ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರ ಸಹೋದರ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಜಿಐಎಂಎಸ್) ಪ್ರಾಧ್ಯಾಪಕ ಡಾ.ಕೇಶವ ಅಬ್ಬಯ್ಯ ಅವರನ್ನು ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರ ಸೂಚನೆ ಮೇರೆಗೆ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಕಿಮ್ಸ್) ದಂತ ಚಿಕಿತ್ಸಾ ವಿಭಾಗಕ್ಕೆ ವರ್ಗಾವಣೆ ಮಾಡಿರುವ ಕ್ರಮಕ್ಕೆ ಹೈಕೋರ್ಟ್, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಈ ಪ್ರಕ್ರಿಯೆ ಸಂಪೂರ್ಣ ನಿಯಮಗಳ ಉಲ್ಲಂಘನೆಯಾಗಿದೆ ಎಂದು ತಿಳಿಸಿ, ವರ್ಗಾವಣೆ ಆದೇಶವನ್ನು ರದ್ದುಗೊಳಿಸಿ ಆದೇಶಿಸಿದೆ. ವರ್ಗಾವಣೆ ಪ್ರಶ್ನಿಸಿ ಕಿಮ್ಸ್ ಪ್ರಾಧ್ಯಾಪಕ ಡಾ.ಸುನೀಲ್ ಜಿ.ಪಾಟೀಲ್ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ಪೀಠ ಈ ಆದೇಶ ನೀಡಿತು.
ಶಾಸನಬದ್ಧ ಮಾರ್ಗಸೂಚಿಗಳ ಉಲ್ಲಂಘನೆ: ಡಾ.ಕೇಶವ ಅಬ್ಬಯ್ಯ ಅವರನ್ನು ಕಾಯಂ ಆಗಿ ಕಿಮ್ಸ್ನಲ್ಲಿ ನಿಯೋಜಿಸುವುದು ಮತ್ತು ಅರ್ಜಿದಾರರನ್ನು ಅವರ ಅಧೀನದಲ್ಲಿ ನಿಯೋಜಿಸುವುದು ಶಾಸನಬದ್ಧ ಮಾರ್ಗಸೂಚಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ, ಮತ್ತು ರಾಜಕೀಯ ಪ್ರಭಾವದಿಂದ ಅಳಿಸಲಾಗದಷ್ಟು ಕಳಂಕಿತವಾಗಿದೆ ಮತ್ತು ಕಾನೂನಿನಲ್ಲಿ ಅದನ್ನು ಉಳಿಸಿಕೊಳ್ಳಲು ಅವಕಾಶವಿಲ್ಲ ಎಂದು ಪೀಠ ಹೇಳಿದೆ.
ಅರ್ಜಿದಾರರಿಗೆ ಕೆಲವು ತಿಂಗಳ ನಂತರ ಬಡ್ತಿ ಬಂದರೂ ಸಹ ಡಾ.ಅಬ್ಬಯ್ಯ ಅವರ ನೇಮಕಾತಿಯಲ್ಲಿನ ಅಕ್ರಮವನ್ನು ನಿವಾರಿಸುವುದಿಲ್ಲ ಅಥವಾ ಸರಿಪಡಿಸಲಾಗುವುದಿಲ್ಲ ಎಂದು ಸಹ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
Laxmi News 24×7