ಬಾಗಲಕೋಟೆ: ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ವೀರಣ್ಣ ಚರಂತಿಮಠ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ನಗರದ ಮುಚಖಂಡಿ ಐತಿಹಾಸಿಕ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಬಿಜೆಪಿ ಅಭ್ಯರ್ಥಿಯಾಗಿ ಒಟ್ಟು ಮೂರು ನಾಮಪತ್ರಗಳನ್ನು ಸಲ್ಲಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ವೀರಣ್ಣ ಚರಂತಿಮಠ ಅವರು ಚುನಾವಣಾಧಿಕಾರಿ ಸಂತೋಷ ಜಗಲಾಸರ್ ಅವರಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಯ ಬಳಿಕ ಮಾತನಾಡಿದ ಅವರು, “ನಮ್ಮದು ಒಂದೇ ಮಂತ್ರ — ಅಭಿವೃದ್ಧಿ ಪರ ಮಂತ್ರ. ಅಭಿವೃದ್ಧಿಯೇ ನಮಗೆ ಮುಖ್ಯ ಆಧಾರ. ಅದನ್ನೇ ಆಧಾರವಾಗಿಟ್ಟುಕೊಂಡು ಮತ ಕೇಳುತ್ತೇವೆ. ನಿಶ್ಚಿತವಾಗಿ ಈ ಕ್ಷೇತ್ರದಲ್ಲಿ ನಾವು ಗೆಲುವು ಸಾಧಿಸುತ್ತೇವೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಜನರಲ್ಲಿ ಅಸಮಾಧಾನ ಹೆಚ್ಚುತ್ತಿದೆ ಎಂದು ಆರೋಪಿಸಿದರು. ಕುಟುಂಬ ರಾಜಕಾರಣದ ವಿರುದ್ಧ ಜನ ತೀರ್ಪು ನೀಡಲಿದ್ದು, “ಮಗ–ಮೊಮ್ಮಗರನ್ನು ಮನೆಗೆ ಕಳುಹಿಸುವ ಕಾಲ ಬಂದಿದೆ” ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಸದ ಜಗದೀಶ ಶೆಟ್ಟರ್, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಎಂ. ಕಾರಜೋಳ, ಸಂಸದ ಪಿ.ಸಿ. ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣ ಸಾ. ಭಾಂಢಗೆ, ಶಾಸಕ ಸಿದ್ದು ಸವದಿ, ಜಿಲ್ಲಾಧ್ಯಕ್ಷ ಶಾಂತನಗೌಡ ಪಾಟೀಲ, ಮಾಜಿ ಸಚಿವ ಬಿ. ಶ್ರೀರಾಮುಲು, ಮುರುಗೇಶ ನಿರಾಣಿ, ಮಾಜಿ ಸಚಿವ ಅರವಿಂದ ಲಿಂಬಾವಳಿ, ವಿಪ ಸದಸ್ಯ ಪಿ.ಎಚ್. ಪೂಜಾರ ಹಾಗೂ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
Laxmi News 24×7