ಬೆಂಗಳೂರು: ಡ್ರಗ್ಸ್ ಮುಕ್ತ ಕರ್ನಾಟಕ ಮಾಡುವುದು ರಾಜ್ಯ ಸರ್ಕಾರದ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದೇವೆ. ಒಂದು ವರ್ಷದಲ್ಲಿ ಡ್ರಗ್ಸ್ ನಿರ್ಮೂಲನೆ ಸಾಧ್ಯವಿಲ್ಲ. ಈ ಪಿಡುಗಿನ ವಿರುದ್ಧ ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ 14,485 ಡ್ರಗ್ಸ್ ಪ್ರಕರಣ ದಾಖಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪರಿಷತ್ನಲ್ಲಿ ಮಾಹಿತಿ ನೀಡಿದ್ಧಾರೆ.
ಇಂದು ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಮಾತನಾಡಿ, ರಾಜ್ಯದಲ್ಲಿ ಇಂದು ಡ್ರಗ್ಸ್ ಮಹಾಹೆಮ್ಮಾರಿಯಾಗಿ ಪರಿಣಮಿಸಿದೆ. ಹಳ್ಳಿ-ಹಳ್ಳಿಗಳಲ್ಲಿ ಮಾದಕವಸ್ತುವಿನ ಜಾಲ ತಲುಪಿದೆ. ಕೊರಿಯರ್ ಮೂಲಕ ಡ್ರಗ್ಸ್ ಸಾಗಾಟವಾಗುತ್ತಿದೆ. ಈ ಬಗ್ಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು? ಎಂದು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಸಚಿವರು, ಡ್ರಗ್ಸ್ ಜಾಲದ ವಿರುದ್ಧ ನಿರಂತರವಾಗಿ ಸಮರ ಸಾರುತ್ತಿದ್ದೇವೆ. ಎನ್ಡಿಪಿಎಸ್ ಅಡಿಯಲ್ಲಿ ಕಳೆದ ಮೂರು ವರ್ಷಗಳಲ್ಲಿ 14,485 ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಪೈಕಿ 5,304 ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ. ಇನ್ನುಳಿದ ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. ವೈಜ್ಞಾನಿಕ ಸಾಕ್ಷ್ಯಗಳ ಕೊರತೆ, ತನಿಖಾ ನ್ಯೂನತೆಗಳು ಸೇರಿದಂತೆ ವಿವಿಧ ಕಾರಣಗಳಿಗಾಗಿ ಆರೋಪಿಗಳಿಗೆ ಶಿಕ್ಷೆ ಕೊಡಿಸುವಲ್ಲಿ ವೈಫಲ್ಯವಾಗುತ್ತಿದೆ ಎಂದು ಸಚಿವರು ಉತ್ತರದಲ್ಲಿ ತಿಳಿಸಿದ್ಧಾರೆ.
ಕಳೆದ ಮೂರು ವರ್ಷಗಳಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ 318 ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಈ ಪೈಕಿ 200 ಮಂದಿಯನ್ನು ದೇಶದಿಂದ ಗಡಿಪಾರು ಮಾಡಲಾಗಿದೆ. ಆಯಾ ಠಾಣಾ ವ್ಯಾಪ್ತಿಯ ಪೊಲೀಸರು ಕಡ್ಡಾಯವಾಗಿ ತಿಂಗಳಿಗೊಮ್ಮೆ ಕಾಲೇಜಿಗೆ ತೆರಳಿ ಡ್ರಗ್ಸ್ ಬಗ್ಗೆ ಜಾಗೃತಿ ಮೂಡಿಸುವಂತೆ ಸೂಚನೆ ನೀಡಿದ್ದೇನೆ. ಆ್ಯಂಟಿ ಡ್ರಗ್ ಕ್ಯಾಂಪೇನ್ ಮೂಲಕ 15 ಲಕ್ಷ ವಿದ್ಯಾರ್ಥಿಗಳಿಗೆ ಈ ಬಗ್ಗೆ ಅರಿವು ಮೂಡಿಸಲಾಗಿದೆ. ಡ್ರಗ್ಸ್ ಪ್ರಕರಣಗಳನ್ನು ಬೇಧಿಸಲು ಪ್ರತ್ಯೇಕವಾಗಿ ನಾರ್ಕೋಟಿಕ್ ಕಂಟ್ರೋಲ್ ಬ್ಯೂರೊ ಸ್ಥಾಪಿಸಲಾಗಿದೆ ಎಂದಿದ್ದಾರೆ.
Laxmi News 24×7