ದಾವಣಗೆರೆ: ಶಾಮನೂರು ಕುಟುಂಬಕ್ಕೆ ಟಿಕೆಟ್ ಕೊಟ್ಟರೆ 50 ಸಾವಿರ ಮತಗಳ ಅಂತರದಿಂದ ಸೋಲಿಸುವುದಾಗಿ ಮುಸ್ಲಿಮ್ ಕಾಂಗ್ರೆಸ್ ನಾಯಕರು ಮೀಸೆ ತಿರುವಿ, ತೊಡೆ ತಟ್ಟಿ ಎಚ್ಚರಿಕೆ ನೀಡಿದ್ದಾರೆ.
ಇಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಹಂಚಿಕೆ ಸಂಬಂಧ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಉಸ್ತುವಾರಿ ಸಮಿತಿ ಅಭಿಪ್ರಾಯ ಸಂಗ್ರಹಣೆಗೆ ಮುಂದಾದಾಗ ಭಾರೀ ಹೈಡ್ರಾಮಾ ನಡೆದಿದೆ.
ಒಂದು ಕಡೆ ಮುಸ್ಲಿಮ್ ಮುಖಂಡರು ಹಾಗೂ ಯುವಕರು ಅಹಿಂದ ವರ್ಗಕ್ಕೆ ಟಿಕೆಟ್ ನೀಡುವಂತೆ ಒತ್ತಾಯ ಮಾಡಿದರೆ ಮತ್ತೊಂದು ಕಡೆ ಎಸ್ಎಸ್ ಮಲ್ಲಿಕಾರ್ಜುನ್ ಬೆಂಬಲಿಗರು ಸಮರ್ಥ್ಗೆ ಟಿಕೆಟ್ ನೀಡುವಂತೆ ಒತ್ತಾಯಿಸಿ ಘೋಷಣೆ ಕೂಗಿದರು.
ಗಲಾಟೆಯಿಂದ ಕೋಪಗೊಂಡ ಉಸ್ತುವಾರಿ ಸಮಿತಿಯ ಸದಸ್ಯರಾದ ಮಂಜುನಾಥ್ ಭಂಡಾರಿ, ಮಾಜಿ ಸಚಿವ ಹೆಚ್ ಆಂಜನೇಯ, ಹೆಚ್ ಎಂ ರೇವಣ್ಣ ಬೇಸರಗೊಂಡು ಹೊರ ನಡೆದರು. ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ವಾಗ್ವಾದಕ್ಕೆ ಇಳಿದಾಗ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.
ಸಭೆಯಲ್ಲಿ ಮಾತನಾಡಿದ ಮುಸ್ಲಿಮ್ ನಾಯಕರು, ಅಧಿಕಾರ ಯಾರ ಅಪ್ಪನ ಸ್ವತ್ತು ಅಲ್ಲ. ಸಮರ್ಥ್ಗೆ ಟಿಕೆಟ್ ಕೊಟ್ಟರೆ 50 ಸಾವಿರ ಮತಗಳ ಅಂತರದಿಂದ ಸೋಲಿಸುತ್ತೇವೆ ಎಂದು ಎಚ್ಚರಿಕೆ ನೀಡುವುದರ ಜೊತೆ ಸವಾಲು ಹಾಕಿದ್ದಾರೆ.
Laxmi News 24×7