ಬೆಂಗಳೂರು: ಆನ್ಲೈನ್ ಮತ್ತು ಆಫ್ಲೈನ್ ಅಕ್ರಮ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಸಮನ್ಸ್ ಜಾರಿಗೊಳಿಸದೆ, ನಿಯಮಗಳನ್ನು ಉಲ್ಲಂಘಿಸಿ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಅವರನ್ನು ಹಣ ಅಕ್ರಮ ವರ್ಗಾವಣೆ ತಡೆ (ಪಿಎಂಎಲ್) ಕಾಯ್ದೆಯಡಿ ಜಾರಿ ನಿರ್ದೇಶನಾಲಯ ಬಂಧಿಸಿದೆ ಎಂದು ವೀರೇಂದ್ರ ಪತ್ನಿ ಆರ್.ಡಿ.ಚೈತ್ರಾ ಪರ ವಕೀಲರು ಹೈಕೋರ್ಟ್ಗೆ ತಿಳಿಸಿದ್ದಾರೆ.
ಚಿತ್ರದುರ್ಗದ ಶಾಸಕರಾದ ತಮ್ಮ ಪತಿ ಕೆ.ಸಿ.ವೀರೇಂದ್ರ ಅವರನ್ನು ಪಿಎಂಎಲ್ ಕಾಯ್ದೆಯಡಿ ಜಾರಿ ನಿರ್ದೇಶನಾಲಯವು ಬಂಧಿಸಿರುವ ಕ್ರಮ ಕಾನೂನು ಬಾಹಿರ ಎಂದು ಘೋಷಿಸುವಂತೆ ಕೋರಿ ಚೈತ್ರಾ ಅರ್ಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರ ಪೀಠಕ್ಕೆ ಅರ್ಜಿದಾರರ ಪರ ವಕೀಲರು ವಿವರಿಸಿದರು.
2022ರ ಪ್ರಕರಣದ ಆರೋಪಪಟ್ಟಿಯಲ್ಲಿ ವೀರೇಂದ್ರ ಹೆಸರಿಲ್ಲ: ಇದಕ್ಕೂ ಮುನ್ನ, ವೀರೇಂದ್ರ ವಿರುದ್ಧ 2011ರ ಕ್ರಿಕೆಟ್ ಬೆಟ್ಟಿಂಗ್ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆ ಪ್ರಕರಣದ ಆರೋಪಗಳಿಂದ 2014ರಲ್ಲಿ ಅವರು ಖುಲಾಸೆಯಾಗಿದ್ದರು. ಇದೇ ಪ್ರಕರಣ ಸಂಬಂಧ 2015ರ ಮತ್ತೊಂದು ಎಫ್ಐಆರ್ ಅನ್ನು ಹೈಕೋರ್ಟ್ ರದ್ದು ಮಾಡಿದೆ. 2016ರಲ್ಲಿ ದಾಖಲಾದ ಪ್ರಕರಣದಲ್ಲಿ ಕೆ.ಸಿ.ವೀರೇಂದ್ರ ಅವರು ಆರೋಪಿಯಾಗಿರಲಿಲ್ಲ. 2022ರ ದಾಖಲಾದ ಪ್ರಕರಣ ಸಂಬಂಧ ಆರೋಪಪಟ್ಟಿಯಲ್ಲಿ ವೀರೇಂದ್ರ ಅವರ ಹೆಸರನ್ನು ಕೈಬಿಡಲಾಗಿತ್ತು. ಮತ್ತೆರಡು ಪ್ರಕರಣಗಳು 2024ರಲ್ಲಿ ಮುಕ್ತಾಯಗೊಂಡಿವೆ ಎಂದು ವಕೀಲರು ತಿಳಿಸಿದರು.
ಬಂಧನಕ್ಕೆ ಸೂಕ್ತ ಕಾರಣ ನೀಡಿಲ್ಲ: ಅಲ್ಲದೆ, ವೀರೇಂದ್ರ ಅವರು ಸಿಕ್ಕಿಂನಲ್ಲಿ ಇದ್ದಾಗ ಮನೆ, ವ್ಯಾಪಾರ ಸ್ಥಳದಲ್ಲಿ ಇ.ಡಿ ದಾಳಿ ನಡೆಸಿದೆ. ಅಂದರೆ ವೀರೇಂದ್ರ ಅವರ ಅನುಪಸ್ಥಿತಿಯಲ್ಲಿ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ಮಾಡಲಾಗಿದೆ. ಪಿಎಂಎಲ್ ಕಾಯ್ದೆಯಡಿ ಯಾವುದೇ ಅನುಸೂಚಿತ ಪ್ರಕರಣ ಇಲ್ಲದಿದ್ದರೂ ವೀರೇಂದ್ರ ಅವರನ್ನು ಬಂಧಿಸಲಾಗಿದೆ. ಪಿಎಂಎಲ್ ಕಾಯ್ದೆಯಡಿ ಶಾಸಕರನ್ನು ಬಂಧಿಸುವ ಮುನ್ನ ಸಮನ್ಸ್ ನೀಡಬೇಕು. ಆದರೆ, ಈ ಪ್ರಕರಣದಲ್ಲಿ ಬಂಧನ ಮಾಡುವವರೆಗೂ ಸಮನ್ಸ್ ನೀಡಿಲ್ಲ. ಬಂಧನ ಮೆಮೊವನ್ನು ಸಕಾಲಕ್ಕೆ ನೀಡಿಲ್ಲ. ಯಾವ ಆಧಾರದಲ್ಲಿ ಬಂಧಿಸಲಾಗುತ್ತಿದೆ ಎಂಬುದಕ್ಕೆ ಸೂಕ್ತ ಕಾರಣ ನೀಡಿಲ್ಲ ಎಂದು ವಕೀಲರು ವಿವರಣೆ ಕೊಟ್ಟರು.
Laxmi News 24×7