ಯಾದಗಿರಿ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ಮಾಹಿತಿ ಇಲ್ಲ. ಸಂಕ್ರಾಂತಿ ಹಬ್ಬ ಮುಗಿದ ನಂತರ ಇದರ ಬಗ್ಗೆ ಮಾತನಾಡೋಣ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಸಿಎಂ ಸಿದ್ದರಾಮಯ್ಯ ಅವರೇ ಈ ಬಾರಿ ಬಜೆಟ್ ಮಂಡಿಸಲಿದ್ದಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಯ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಸ್ಥಾನದಲ್ಲಿದ್ದಾರೆ. ಹೀಗಿದ್ದಾಗ ಅವರೇ ಬಜೆಟ್ ಮಂಡಿಸುತ್ತಾರೆ ಎಂಬ ಭರವಸೆ ಇದೆ ಎಂದರು.
ರಾಹುಲ್ ಗಾಂಧಿ ಅವರು ವಿದೇಶಕ್ಕೆ ಪ್ರಯಾಣ ಬೆಳೆಸಿ ಬಂದ ನಂತರ ಡಿಕೆಶಿ ಬೆಂಬಲಿಗರು ದೆಹಲಿಗೆ ತೆರಳುವ ಮಾಹಿತಿ ಇದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನೋಡೋಣ, ಅಂತಹ ಸಂದರ್ಭ ಪಕ್ಷಕ್ಕೆ ಬರುವುದಿಲ್ಲ. ಪಕ್ಷದ ಹೈಕಮಾಂಡ್ ಇದೆ. ನಾವು ಯಾರೂ ಕೂಡಾ ದೆಹಲಿಗೆ ಹೋಗಲ್ಲ. ಈ ವಿಚಾರವನ್ನು ಸಂಪೂರ್ಣವಾಗಿ ಹೈಕಮಾಂಡ್ಗೆ ಬಿಟ್ಟಿದ್ದೇವೆ ಎಂದು ಹೇಳಿದರು.
ನೀವು ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಯತ್ನಿಸುವಿರಾ? ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸ್ಥಾನ ದಾರಿಯಲ್ಲಿ ಸಿಗುವಂತಹದ್ದಲ್ಲ. ಅದಕ್ಕೆ ತನ್ನದೇ ಆದ ದಾರಿ ಇದೆ. ನೋಡೋಣ ಎಂದರು.
ಕೋಗಿಲು ಬಡಾವಣೆಯ ಮನೆಗಳ ತೆರವು ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವರು, ಜಾಗ ಯಾರದ್ದೆಂಬುದನ್ನು ಪರಿಶೀಲಿಸಬೇಕಾಗಿದೆ ಎಂದು ಉಪಮುಖ್ಯಮಂತ್ರಿ ಹೇಳಿದ್ದಾರೆ. ಈ ವಿಚಾರದ ಕುರಿತು ಚರ್ಚೆ ನಡೆಸಲು ಮಹಾನಗರ ಪಾಲಿಕೆ ಇದೆ. ಚರ್ಚೆಯ ಮೂಲಕ ನ್ಯಾಯ ಒದಗಿಸುವ ಪ್ರಯತ್ನ ಮಾಡಲಾಗುತ್ತದೆ. ಮಾನವೀಯತೆ ದೃಷ್ಟಿಯಿಂದ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ ಎಂದು ತಿಳಿಸಿದರು.
ಮಹಾರಾಷ್ಟ್ರದ ಪೊಲೀಸರು ರಾಜ್ಯದಲ್ಲಿ ಡ್ರಗ್ಸ್ ಪತ್ತೆ ಮಾಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮಹಾರಾಷ್ಟ್ರ ಪೊಲೀಸರು ಅಲ್ಲಿಂದ ಟ್ರ್ಯಾಪ್ ಮಾಡಿ ಬೆಂಗಳೂರಿಗೆ ಬಂದು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ನಮ್ಮ ಸರ್ಕಾರದೊಂದಿಗೆ ಅವರು ಏನು ಮಾಹಿತಿ ಹಂಚಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ ಎಂದರು.
ಇದು ಕಾಂಗ್ರೆಸ್ ಸರ್ಕಾರದ ವೈಫಲ್ಯ ಎಂದು ಬಿಜೆಪಿಯವರು ಆರೋಪಿಸಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರ ವೈಫಲ್ಯ ಸಾಕಷ್ಟು ಇದೆ. ಸತ್ಯಾಂಶ ಹೊರಗೆ ಬರಲಿ. ಆಮೇಲೆ ನೋಡೋಣ ಎಂದು ಹೇಳಿದರು.
ಡ್ರಗ್ಸ್ ಮುಕ್ತ ರಾಜ್ಯ ಮಾಡಲು ನಿಮ್ಮ ಸರ್ಕಾರ ಬದ್ದವಾಗಿದೆಯಾ? ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಯಾವುದೇ ಸರ್ಕಾರ ಇದ್ದರೂ ಅದಕ್ಕೆ ಡ್ರಗ್ಸ್ ಮೊದಲ ಶತ್ರು. ಹೀಗಾಗಿ, ಎಲ್ಲ ಸರ್ಕಾರಗಳೂ ನಿಯಂತ್ರಣ ಮಾಡಲೇಬೇಕು ಎಂದರು.
ಗೃಹ ಸಚಿವ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿಯವರು ಆಗ್ರಹಿಸುತ್ತಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಡ್ರಗ್ಸ್ ಬಂದಿರಬಹುದು. ಆದರೆ ಗೃಹ ಸಚಿವರೊಂದಿಗೆ ಯಾವುದೇ ಸಂಬಂಧ ಇಲ್ಲವೆಂದ ಮೇಲೆ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.
Laxmi News 24×7