ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಬಳಸಿ ನೃತ್ಯ ಮಾಡಿದ ಆರೋಪದಡಿ ನಾಲ್ಕು ವಿಚಾರಣಾಧೀನ ಕೈದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಅಮಾನತುಗೊಂಡ ಬೆಂಗಳೂರು ಕೇಂದ್ರ ಕಾರಾಗೃಹ ಅಧೀಕ್ಷಕ ಇಮಾಮ್ ಸಾಬ್ ಮ್ಯಾಗೇರಿ ನೀಡಿದ ದೂರು ಆಧರಿಸಿ ಕಾರ್ತಿಕ್, ಧನಂಜಯ, ಮಂಜುನಾಥ್ ಹಾಗೂ ಚರಣ್ ರಾವ್ ಎಂಬುವರ ವಿರುದ್ಧ ಕರ್ನಾಟಕ ಕಾರಾಗೃಹ (ತಿದ್ದುಪಡಿ) ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ ಗಳಡಿ ಪ್ರಕರಣ ದಾಖಲಾಗಿದೆ.
ಪರಪ್ಪನ ಕಾರಾಗೃಹದಲ್ಲಿ ಉಗ್ರ ಜುಹಾಬ್ ಶಕೀಲ್ ಮನ್ನಾ, ಸೀರಿಯಲ್ ಕಿಲ್ಲರ್ ಉಮೇಶ್ ರೆಡ್ಡಿ, ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ತರುಣ್ ಕೊಂಡಾರು ಜೈಲಿನಲ್ಲಿ ಮೊಬೈಲ್ ಬಳಕೆ ಸೇರಿದಂತೆ ವಿಶೇಷ ರಾಜಾತಿಥ್ಯ ಪಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಈ ಸಂಬಂಧ ಇಮಾಮ್ ಸಾಬ್ ಅವರು ನಾಲ್ಕು ಪ್ರತ್ಯೇಕ ದೂರು ದಾಖಲಿಸಿದ್ದರು. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ನಾಲ್ಕು ಎನ್ ಸಿಆರ್ ಪ್ರಕರಣ ದಾಖಲಿಸಿಕೊಂಡಿದ್ದರು. ಅಪರಾಧ ಸ್ವರೂಪ ಆಧರಿಸಿ ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡು ನಾಲ್ಕು ಮಂದಿ ವಿಚಾರಣಾಧೀನ ಕೈದಿಗಳ ವಿರುದ್ಧ ಮೊದಲ ಪ್ರಕರಣ ದಾಖಲಿಸಲಾಗಿದೆ. ಕೋರ್ಟ್ ಅನುಮತಿ ದೊರೆತ ಬಳಿಕ ಬಾಕಿ ಮೂರು ಎಫ್ಐಆರ್ ದಾಖಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ಧಾರೆ.
ವಿವಿಧ ಅಪರಾಧ ಪ್ರಕರಣಗಳಲ್ಲಿ ಸುಮಾರು ಐದಾರು ವರ್ಷಗಳಿಂದ ಆರೋಪಿಗಳು ಸೆರೆವಾಸದಲ್ಲಿದ್ದಾರೆ. ಬ್ಯಾರಕ್ 8ರ ಕೊಠಡಿ ಸಂಖ್ಯೆ 7ರಲ್ಲಿ ವಿಚಾರಣಾಧೀನ ಕೈದಿಗಳು ಮೊಬೈಲ್ ನಲ್ಲಿ ಹಾಡು ಹಾಕಿ ನೃತ್ಯ ಮಾಡಿದ್ದರು. ಈ ವಿಡಿಯೊ ವೈರಲ್ ಆಗಿತ್ತು. ಈ ಘಟನೆ ಹಳೆಯದಾಗಿದೆ ಅಧಿಕಾರಿಗಳು ಸಬೂಬು ಹೇಳಿದರೂ, ಮೊಬೈಲ್ ಬಳಸಿರುವುದು ಅಕ್ಷ್ಯಮ ಅಪರಾಧವಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆ ನಡೆದಿದ್ದು ಯಾವಾಗ ? ಮೊಬೈಲ್ ಬಳಸುತ್ತಿದ್ದ ವ್ಯಕ್ತಿ ? ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿಬಿಟ್ಟಿದ್ದು ಯಾರು ಎಂಬುದರ ಬಗ್ಗೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Laxmi News 24×7