ಬೆಳಗಾವಿ: “ಸಂಪುಟ ಪುನರ್ ರಚನೆ ಬಗ್ಗೆ ನಿನ್ನೆಯಷ್ಟೇ ಮೊದಲ ಬಾರಿ ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಆ ಬಗ್ಗೆ ಬೆಂಗಳೂರು ಮತ್ತು ದೆಹಲಿ ಮಟ್ಟದಲ್ಲಿ ಚರ್ಚೆ ಆಗಬೇಕು. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುತ್ತಾರೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಸಂಪುಟ ಬದಲಾದರೆ ಹಳಬರು ಹೋಗಿ, ಹೊಸ ಸಚಿವರು ಬಂದೇ ಬರುತ್ತಾರೆ. ಈ ಮುಂಚೆಯೇ 30 ತಿಂಗಳ ಬಳಿಕ ಮಾಡಬೇಕು ಅಂತಾ ಚರ್ಚೆ ನಡೆಯುತ್ತಿತ್ತು. ಈಗ ಅದು ಬಹುಶಃ ಅಂತಿಮ ಹಂತಕ್ಕೆ ಬಂದಿರಬಹುದು. ಬೆಳಗಾವಿಯಿಂದ ಯಾರಿಗೆ ಸಚಿವ ಸ್ಥಾನ ಕೊಡುತ್ತಾರೆ. ಸಂಪುಟದಿಂದ ಯಾರನ್ನು ಕೈ ಬಿಡುತ್ತಾರೆ ಎಂಬುದು ಪಕ್ಷಕ್ಕೆ ಬಿಟ್ಟಿದ್ದು. ಹಿರಿಯ ಸಚಿವರು ತಮ್ಮ ಸ್ಥಾನ ಬಿಟ್ಟು ಕೊಡುವ ಬಗ್ಗೆ ದೆಹಲಿಯಲ್ಲಿ ಹೈಕಮಾಂಡ್ ಹಂತದಲ್ಲಿ ಚರ್ಚೆ ಆಗಿರಬಹುದು. ಆದರೆ, ನಮ್ಮ ಹಂತದಲ್ಲಿ ಯಾವುದೇ ಮಾತುಕತೆ ಆಗಿಲ್ಲ. ಹಾಗಾಗಿ, ಅದರ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ” ಎಂದರು.
ಇನ್ನು, ಹೈಕಮಾಂಡ್ ಹೇಳಿದರೆ ಸಚಿವ ಸ್ಥಾನ ಬಿಟ್ಟು ಕೊಡಲು ಸಿದ್ಧ ಎಂಬ ಸಚಿವ ಕೃಷ್ಣಭೈರೇಗೌಡ ಹೇಳಿಕೆಗೆ, “ಪಕ್ಷದ ನಿರ್ಧಾರವನ್ನು ಎಲ್ಲರೂ ಪಾಲನೆ ಮಾಡಬೇಕಾಗುತ್ತದೆ. ಸಂಪುಟದಿಂದ ಕೈ ಬಿಟ್ಟವರು ಪಕ್ಷದ ಕೆಲಸಕ್ಕೆ ಹೋಗಲೇಬೇಕಾಗುತ್ತದೆ. ಮಂತ್ರಿ ಆಗಿ ಉಳಿದವರು ಪಕ್ಷದ ಕೆಲಸ ಮಾಡಬೇಕಾಗುತ್ತದೆ” ಎಂದು ಉತ್ತರಿಸಿದರು.
ಯಾವ ಮಾನದಂಡದ ಆಧಾರದ ಮೇಲೆ ಕೆಲ ಸಚಿವರನ್ನು ಕೈ ಬಿಡುತ್ತಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ, “ಅದು ನನಗೆ ಗೊತ್ತಿಲ್ಲ. ಮಾನದಂಡ ವಿಧಿಸುವವರು ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಮತ್ತು ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಮಾಡುತ್ತಾರೆ” ಎಂದರು.
Laxmi News 24×7