ಬೆಂಗಳೂರು: ಮೆಟ್ರೋ ರೈಲು ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಯಾಣಿಕ ವೀರೇಶ್ (35) ಸ್ಥಿತಿ ಗಂಭೀರವಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ವೀರೇಶ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಡಿ ಗ್ರೂಪ್ ನೌಕರನಾಗಿದ್ದ ವೀರೇಶ್, ಶನಿವಾರ ಮಧ್ಯಾಹ್ನ ಮೆಜೆಸ್ಟಿಕ್ನ ನಾಡಪ್ರಭು ಕೆಂಪೇಗೌಡ ನಿಲ್ದಾಣದಲ್ಲಿ ರೈಲು ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಗಾಯಾಳು ವೀರೇಶ್ಗೆ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ.
ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ನಿಂದ ಮಾಧವಾರ ಕಡೆಗೆ ಹೋಗುವ ರೈಲು ಪ್ಲಾಟ್ಫಾರ್ಮ್ – 3ನ್ನ ತಲುಪುತ್ತಿದ್ದಂತೆ ಹಳಿಗೆ ಜಿಗಿದಿದ್ದ ವೀರೇಶ್ ರೈಲಿನಡಿ ಸಿಲುಕಿದ್ದರು. ಕೂಡಲೇ ಅವರನ್ನು ರಕ್ಷಿಸಿ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.
ಪರಿಣಾಮ ಕೆಲಕಾಲ ನಮ್ಮ ಮೆಟ್ರೋದ ಹಸಿರು ಮಾರ್ಗದ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ರೇಷ್ಮೆ ಸಂಸ್ಥೆ ನಿಲ್ದಾಣದಿಂದ ನ್ಯಾಷನಲ್ ಕಾಲೇಜು ನಿಲ್ದಾಣ ಹಾಗೂ ರಾಜಾಜಿನಗರ ನಿಲ್ದಾಣದಿಂದ ಮಾಧವರ ನಿಲ್ದಾಣಗಳ ನಡುವೆ ಕೆಲಕಾಲ ಶಾರ್ಟ್ ಲೂಪ್ ಸೇವೆ ನಡೆಸಲಾಗಿದೆ. ಮಧ್ಯಾಹ್ನ 3:47ರಿಂದ ಸಾಮಾನ್ಯ ಸೇವೆಯನ್ನು ಪುನಾರಂಭಿಸಲಾಗಿತ್ತು.
ಒಂದೇ ಕುಟುಂಬದ ಮೂವರು ಆತ್ಮಹತ್ಯೆ (ಪ್ರತ್ಯೇಕ ಸುದ್ದಿ) : ಸಾಲಬಾಧೆಯಿಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿ, ಮೂವರು ಸಾವನ್ನಪ್ಪಿದ್ದು, ಅದೃಷ್ಟವಶಾತ್ ಓರ್ವ ಮಹಿಳೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿ ಗ್ರಾಮದಲ್ಲಿ ಸೆಪ್ಟಂಬರ್ 14, 2025 ರಂದು ನಡೆದಿತ್ತು.
ಸಾಲಬಾಧೆಯಿಂದ ಹೆದರಿದ ದಂಪತಿ ತನ್ನ ಇಬ್ಬರು ಮಕ್ಕಳನ್ನು ಸಾಯಿಸಿ ತಾವೂ ಆತ್ಮಹತ್ಯೆಯ ನಿರ್ಧಾರ ಮಾಡಿದ್ದರು. ಘಟನೆಯಲ್ಲಿ ಪತಿ, ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮಹಿಳೆ ಬದುಕುಳಿದಿದ್ದಾರೆ.
ಶಿವು (32), 11 ವರ್ಷದ ಮಗಳು ಮತ್ತು 7 ವರ್ಷದ ಮಗ ಸಾವನ್ನಪ್ಪಿದ್ದರು. ಶಿವು ಪತ್ನಿ ಮಂಜುಳಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಹಿಳೆಗೆ ಹೊಸಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಪೊಲೀಸರು ವಶಕ್ಕೆ ಪಡೆದಿದ್ದರು. ಘಟನೆ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವು ಅಪಘಾತದಲ್ಲಿ ಗಾಯಗೊಂಡಿದ್ದರು, ಅವರ ಚಿಕಿತ್ಸೆಗಾಗಿ ಸಾಲ ಮಾಡಿಕೊಂಡಿದ್ದರು. ಸಾಲ ಹೆಚ್ಚಾಗಿ ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ನಿರ್ಧಾರ ಮಾಡಿದ್ದರು. ನಾವು ಸತ್ತರೆ ಮಕ್ಕಳು ತಬ್ಬಲಿಗಳಾಗುತ್ತಾರೆ ಅಂತ ಮಕ್ಕಳನ್ನು ಸಾಯಿಸುವ ನಿರ್ಧಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.
Laxmi News 24×7