ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲ ಜಾತಿ, ಜನಾಂಗ ಒಟ್ಟುಗೂಡಿಸಿಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಇಲ್ಲಿಯವರೆಗೆ 150ಕ್ಕೂ ಅಧಿಕ ದೇವಸ್ಥಾನ ನಿರ್ಮಾಣ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ನಗರದಲ್ಲಿ ಶನಿವಾರ ಉಚಗಾಂವ್ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಕೇವಲ ಹಿಂದುತ್ವದ ಭಾಷಣ ಮಾಡುತ್ತಾರೆ. ಹಿಂದುತ್ವಕ್ಕಾಗಿ ಏನು ಮಾಡಿದ್ದಾರೆ?ಅವರಿಗೆ ಅಧಿಕಾರ ಮಾತ್ರ ಬೇಕಾಗಿದೆ. ಹಿಂದು – ಮುಸ್ಲಿಂ, ಭಾರತ -ಪಾಕಿಸ್ತಾನ ಬಿಟ್ಟರೆ ಅವರದ್ದು ಏನೂ ಇಲ್ಲ. ನಾನು ನಿಜವಾದ ಹಿಂದುತ್ವದ ಕೆಲಸ ಮಾಡುತ್ತಿದ್ದೇನೆ ಎಂದರು.
ಛತ್ರಪತಿ ಶಿವಾಜಿ ಮಹಾರಾಜರಿಂದ ಹಿಡಿದು ಎಲ್ಲ ಮಹಾನ್ ವ್ಯಕ್ತಿಗಳ ಪುತ್ಥಳಿ ಸ್ಥಾಪನೆ ಮಾಡಿದ್ದೇನೆ. ಸರ್ವ ಜನಾಂಗದವರಿಗೂ ಗೌರವ ನೀಡುತ್ತಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಸೇರಿ ಕಾಂಗ್ರೆಸ್ ಮುಖ್ಯಮಂತ್ರಿಗಳು ಆದರ್ಶವಾದ ಕೆಲಸ ಮಾಡಿದ್ದಾರೆ. ಶಾಲಾ ಮಕ್ಕಳಿಗೆ ಬಿಸಿಯೂಟ, ಸಮವಸ್ತ್ರ, ಮೊಟ್ಟೆ ಹೀಗೆ ಹತ್ತು ಹಲವು ಯೋಜನೆ ಜಾರಿಗೆ ತಂದಿದ್ದಾರೆ. ಪಂಚ ಗ್ಯಾರಂಟಿ ಯೋಜನೆ ಜಾರಿ ಮಾಡಿದರೂ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ನಿಂತಿಲ್ಲ ಎಂದರು.
ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಮಾತನಾಡಿ, ಪಕ್ಷ ಸಂಘಟನೆ ಬಲಪಡಿಸಲು ಪ್ರತಿ ಬ್ಲಾಕ್ ಸಭೆ ಮಾಡಲಾಗುತ್ತಿದೆ. ಕಳೆದ ಒಂದು ದಶಕದಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ಪಕ್ಷ ಸಾಕಷ್ಟು ಬಲಗೊಂಡಿದೆ. ಕಾಂಗ್ರೆಸ್ ಎಂದೂ ಅಧಿಕಾರ ದುರುಪಯೋಗ ಪಡಿಸಿಕೊಂಡಿಲ್ಲ. ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಐಟಿ, ಇಡಿ ಗಳನ್ನು ದುರುಪಯೋಗ ಪಡಿಸಿಕೊಂಡು ವಿರೋಧಿಗಳಿಗೆ ಹಿಂಸೆ ನೀಡುತ್ತಿದೆ ಎಂದು ದೂರಿದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಕಾಡಾ ಅಧ್ಯಕ್ಷ ಯುವರಾಜ ಕದಂ, ಶಂಕರಗೌಡ ಪಾಟೀಲ, ಮನೋಹರ ಬೆಳಗಾಂವ್ಕರ, ಗಾಯತ್ರಿ ಪಾಟೀಲ, ರೇಖಾ ನಾಯಕ್ ಇತರರಿದ್ದರು.
Laxmi News 24×7