ಬೆಂಗಳೂರು: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಗೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
2027ರ ಡಿಸೆಂಬರ್ 31 ರವರೆಗೆ ಹೊರಡಿಸಲಾಗಿರುವ ಎಲ್ಲಾ ಅಧಿಸೂಚನೆಗಳಿಗೆ ಅನ್ವಯ ಆಗುವಂತೆ ತೀರ್ಮಾನ ಕೈಗೊಳ್ಳಲಾಗಿದೆ. ಸಾಮಾನ್ಯ ವರ್ಗಕ್ಕೆ ಈಗ ಇರುವ 35 ವರ್ಷದ ವಯೋಮಿತಿ ಇದ 40 ವರ್ಷಕ್ಕೆ ಅನ್ವಯ ಆಗುವಂತೆ ವಿಸ್ತರಣೆಯಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಈಗ ಇರುವ 38 ವರ್ಷ ವಯೋಮಿತಿ 43 ವರ್ಷಗಳಿಗೆ ಅನ್ವಯವಾಗುವಂತೆ ವಿಸ್ತರಣೆ ಆಗಿದೆ.
ಇಂದು ನಡೆದ ಜಂಟಿ ಅಧಿವೇಶನದಲ್ಲಿ ಸರ್ಕಾರ ಭಾಷಣ ಓದದೇ ತೆರಳಿದ ರಾಜ್ಯಪಾಲರ ನಡೆಗೆ ಸಚಿವ ಸಂಪುಟ ಸಭೆಯಲ್ಲಿ ಅಸಮಾಧಾನ ಹೊರಹಾಕಲಾಗಿದೆ. ಗೋ ಬ್ಯಾಕ್ ಗವರ್ನರ್ ನಿರ್ಣಯ ಮಾಡಲು ಚರ್ಚೆ ನಡೆಸಲಾಗಿದೆ. ರಾಜ್ಯಪಾಲರನ್ನ ವಾಪಸ್ ಕರೆಸಿಕೊಳ್ಳುವಂತೆ ನಿರ್ಣಯ ತೆಗೆದುಕೊಳ್ಳುವ ಬಗ್ಗೆ ಗಂಭೀರ ಚರ್ಚೆ ನಡೆದಿದೆ.
ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆಯುವ ಸಂಬಂಧ ಚರ್ಚೆ ನಡೆಸಲಾಗಿದೆ. ಗವರ್ನರ್ ಗೋ ಬ್ಯಾಕ್ ಅಭಿಯಾನ ನಡೆಸುವ ಬಗ್ಗೆ ಕ್ಯಾಬಿನೆಟ್ನಲ್ಲಿ ಚರ್ಚೆ ಮಾಡಲಾಗಿದೆ. ಇಂದಿನ ಘಟನೆಯನ್ನ ರಾಜ್ಯ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ.
ಇದೇ ವೇಳೆ, ರಾಜ್ಯದ 22 ಹಿಂದುಳಿದ ಹಾಗೂ ದಲಿತ ಮಠಗಳಿಗೆ ಜಾಗ ಮಂಜೂರು ಮಾಡಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಬೆಂಗಳೂರು ನಗರ ಜಿಲ್ಲೆ, ಉತ್ತರ ತಾಲೂಕಿನ ದಾಸನಪುರ ಹೋಬಳಿಯಲ್ಲಿ ಜಾಗ ಮಂಜೂರಿಗೆ ಒಪ್ಪಿಗೆ ನೀಡಲಾಗಿದೆ. ರಾವುತ್ತನಹಳ್ಳಿ ಗ್ರಾಮದ ಸರ್ವೇ 57 ಮತ್ತು 58 ರಲ್ಲಿರುವ ಸರ್ಕಾರಿ ಜಮೀನು ದಲಿತ ಹಾಗೂ ಹಿಂದೂಳಿದ ವರ್ಗಗಳ 22 ಮಠಗಳಿಗೆ ಮಂಜೂರು ಮಾಡಲು ಕ್ಯಾಬಿನೆಟ್ ಸಮ್ಮತಿ ಸೂಚಿಸಿದೆ.
Laxmi News 24×7