ಬೆಂಗಳೂರು: ಮಳೆಗಾಲದ ಅಧಿವೇಶನದ ಮೊದಲ ದಿನವೇ ಮೈತ್ರಿ ಪಕ್ಷಗಳು ಸರ್ಕಾರಕ್ಕೆ ಹೋರಾಟದ ಮೂಲಕ ಬಿಸಿ ಮುಟ್ಟಿಸಿದವು. ಕಾಲ್ತುಳಿತ ದುರಂತದ ಹೊಣೆಯನ್ನು ಸರ್ಕಾರವೇ ಹೊರಬೇಕು ಎಂದು ಆಗ್ರಹಿಸಿ ಇಂದು ಬೆಳಗ್ಗೆ ಸದನ ಆರಂಭಕ್ಕೂ ಮುನ್ನ ಬಿಜೆಪಿ-ಜೆಡಿಎಸ್ ಶಾಸಕರು, ಪರಿಷತ್ ಸದಸ್ಯರು ಪ್ರತಿಭಟನೆ ನಡೆಸಿದರು.
ಈ ಎಲ್ಲ ನಾಯಕರ ನೇತೃತ್ವದಲ್ಲಿ ಪ್ರತಿಭಟನೆ: ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಜೆಡಿಎಸ್ ವಿರೋಧ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದಲ್ಲಿ ಇಂದು ಬೆಳಗ್ಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟಿಸಿದರು. ಸರ್ಕಾರದ ವಿರುದ್ಧ ಭಿತ್ತಿಪತ್ರಗಳನ್ನು ಪ್ರದರ್ಶನ ಮಾಡಿ ವಿಪಕ್ಷ ನಾಯಕರು ಘೋಷಣೆಗಳನ್ನು ಕೂಗಿದರು.

ಇದು ರೈತ, ಅಭಿವೃದ್ಧಿ ವಿರೋಧಿ ಸರ್ಕಾರ: ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರ ಮೇಲೆ ತಪ್ಪು ಹೊರೆಸಿ ಜವಾಬ್ದಾರಿಯಿಂದ ಸರ್ಕಾರ ನುಣುಚಿಕೊಂಡಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ದಲಿತರ ಹಣ ದುರ್ಬಳಕೆ ಮಾಡಿದೆ, ರಸಗೊಬ್ಬರ ಅಭಾವ ಎದುರಾಗಿದೆ, ಕೊಲೆ, ಅತ್ಯಾಚಾರ ಚಟುವಟಿಕೆ ಹೆಚ್ಚಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದು ರೈತ ವಿರೋಧಿ, ಅಭಿವೃದ್ಧಿ ವಿರೋಧಿ ಸರ್ಕಾರ ಎಂದು ವಿಪಕ್ಷ ನಾಯಕರು ವಾಗ್ದಾಳಿ ನಡೆಸಿದರು. ಸದನದಲ್ಲಿ ಸರ್ಕಾರದ ವೈಫಲ್ಯಗಳನ್ನು ಪ್ರಸ್ತಾಪಿಸಿ ಪರಿಣಾಕಾರಿಯಾಗಿ ಹೋರಾಟ ಮಾಡೋದಾಗಿ ತಿಳಿಸಿದರು.
ಹುಳುಕು ಮುಚ್ಚಿ ಹಾಕಿಕೊಳ್ಳಲು ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ: ಈ ಸಂದರ್ಭದಲ್ಲಿ ಮಾತನಾಡಿದ ಆರ್.ಅಶೋಕ್ ಮತ್ತು ಬಿ.ವೈ.ವಿಜಯೇಂದ್ರ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆದ ಕಾಲ್ತುಳಿತ ಪ್ರಕರಣದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹಸಚಿವರು, ಸಚಿವರು ಜವಾಬ್ದಾರಿ ತೆಗೆದುಕೊಳ್ಳಬೇಕಿತ್ತು. ಅದನ್ನು ಬಿಟ್ಟು ಅಮಾಯಕ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಅಮಾನತು ಮಾಡಿದ್ದಾರೆ ಎಂದು ಟೀಕಿಸಿದರು. ಇವರ ಹುಳುಕು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡರು ಎಂದು ಆರೋಪಿಸಿದರು.
ರಸಗೊಬ್ಬರ ಕೊರತೆ, ಬೀದಿಗಿಳಿದು ಹೋರಾಟ ಮಾಡ್ತೇವಿ ಎಂದ ಪ್ರತಿಪಕ್ಷಗಳು: ರಸಗೊಬ್ಬರ ಕೊರತೆಯಿಂದ ರೈತರು ರಾಜ್ಯದಲ್ಲಿ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಪರಿಹಾರ ನೀಡುತ್ತಿಲ್ಲ. ಇದರ ಕುರಿತು ಚರ್ಚೆಯೂ ಆಗುತ್ತಿಲ್ಲ. ಈ ಎಲ್ಲ ವಿಷಯಗಳನ್ನು ಸದನದಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಿದ್ದೇವೆ. ಸಾಂಕೇತಿಕವಾಗಿ ಎರಡೂ ಪಕ್ಷಗಳ ಶಾಸಕರು ಹೋರಾಟ ಮಾಡಿದ್ದೇವೆ ಎಂದು ವಿವರಿಸಿದರು.
Laxmi News 24×7