ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ, ಹಾಲಿ ಶಾಸಕ ಹೆಚ್.ಡಿ.ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗಿ ರಿಲೀಫ್ ನೀಡಿದೆ.
ಪ್ರಕರಣ ಕುರಿತು ಸೋಮವಾರ ವಿಚಾರಣೆ ನಡೆಸಿದ 42ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಅವರು, ವಿಳಂಬವಾಗಿ ಪ್ರಕರಣ ದಾಖಲಿಸಲಾಗಿದೆ. ಹೀಗಾಗಿ ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 354 ಎ ಅಡಿ ಮಾಡಲಾದ ಆರೋಪವನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಆದೇಶಿಸಿದ್ದಾರೆ. ಹೀಗಾಗಿ ರೇವಣ್ಣ ವಿರುದ್ಧ ದಾಖಲಿಸಿದ್ದ ಐಪಿಸಿ ಸೆಕ್ಷನ್ 354 ಎ(ಲೈಂಗಿಕ ದೌರ್ಜನ್ಯ) ಅಡಿಯ ಆರೋಪವನ್ನು ಕೈಬಿಡಲಾಗಿದೆ.
ಈ ಪ್ರಕರಣ ಸಂಬಂಧ ಈ ಹಿಂದೆ ಆರೋಪಿ ಹೆಚ್.ಡಿ.ರೇವಣ್ಣ ವಿರುದ್ಧ ಮಾಡಲಾಗಿದ್ದ ಐಪಿಸಿ ಸೆಕ್ಷನ್ 354(ಲೈಂಗಿಕ ದೌರ್ಜನ್ಯ) ಅಡಿಯ ಆರೋಪವನ್ನು ಹೈಕೋರ್ಟ್ ಕೈ ಬಿಟ್ಟಿತ್ತು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಐಪಿಸಿ ಸೆಕ್ಷನ್ 354 ಎ ಅಡಿ ಮಾಡಲಾದ ಆರೋಪವನ್ನು ಕೈಬಿಟ್ಟಿದೆ. ಸಿಐಡಿ ವಿಶೇಷ ತನಿಖಾ ತಂಡ(ಎಸ್ಐಟಿ) ಸಲ್ಲಿಸಿದ್ದ ದೋಷಾರೋಪದಿಂದ ರೇವಣ್ಣ ಬಿಡುಗಡೆಗೊಂಡಂತಾಗಿದೆ.
ಇದೇ ಪ್ರಕರಣದಲ್ಲಿ ಮಾಜಿ ಸಂಸದ ಹಾಗೂ ಹೆಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ 2ನೇ ಆರೋಪಿಯಾಗಿದ್ದಾರೆ. ಇವರ ವಿರುದ್ಧ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ ಸೇರಿ ಹಲವು ಸೆಕ್ಷನ್ಗಳನ್ನು ದಾಖಲಿಸಲಾಗಿದೆ. ಪ್ರಜ್ವಲ್ ವಿರುದ್ಧದ ಆರೋಪಗಳ ಸಂಬಂಧ ವಿಚಾರಣೆ ನ್ಯಾಯಾಲಯದಲ್ಲಿ ಪ್ರಗತಿಯಲ್ಲಿದೆ.
Laxmi News 24×7