ಭಾರತವನ್ನು ಮಾದಕವಸ್ತು ಮುಕ್ತ ರಾಷ್ಟ್ರವನ್ನಾಗಿಸಲು ಮತ್ತು ಅಂಗದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ವಿಜಯಪುರದಲ್ಲಿ ವಾಕ್ಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮಾರ್ಗದರ್ಶನದಲ್ಲಿ ವಿಜಯಪುರ ಜಿಲ್ಲೆಯ ನರ್ಸಿಂಗ್ ಕಾಲೇಜುಗಳ ಸಹಯೋಗದಲ್ಲಿ ಈ ಜಾಗೃತಿ ವಾಕ್ಥಾನ್ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರ್ಗಿ ಅವರು ಹಸಿರು ನಿಶಾನೆ ತೋರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ವಾಕ್ಥಾನ್, ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸಮಾಪ್ತಿಯಾಯಿತು. ವಿಜಯಪುರ ನಗರದ ಎಲ್ಲಾ ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು ಉತ್ಸಾಹಭರಿತವಾಗಿ ಭಾಗವಹಿಸಿದರು.
“ಡ್ರಗ್ ಫ್ರೀ ಇಂಡಿಯಾ” ಹಾಗೂ “ಅಂಗದಾನ ಮಹಾದಾನ” ಎಂಬ ಘೋಷಣೆಗಳೊಂದಿಗೆ ವಿದ್ಯಾರ್ಥಿಗಳು ಜಾಗೃತಿ ಸಂದೇಶ ಸಾರಿದರು. ಸಮಾಜದಲ್ಲಿ ಮಾದಕವಸ್ತು ಬಳಕೆಯಿಂದ ಉಂಟಾಗುವ ಹಾನಿಗಳ ಬಗ್ಗೆ ಅರಿವು ಮೂಡಿಸುವ ಜೊತೆಗೆ, ಅಂಗದಾನದಿಂದ ಅನೇಕ ಜೀವಗಳನ್ನು ಉಳಿಸಬಹುದೆಂಬ ಸಂದೇಶವನ್ನು ಹಂಚಲಾಯಿತು.
ಈ ಕಾರ್ಯಕ್ರಮದಲ್ಲಿ ಸುಮಾರು 1,500ಕ್ಕೂ ಹೆಚ್ಚು ನರ್ಸಿಂಗ್ ವಿದ್ಯಾರ್ಥಿಗಳು ಭಾಗವಹಿಸಿದ್ದು, ಸಾರ್ವಜನಿಕರಿಂದ ಸಹ ಪ್ರಶಂಸೆ ವ್ಯಕ್ತವಾಯಿತು. ಆರೋಗ್ಯಕರ ಮತ್ತು ಜವಾಬ್ದಾರಿಯುತ ಸಮಾಜ ನಿರ್ಮಾಣದತ್ತ ಯುವಜನತೆ ಕೈಜೋಡಿಸಬೇಕು ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
Laxmi News 24×7