ಬೆಂಗಳೂರು: ಬಿಗ್ ಬಾಸ್ ದೊಡ್ಡ ಫ್ಯಾಕ್ಟರಿ ಏನಲ್ಲ. ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಬಗೆಹರಿಸಿಕೊಳ್ಳಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಇಂದು ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಬಿಗ್ ಬಾಸ್ ಬಗ್ಗೆ ರಾತ್ರಿನೇ ಡಿಸಿಗೆ ಫೋನ್ ಮಾಡಿ ಅವರಿಗೊಂದು ಅವಕಾಶ ಕೊಡಿ ಎಂದು ಹೇಳಿದ್ದೇನೆ. ನಿನ್ನೆ ಯಾರೋ ಬಂದಿದ್ರು, ಅವರಿಗೂ ಅದನ್ನೇ ಹೇಳಿದ್ದೇನೆ. ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮದ ಪ್ರಕಾರವೇ ಆಗಬೇಕಿದ್ದು, ಅದಕ್ಕೆ ಮಾರ್ಗಸೂಚಿ ಇದೆ ಎಂದರು.
ಸಿಎಂ ಡಿನ್ನರ್ ಮೀಟಿಂಗ್ ವಿಚಾರವಾಗಿ ಮಾತನಾಡಿ, ಅದರಲ್ಲಿ ತಪ್ಪೇನಿದೆ? ಎಂದು ಹೇಳಿದರು.
ಸಚಿವ ಸಂಪುಟ ಪುನರ್ ರಚನೆಯ ಕುರಿತ ಪ್ರಶ್ನೆಗೆ, “ನನಗೆ ಯಾವ ವಿಚಾರವೂ ಗೊತ್ತಿಲ್ಲ. ಅದೆಲ್ಲ ಮುಖ್ಯಮಂತ್ರಿಗಳಿಗೆ ಬಿಟ್ಟದ್ದು. ನಾನು ಯಾವುದಕ್ಕೂ ಬಾಯಿ ಹಾಕಲ್ಲ. ನಾನೇನು ಸಲಹೆ ಕೊಡಬೇಕೋ ಕೊಡ್ತೇನೆ. ಅನಗತ್ಯ ಗೊಂದಲ ಮಾಡುವುದು ಬೇಡ” ಎಂದು ತಿಳಿಸಿದರು.
ಬಿಗ್ಬಾಸ್ ಕುರಿತು ನಟ ಸುದೀಪ್ ಪ್ರತಿಕ್ರಿಯೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ದಕ್ಷಿಣದ ಜಿಲ್ಲಾಧಿಕಾರಿಗೆ ಬಿಗ್ ಬಾಸ್ ಕನ್ನಡ ಚಿತ್ರೀಕರಣ ನಡೆಯುತ್ತಿರುವ ಜಾಲಿವುಡ್ ಆವರಣದ ಮೇಲಿನ ಬೀಗ ಮುದ್ರೆಯನ್ನು ತೆಗೆಯುವಂತೆ ನಿರ್ದೇಶಿಸಿದ್ದು, ಶೋ ನಿರೂಪಕ ಕಿಚ್ಚ ಸುದೀಪ್ ಕೃತಜ್ಞತೆ ಸಲ್ಲಿಸಿದ್ದಾರೆ.
“ಸಮಯಕ್ಕೆ ಸರಿಯಾಗಿ ಬೆಂಬಲ ಸೂಚಿಸಿದ್ದಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನಾನು ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇತ್ತೀಚಿನ ಅವ್ಯವಸ್ಥೆ ಅಥವಾ ಅಡಚಣೆಗಳಲ್ಲಿ ಬಿಗ್ ಬಾಸ್ ಕನ್ನಡ ಭಾಗಿಯಾಗಿಲ್ಲ ಅಥವಾ ಭಾಗವಾಗಿರಲಿಲ್ಲ ಎಂಬುದನ್ನು ಒಪ್ಪಿಕೊಂಡಿದ್ದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಧನ್ಯವಾದ ಅರ್ಪಿಸಲು ಬಯಸುತ್ತೇನೆ. ನನ್ನ ಕರೆಗೆ ತಕ್ಷಣ ಸ್ಪಂದಿಸಿದ್ದಕ್ಕಾಗಿ ಡಿಸಿಎಂ ಅವರಿಗೆ ನಾನು ನಿಜವಾಗಿಯೂ ಕೃತಜ್ಞನಾಗಿದ್ದೇನೆ ಮತ್ತು ನಲ್ಪಾಡ್ ಅವರ ಸಮರ್ಪಿತ ಪ್ರಯತ್ನಗಳಿಗಾಗಿಯೂ ಬಹಳ ಧನ್ಯವಾದಗಳು. ಬಿಬಿಕೆ12 ಈಸ್ ಹಿಯರ್ ಟು ಸ್ಟೇ” ಎಂದು ಎಕ್ಸ್ ಪೋಸ್ಟ್ ಮಾಡಿದ್ದಾರೆ.
ಇದಕ್ಕೂ ಮುನ್ನ ಎಕ್ಸ್ ಪೋಸ್ಟ್ ಹಂಚಿಕೊಂಡಿದ್ದ ಡಿ.ಕೆ.ಶಿವಕುಮಾರ್, “ಬಿಗ್ ಬಾಸ್ ಕನ್ನಡ ಚಿತ್ರೀಕರಣ ನಡೆಯುತ್ತಿರುವ ಬಿಡದಿಯಲ್ಲಿರುವ ಜಾಲಿವುಡ್ ಆವರಣದ ಸೀಲ್ ತೆಗೆದುಹಾಕಲು ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿಗೆ ನಾನು ನಿರ್ದೇಶಿಸಿದ್ದೇನೆ. ಪರಿಸರ ರಕ್ಷಣೆ ಪ್ರಮುಖ ಆದ್ಯತೆಯಾಗಿದ್ದು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನಿಗದಿಪಡಿಸಿದ ಮಾನದಂಡಗಳಿಗೆ ಅನುಗುಣವಾಗಿ ಉಲ್ಲಂಘನೆಗಳನ್ನು ಪರಿಹರಿಸಲು ಸ್ಟುಡಿಯೋಗೆ ಸಮಯ ನೀಡಲಾಗುವುದು. ಪರಿಸರ ಸಂರಕ್ಷಣೆ ಬಗೆಗಿನ ನಮ್ಮ ಜವಾಬ್ದಾರಿಯನ್ನು ಎತ್ತಿಹಿಡಿಯುವುದರ ಜೊತೆಗೆ ಕನ್ನಡ ಮನರಂಜನಾ ಉದ್ಯಮವನ್ನು ಬೆಂಬಲಿಸಲು ನಾನು ಬದ್ಧನಾಗಿರುತ್ತೇನೆ” ಎಂದು ತಿಳಿಸಿದ್ದರು.
Laxmi News 24×7