ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇ.ಡಿ ಅಧಿಕಾರಿಗಳು ಆರೋಪಿಯನ್ನು ಇಂದು ಜನಪ್ರತಿನಿಧಿಗಳ ನ್ಯಾಯಾಲಯ ಮುಂದೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್, ವೀರೇಂದ್ರ ಅವರನ್ನು ಮತ್ತೆ 6 ದಿನಗಳ ಕಾಲ ಇ.ಡಿ ವಶಕ್ಕೆ ನೀಡಿ ಆದೇಶಿಸಿತು.
ಕೆ.ಸಿ.ವೀರೇಂದ್ರ ಅವರು ಆನ್ಲೈನ್ ಹಾಗೂ ಆಫ್ಲೈನ್ ಮೂಲಕ ಅಕ್ರಮ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿಸಿಕೊಂಡಿರುವ ಆರೋಪದ ಮೇಲೆ ನಡೆದ ದಾಳಿ ವೇಳೆ ಅಪಾರ ಪ್ರಮಾಣ ನಗದು ಸೇರಿದಂತೆ ಮಹತ್ವದ ದಾಖಲಾತಿಗಳು ಪತ್ತೆಯಾಗಿದ್ದವು. ಶೋಧ ಕಾರ್ಯಾಚರಣೆ ವೇಳೆ ಕೆಲವರು ಪರಾರಿಯಾಗಿದ್ದಾರೆ. ಸಿಕ್ಕಿರುವ ಹಣದ ಮೂಲದ ಬಗ್ಗೆ ತನಿಖೆ ನಡೆಸುವ ಅಗತ್ಯವಿದೆ. ಹೀಗಾಗಿ 14 ದಿನಗಳ ಕಾಲ ಇ.ಡಿ ವಶಕ್ಕೆ ನೀಡುವಂತೆ ಎಸ್ಪಿಪಿ ಪ್ರಮೋದ್ ಚಂದ್ರ ಅವರು ಮನವಿ ಮಾಡಿದರು.
ಇದಕ್ಕೆ ಆಕ್ಷೇಪಿಸಿದ ಆರೋಪಿ ಪರ ವಕೀಲ ಕಿರಣ್ ಜವಳಿ, ತಮ್ಮ ಕಕ್ಷಿದಾರರನ್ನು ಇ.ಡಿ ಅಧಿಕಾರಿಗಳು ಬಂಧನಕ್ಕೆ ಸೂಕ್ತ ಕಾರಣ ನೀಡಿಲ್ಲ. ಗ್ರೌಂಡ್ಸ್ ಆಫ್ ಅರೆಸ್ಟ್ನಲ್ಲಿ ಸೂಚಿಸಿರುವ ಪ್ರಕರಣಗಳು ವಿಚಾರಣೆ ಹಂತದಲ್ಲಿಲ್ಲ. ಈ ಮೂಲಕ ನ್ಯಾಯಾಲಯಕ್ಕೆ ಅಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದಾರೆ. ವೀರೇಂದ್ರ ಅವರನ್ನು ಇ.ಡಿ ಕಚೇರಿಯಲ್ಲಿ ಕೂಡಿ ಹಾಕಿ ವಿಚಾರಣೆ ಮಾಡುತ್ತಿದ್ದಾರೆ. ರಾತ್ರಿ 3 ಗಂಟೆವರೆಗೆ ವಿಚಾರಣೆ ಮಾಡುವ ಮೂಲಕ ಕಿರುಕುಳ ನೀಡಿದ್ಧಾರೆ. ಸುಪ್ರೀಂ ಕೋರ್ಟ್ನ ಮಾರ್ಗಸೂಚಿ ಅನುಸರಿಸಿಲ್ಲ. ಹೀಗಾಗಿ ಜಾಮೀನು ಅರ್ಜಿಯನ್ನು ಪುರಸ್ಕರಿಸಬೇಕೆಂದು ಮನವಿ ಮಾಡಿದರು.
ವಾದ ಆಲಿಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಗ್ರೌಂಡ್ಸ್ ಆಫ್ ಅರೆಸ್ಟ್ ಬಗ್ಗೆ ತೋರಿಸಿರುವ ಪ್ರಕರಣಗಳ ಬಗ್ಗೆ ಆಕ್ಷೇಪಿಸಿದರು. ಅರ್ಜಿದಾರರ ವಿರುದ್ಧ 2011ರಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆ ಮುಗಿದಿದೆ. 2016ರಲ್ಲಿ ಪ್ರಕರಣವನ್ನು ಸಿಬಿಐ ತನಿಖೆ ಮುಗಿಸಿದೆ. ಯಾವ ಆಧಾರದ ಮೇರೆಗೆ ಇಸಿಐಆರ್ ಮಾಡಿದ್ದೀರಾ ಎಂದು ಪ್ರಶ್ನಿಸಿದರು. ವಿದೇಶಿ ಹಣಕಾಸು ವ್ಯವಹಾರದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ದಾಖಲಾತಿಗಳು ಪತ್ತೆಯಾಗಿವೆ. ವಶಕ್ಕೆ ಪಡೆದುಕೊಂಡಿರುವ ಬಗ್ಗೆ ಕೋಟ್ಯಂತರ ರೂಪಾಯಿ ಹಣದ ಮೂಲದ ಬಗ್ಗೆ ಪ್ರಶ್ನಿಸಬೇಕಿದೆ. ಹೀಗಾಗಿ ಪೊಲೀಸ್ ವಶಕ್ಕೆ ನೀಡುವಂತೆ ಎಸ್ಪಿಪಿ ಮನವಿ ಮಾಡಿದರು.
Laxmi News 24×7