ಬೆಂಗಳೂರು: ನಗರದಲ್ಲಿ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದ್ದು, ವಾರದಲ್ಲಿ ಎರಡು ದಿನ ವಿಶೇಷ ಗಸ್ತು ನಡೆಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ತಿಳಿಸಿದ್ದಾರೆ.
ಮಲ್ಲೆಶ್ವರದ 18ನೇ ಅಡ್ಡ ರಸ್ತೆಯಲ್ಲಿರುವ ಮೈದಾನದಲ್ಲಿ ಉತ್ತರ ವಿಭಾಗದ ಪೊಲೀಸರು ಹಮ್ಮಿಕೊಂಡಿದ್ದ ರಾಣಿ ಚೆನ್ನಮ್ಮ ಪಡೆ-ಮಹಿಳಾ ಜಾಗೃತಿ ಕಾರ್ಯಕ್ರಮಕ್ಕೂ ಮುನ್ನ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಸಾರ್ವಜನಿಕರಲ್ಲಿ ಸ್ಥೈರ್ಯ ಮೂಡಿಸಲು ನಗರದಾದ್ಯಂತ ಪೊಲೀಸರು ನಾಕಾಬಂದಿ ಹಾಕಿ ಪರಿಶೀಲಿಸುತ್ತಿದ್ದಾಗ ಮಾದಕ ವಸ್ತುಗಳು ಪತ್ತೆಯಾಗಿವೆ. ಅಲ್ಲದೇ ದಾಖಲೆ ಇಲ್ಲದ ಸಾವಿರಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಪತ್ತೆ ಹಚ್ಚಲಾಗಿದೆ. ಜನಸ್ನೇಹಿಯಾಗಿ ಪೊಲೀಸ್ ವ್ಯವಸ್ಥೆ ಬಲಪಡಿಸಲು ಕ್ರಮ ವಹಿಸಲಾಗಿದೆ. ನಗರದಲ್ಲಿ ಅಪರಾಧ ಚಟುವಟಿಕೆಗಳ ಕಡಿವಾಣಕ್ಕೆ ಗಸ್ತು ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್ ಠಾಣೆಯ ಎಲ್ಲಾ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದರು.
ಅಪರಾಧ ವಿಭಾಗದ ಪೊಲೀಸರಿಗೆ ನಗರದಲ್ಲಿ ಹೆಚ್ಚು ನಾಕಾಬಂಧಿ, ಗಸ್ತು ಹಾಗೂ ಏರಿಯಾ ಡೊಮಿನೇಷನ್ ಮಾಡುವಂತೆ, ರಾತ್ರಿ ಗಸ್ತು ಹೊರತುಪಡಿಸಿ ಹೆಚ್ಚುವರಿಯಾಗಿ ವಿಶೇಷ ಗಸ್ತು ಮಾಡಲು ಸಲಹೆ ನೀಡಿದ್ದಾರೆ. ಪ್ರತಿ ಮಂಗಳವಾರ ಹಾಗೂ ಗುರುವಾರ ಪೊಲೀಸ್ ಠಾಣಾ ವ್ಯಾಪ್ತಿಯ ಒಂದು ಏರಿಯಾವನ್ನು ಡೊಮಿನೇಷನ್ ಮಾಡಲು, ರಾತ್ರಿ 9 ಗಂಟೆಯಿಂದ 11 ಗಂಟೆಯ ಅಂತರದಲ್ಲಿ ತಪಾಸಣೆ ಮಾಡುವಂತೆ, ಪರಿಶೀಲನೆ ವೇಳೆ ಮಹಿಳೆಯರು ಮತ್ತು ಮಕ್ಕಳ ನಡುವೆ ಒಳ್ಳೆಯ ರೀತಿ ವರ್ತಿಸುವಂತೆ ಸೂಚಿಸಲಾಗಿದೆ.
ಅದೇ ರೀತಿ ಪ್ರತಿ ಶುಕ್ರವಾರ ಹಾಗೂ ಶನಿವಾರ ಕಾಲ್ನಡಿಗೆಯಲ್ಲಿ ಅತೀ ಸೂಕ್ಷ್ಮ ಹಾಗೂ ಜನಸಂದಣಿ ಏರಿಯಾದಲ್ಲಿ ಗಸ್ತು ತಿರುಗಲು ತಿಳಿಸಲಾಗಿದ್ದು, ಈ ಎಲ್ಲಾ ಚಟುವಟಿಕೆಗಳಲ್ಲಿ ಡಿಸಿಪಿಗಳು, ಎಸಿಪಿಗಳು ಮತ್ತು ಇನ್ಸ್ಸ್ಪೆಕ್ಟರ್ಗಳು ಭಾಗವಹಿಸುವಂತೆ ಈ ಬಗ್ಗೆ ಆಗಿಂದಾಗೆ ಕಂಟ್ರೊಲ್ ರೂಮ್ಗೆ ಮಾಹಿತಿ ನೀಡುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
Laxmi News 24×7