಈ ಸೂಚನೆ ಬೆನ್ನಲ್ಲೇ ಹಲವು ಜಿಲ್ಲೆಗಳಲ್ಲಿ ಪರ್ಯಾಯ ವ್ಯವಸ್ಥೆಯನ್ನು ಸಾರಿಗೆ ನಿಗಮಗಳು ಮಾಡಿಕೊಂಡಿವೆ. ಬೆಂಗಳೂರಿನಲ್ಲಿ ಸಾರಿಗೆ ಮುಷ್ಕರದಿಂದಾಗಿ ಬಿಎಂಟಿಸಿ ಬಸ್ಗಳ ಸಂಚಾರ ಭಾಗಶಃ ಸ್ಥಗಿತವಾಗಿದೆ. ಹೀಗಾಗಿ, ಬೆಂಗಳೂರು ಒಂದರಲ್ಲೇ 4 ಸಾವಿರ ಖಾಸಗಿ ಬಸ್ಗಳನ್ನ ನೀಡುವಂತೆ ಖಾಸಗಿ ಬಸ್ ಮಾಲೀಕರ ಸಂಘಕ್ಕೆ ಸಾರಿಗೆ ಆಯುಕ್ತರು ಬೇಡಿಕೆ ಇಟ್ಟಿದ್ದಾರೆ. ರಾಜ್ಯಾದ್ಯಂತ 11 ಸಾವಿರ ಬಸ್ ಕೇಳಿದ್ದಾರೆ. ಆದರೆ, ಇನ್ನೂ ಅಂತಿಮಗೊಳಿಸಿಲ್ಲ ಎಂದು ಖಾಸಗಿ ಬಸ್ ಮಾಲೀಕರ ಸಂದ ನಟರಾಜ್ ಶರ್ಮಾ ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಬುಧವಾರಕ್ಕೆ ಬಸ್ ನೀಡುವಂತೆ ಕೋರಿದ್ದಾರೆ ಎಂದಿರುವುದು ಹೊಸ ಗೊಂದಲ ಸೃಷ್ಟಿಸಿದೆ.
Laxmi News 24×7