ಬೆಳಗಾವಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಖಾನಾಪುರ ತಾಲೂಕಿನ ಸುಳೇಗಾಳಿ ಗ್ರಾಮದಲ್ಲಿ ಇಂದು ನಡೆದಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆನೆಗಳ ಮೃತದೇಹಗಳ ಪರೀಕ್ಷೆ ನಡೆಸಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
ದೇವರಾಯಿ ಗ್ರಾಮದ ಸಮೀಪದ ಸುಳೇಗಾಳಿಯ ರೈತ ಗಣಪತಿ ಸಾತೇರಿ ಗುರವ ಹಾಗೂ ಇತರೆ ರೈತರು ತಮ್ಮ ಬೆಳೆಗಳನ್ನು ಕಾಡುಪ್ರಾಣಿಗಳಿಂದ ರಕ್ಷಿಸಲು ಸೌರಶಕ್ತಿಯಿಂದ ಕಾರ್ಯನಿರ್ವಹಿಸುವ ಸೋಲಾರ್ ಸೆನ್ಸಾರ್ ಅಳವಡಿಸಿದ್ದರು. ಖಾನಾಪುರ ತಾಲೂಕಿನ ಅನೇಕ ರೈತರು ಈ ಸೆನ್ಸಾರ್ ಬಳಸುತ್ತಿದ್ದಾರೆ. ಆದರೆ ಗದ್ದೆಯಿಂದ ಹಾದುಹೋಗುವ ವಿದ್ಯುತ್ ತಂತಿ ತುಂಡಾಗಿ ಕೆಲ ದಿನಗಳಿಂದ ಅದೇ ಸ್ಥಿತಿಯಲ್ಲಿ ಬಿದ್ದಿತ್ತು. ಇದರ ಜೊತೆಗೆ, ಮತ್ತೊಂದು ತಂತಿಯೂ ತುಂಡಾಗಿ ಬಿದ್ದಿತ್ತು. ಅದು ರೈತರು ಅಳವಡಿಸಿದ್ದ ಯಂತ್ರದ ತಂತಿಗೆ ತಾಗಿಕೊಂಡಿದೆ. ಪರಿಣಾಮ ಆ ತಂತಿಯಲ್ಲಿ ನೇರವಾಗಿ ವಿದ್ಯುತ್ ಪ್ರವಹಿಸಿದೆ. ಇದೇ ವೇಳೆ ಆಹಾರ ಅರಸಿ ಕಾಡಿನಿಂದ ಬಂದ ಆನೆಗಳು ಆ ತಂತಿ ಸ್ಪರ್ಶಿಸುತ್ತಿದ್ದಂತೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿವೆ ಎಂದು ತಿಳಿದು ಬಂದಿದೆ.
ಈಟಿವಿ ಭಾರತ ಡಿಎಫ್ಒ ಎನ್.ಇ.ಕ್ರಾಂತಿ ಅವರನ್ನು ಸಂಪರ್ಕಿಸಿದಾಗ, “ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಆನೆಗಳು ಸಾವನ್ನಪ್ಪಿವೆ. ಸ್ಥಳಕ್ಕೆ ನಮ್ಮ ಅಧಿಕಾರಿಗಳು ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದ್ದಾರೆ. ನಾನೂ ಕೂಡ ಆ ಸ್ಥಳಕ್ಕೆ ಹೋಗುತ್ತಿದ್ದೇನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳುತ್ತೇವೆ. ಆನೆಗಳ ಸಾವಿಗೆ ಕಾರಣರಾದವರನ್ನು ಬಿಡುವ ಪ್ರಶ್ನೆಯೇ ಇಲ್ಲ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ವಹಿಸಲಾಗುತ್ತದೆ” ಎಂದು ತಿಳಿಸಿದರು.
Laxmi News 24×7