ಬೆಂಗಳೂರು ಆರೋಗ್ಯ ಇಲಾಖೆ ಅಧಿಕಾರಿಯನ್ನ ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡ್ಬೇಕೆಂಬ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾದ ಪತ್ರ ಸದ್ಯ ರಾಜ್ಯದಲ್ಲಿ ಸಾಕಷ್ಟು ಹಲ್ ಚಲ್ ಎಬ್ಬಿಸಿದೆ. ಮೊದಲೇ ವರ್ಗಾವಣೆ ದಂಧೆಯ ಆರೋಪ ಮಾಡುತ್ತಿದ್ದ ಬಿಜೆಪಿಗೆ ಹೊಸ ಅಸ್ತ್ರವೇ ಸಿಕ್ಕಂತಾಗಿತ್ತು. ಸದ್ಯ ಈ ವಿಚಾರವಾಗಿ ಖದ್ದು ಸಿಎಂ ಸಿದ್ದರಾಮಯ್ಯ ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ. ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಇಂತಹ ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸಬೇಕು. ಈಗಿನ ಫೋಟೋಶಾಪ್, ಎಐ ಯುಗದಲ್ಲಿ ವಾಟ್ಸ್ಆ್ಯಪ್ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಇತರರ ಜೊತೆ ಹಂಚಿಕೊಳ್ಳುವುದು ಕೂಡ ಅಪರಾಧವೆ ಆಗಿದೆ. ಸಕಾರಾತ್ಮಕ ಟೀಕೆಗೆ ನಾವು ಮುಕ್ತರಿದ್ದೇವೆ, ಸುಳ್ಳು ಸುದ್ದಿಗಳ ಅಪಪ್ರಚಾರವನ್ನು ಸಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Laxmi News 24×7