ಅ.13 ರಂದು ಸಿಎಂಗೆ ಘೇರಾವ್ ಹಾಕಲು ಮುಂದಾದ ವಾಲ್ಮೀಕಿ ಸಮಾಜ
ರಾಜ್ಯದಲ್ಲಿ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್ಟಿ) ಸೇರ್ಪಡೆ ಮಾಡುವ ಪ್ರಯತ್ನ ಹಾಗೂ ನಕಲಿ ಜಾತಿ ಪ್ರಮಾಣ ಪತ್ರಗಳ ಹಾವಳಿ ವಿರೋಧಿಸಿ ವಾಲ್ಮೀಕಿ ಸಮುದಾಯವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅಕ್ಟೋಬರ್ 13 ರಂದು ಜಿಲ್ಲೆಗೆ ಭೇಟಿ ನೀಡಲಿರುವ ಮುಖ್ಯಮಂತ್ರಿಗಳಿಗೆ ಘೇರಾವ್ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಾಲ್ಮೀಕಿ ನಾಯಕ ಮಹಾಸಭಾದ ಮುಖಂಡರು ಮಾತನಾಡಿ, ಅಕ್ಟೋಬರ್ 13 ರಂದು ಜಿಲ್ಲೆಗೆ ಭೇಟಿ ನೀಡಲಿರುವ ಮುಖ್ಯಮಂತ್ರಿಗಳಿಗೆ ಘೇರಾವ್ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ನಕಲಿ ಎಸ್ಟಿ ಜಾತಿ ಪ್ರಮಾಣ ಪತ್ರಗಳು ನಿರಂತರವಾಗಿ ನೀಡುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ನಕಲಿ ಪ್ರಮಾಣ ಪತ್ರಗಳ ವಿರುದ್ಧ ನ್ಯಾಯಾಲಯದ ಆದೇಶವನ್ನು ಪಾಲಿಸಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಅವರು ಆರೋಪಿಸಿದರು.
ಇದಲ್ಲದೆ, ವಾಲ್ಮೀಕಿ ಸಮುದಾಯಕ್ಕೆ ಸೇರಿದ ಇಬ್ಬರು ಸಚಿವರ ಸ್ಥಾನಗಳನ್ನು ಭರ್ತಿ ಮಾಡದಿರುವುದು, ಹಾಗೂ ಅನ್ಯ ಸಮುದಾಯಗಳನ್ನು ಎಸ್ಟಿಗೆ ಸೇರ್ಪಡೆ ಮಾಡುವ ತರಾತುರಿಯ ನಿರ್ಧಾರಗಳಿಂದ ಸಮುದಾಯದ ರಾಜಕೀಯ ನಾಯಕರಿಗೆ ಅನ್ಯಾಯವಾಗುತ್ತಿದೆ ಎಂದು ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದು ಉದ್ದೇಶಪೂರ್ವಕವಾಗಿ ಸಮುದಾಯವನ್ನು ತುಳಿಯುವ ಹುನ್ನಾರ ಎಂದು ಅವರು ಆರೋಪಿಸಿದ್ದಾರೆ. ಕಾನೂನುಬದ್ಧವಾಗಿ ಯಾವುದೇ ಸಮುದಾಯವನ್ನು ಸೇರಿಸುವುದಕ್ಕೆ ತಮ್ಮ ಸ್ವಾಗತವಿದೆ. ಆದರೆ, ಕಾನೂನು ಬಾಹಿರ ನಿರ್ಧಾರಗಳಿಂದ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. ಸಮುದಾಯದ ಮನವಿಗಳಿಗೆ ಸರ್ಕಾರ ಸ್ಪಂದಿಸದ ಕಾರಣ, ಅಕ್ಟೋಬರ್ 13 ರಂದು ಬಂಡಿಗಣಿ ಮಠದಲ್ಲಿ ನಡೆಯಲಿರುವ ಸರ್ವಧರ್ಮ ಸಮ್ಮೇಳನ ಕಾರ್ಯಕ್ರಮಕ್ಕೆ ಆಗಮಿಸುವ ಸಿಎಂ ಸಿದ್ದರಾಮಯ್ಯ ಅವರನ್ನು ಘೇರಾವ್ ಹಾಕಲು ನಿರ್ಧರಿಸಲಾಗಿದೆ ಎಂದು ವಾಲ್ಮೀಕಿ ಸಮುದಾಯದ ಮುಖಂಡರು ಘೋಷಿಸಿದ್ದಾರೆ.
Laxmi News 24×7