ಬೆಳಗಾವಿ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಬಳಿಕ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಈ ವೇಳೆ, ಬೆಳಗಾವಿಯಲ್ಲಿ ಅದ್ಧೂರಿಯಾಗಿ ಆಚರಿಸುವ ಕರ್ನಾಟಕ ರಾಜ್ಯೋತ್ಸವಕ್ಕೆ 2 ಕೋಟಿ ಅನುದಾನ ಸೇರಿ ವಿವಿಧ ಬೇಡಿಕೆಗಳ ಪಟ್ಟಿಯನ್ನು ಕನ್ನಡ ಹೋರಾಟಗಾರರು ಮುಖ್ಯಮಂತ್ರಿಗಳ ಮುಂದಿಟ್ಟರು.
ಬೇಡಿಕೆಗಳ ದೊಡ್ಡ ಪಟ್ಟಿಯನ್ನು ಸಿಎಂ ಮುಂದಿಟ್ಟ ಹೋರಾಟಗಾರರು: ಬೆಳಗಾವಿಯಲ್ಲಿ ನಡೆಯುವ ರಾಜ್ಯೋತ್ಸವ ರಾಜ್ಯದಲ್ಲಿಯೇ ಅತ್ಯಂತ ಅದ್ಧೂರಿಯಾಗಿ ನಡೆಯುವ ಉತ್ಸವವಾಗಿದ್ದು, ಬೆಳಗಾವಿ ರಾಜ್ಯೋತ್ಸವಕ್ಕೆ ಪ್ರತಿವರ್ಷ ಎರಡು ಕೋಟಿ ರೂ ಅನುದಾನ ನೀಡಬೇಕು. ಬೆಳಗಾವಿ ಜಿಲ್ಲೆಯ ಇಬ್ಬರು ಕನ್ನಡಪರ ಹೋರಾಟಗಾರರಿಗೆ ಪ್ರತಿ ವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು. ಕನ್ನಡಪರ ಹೋರಾಟಗಾರರ ಮೇಲೆ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ರದ್ದು ಮಾಡಬೇಕು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಬೇಕು. ಬೆಳಗಾವಿ ಜಿಲ್ಲೆ ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆಯಾಗಿದ್ದು ಇಲ್ಲಿ 500 ಹಾಸಿಗೆಯ ಹೈಟೆಕ್ ಹೆರಿಗೆ ಆಸ್ಪತ್ರೆ ಮಂಜೂರು ಮಾಡಬೇಕು. ಬೆಳಗಾವಿಯಲ್ಲಿ ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸುಸಜ್ಜಿತವಾತ ಹೆಚ್ಚುವರಿ ಹಾಸ್ಟೆಲ್ಗಳನ್ನು ಮಂಜೂರು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಕನ್ನಡ ಹೋರಾಟಗಾರರು ಮನವಿ ಮಾಡಿಕೊಂಡರು.

ವಿಶೇಷ ಅನುದಾನ ನೀಡುವಂತೆ ಒತ್ತಾಯ: ಕಿತ್ತೂರು ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಿ ವಿಶೇಷ ಅನುದಾನ ಒದಗಿಸಬೇಕು. ವಾಯವ್ಯ ಸಾರಿಗೆ ಸಂಸ್ಥೆಯ ಹೆಸರನ್ನು ಕಿತ್ತೂರು ಕರ್ನಾಟಕ ಸಾರಿಗೆ ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಬೇಕು. ಕಿತ್ತೂರು ಕರ್ನಾಟಕ ಭಾಗದಲ್ಲಿರುವ ಐಟಿ/ಬಿಟಿ ಮತ್ತು ಜವಳಿ ಪಾರ್ಕಗಳನ್ನು ನಿರ್ಮಿಸಿ ವಿಶೇಷ ಅನುದಾನ ನೀಡಿ ಕಾರ್ಯಗತಗೊಳಿಸಬೇಕು. ಸುವರ್ಣ ವಿಧಾನಸೌಧಕ್ಕೆ ವಿಭಾಗೀಯ ಕಚೇರಿಗಳನ್ನು ಸ್ಥಳಾಂತರಗೊಳಿಸಿ ಈ ಭಾಗದ ಜನ ಸಾಮಾನ್ಯರು ಬೆಂಗಳೂರು ಅಲೆದಾಡುವುದನ್ನು ತಪ್ಪಿಸಬೇಕು. ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಬೆಳವಡಿ ಮಲ್ಲಮ್ಮ. ಅಮಟೂರು ಬಾಳಪ್ಪ ಮತ್ತು ಸಿಂಧೂರ ಲಕ್ಷ್ಮಣರವರ ಪ್ರತಿಮೆಗಳನ್ನು ಪ್ರತಿಷ್ಠಾಪನೆ ಮಾಡಬೇಕು. ಕರ್ನಾಟಕ ಲಾಂಛನದಲ್ಲಿರುವ “ಸತ್ಯಮೇವ ಜಯತೆ” ವಾಕ್ಯವನ್ನು ಹಿಂದಿಯಿಂದ ಕನ್ನಡಕ್ಕೆ ಬದಲಾಯಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಕನ್ನಡ ಹೋರಾಟಗಾರರು ಮನವಿ ಸಲ್ಲಿಸಿದರು.

ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಅಹವಾಲು ಸ್ವೀಕಾರ (ETV Bharat)
ಬೆಳೆ ಹಾನಿಗೆ ಸೂಕ್ತ ಪರಿಹಾರ ಘೋಷಿಸಬೇಕು. ಕಬ್ಬಿಗೆ ಬೆಂಬಲ ಬೆಲೆ ನಿಗದಿ ಪಡಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ರೈತ ಸಂಘಟನೆ ಮುಖಂಡರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ನ್ಯಾಯವಾದಿಗಳು, ಹಕ್ಕಿಪಿಕ್ಕಿ ಸಮುದಾಯ ಸೇರಿ ವಿವಿಧ ಸಂಘಟನೆಗಳು ಮತ್ತು ಸಾರ್ವಜನಿಕರು ಸಿಎಂ ಸಿದ್ದರಾಮಯ್ಯ ಅವರ ಮುಂದೆ ತಮ್ಮ ಅಳಲು ತೋಡಿಕೊಂಡರು. ಈ ವೇಳೆ ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಆಸೀಫ್ ಸೇಠ್, ವಿಧಾನಪರಿಷತ್ ಸದಸ್ಯ ನಾಗರಾಜ ಯಾದವ ಇದ್ದರು.

ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಅಹವಾಲು ಸ್ವೀಕಾರ
Laxmi News 24×7