ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್ಗೆ ವಾರಕ್ಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿ ನೀಡಿದ್ದ ನಗರದ ಸೆಷನ್ಸ್ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದ್ದು, ಪ್ರತಿವಾದಿಗಳಾದ ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್ ಅವರಿಗೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆಗಳನ್ನು ಸಲ್ಲಿಸಲು ಸೂಚನೆ ನೀಡಿದೆ.
ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ವಕೀಲರು, ಆರೋಪಿಗಳಿಗೆ ಯಾವುದೇ ವಿಶೇಷ ಸೌಲಭ್ಯ ನೀಡದಂತೆ ಸೂಚನೆ ನೀಡಿದೆ. ಆದ್ದರಿಂದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿದರು. ಇದಕ್ಕೆ ಪೀಠ, ನಟ ದರ್ಶನ್ಗೆ ಮನೆ ಊಟ ಕೊಡಬೇಕೇ ಎಂದು ಪ್ರಶ್ನಿಸಿತು. ಈ ವೇಳೆ ವಕೀಲರು, ಪ್ರಕರಣದ ಮೊದಲನೇ ಆರೋಪಿ ಪವಿತ್ರಾ ಗೌಡ, ಇತರೆ ಆರೋಪಿಗಳಾದ ಲಕ್ಷ್ಮಣ್, ನಾಗರಾಜ್ ಅವರಿಗೆ ಮನೆ ಊಟಕ್ಕೆ ಆದೇಶಿಸಿದೆ ಎಂದು ತಿಳಿಸಿದರು.
ಅಲ್ಲದೆ, ಜೈಲಿನಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ಎಫ್ಎಸ್ಎಸ್ಎಐ) 4ಸ್ಟಾರ್ ಗುಣಮಟ್ಟದ ಆಹಾರ ನೀಡಲಾಗುತ್ತಿದೆ. ವೈದ್ಯರು ಸೂಚಿಸಿದರೆ ಎಲ್ಲರಿಗೂ ನೀಡುವಂತೆ ವಿಚಾರಣಾ ನ್ಯಾಯಾಲಯ ತಿಳಿಸಿದೆ. ಆದರೆ, ಸುಪ್ರೀಂಕೋರ್ಟ್ ಆದೇಶ ಉಲ್ಲಂಘನೆಯಾದರೆ ಅಧಿಕಾರಿಗಳ ಮೇಲೆ ಕ್ರಮವಾಗಲಿದೆ ಎಂದು ಪೀಠಕ್ಕೆ ವಿವರಿಸಿದರು.
ವಾದ ಆಲಿಸಿದ ನ್ಯಾಯಪೀಠ, ಎಷ್ಟೇ ದೊಡ್ಡವರಾಗಿದ್ದರೂ ಕಾನೂನು ಎಲ್ಲರಿಗೂ ಒಂದೇ. ವಿಶೇಷ ಸವಲತ್ತು ನೀಡಿದರೆ ಕ್ರಮವೆಂದು ಸುಪ್ರೀಂಕೋರ್ಟ್ ಹೇಳಿದೆ. ಒಬ್ಬೊಬ್ಬರಿಗೆ ಒಂದು ರೀತಿಯ ಸವಲತ್ತು ನೀಡುವುದು ಕಾನೂನುಬಾಹಿರ. ವಿಶೇಷ ಸಂದರ್ಭಗಳಲ್ಲಿ ಮಾತ್ರ ಮನೆ ಊಟಕ್ಕೆ ಅವಕಾಶವಿದೆ. ಆದರೆ, ಆ ನಿಯಮಗಳನ್ನು ಹೊರತುಪಡಿಸಿ ಮನೆ ಊಟಕ್ಕೆ ಆದೇಶಿಸಲಾಗಿದೆ. ಜೈಲು ಕೈಪಿಡಿಯಲ್ಲಿನ ನಿಯಮಗಳನ್ನು ಅನುಸರಿಸಲಾಗಿಲ್ಲ. ಹೀಗಾಗಿ ವಿಚಾರಣಾ ನ್ಯಾಯಾಲಯಕ್ಕೆ ತಡೆ ನೀಡುತ್ತಿರುವುದಾಗಿ ಪೀಠ ಆದೇಶಿಸಿದೆ.
Laxmi News 24×7