ಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ಗೆ ಕನ್ನಡಪರ ಸಂಘಟನೆಗಳ ಮುಖಂಡರು ಒತ್ತಾಯಿಸಿದರು.
ಪಾಲಿಕೆಯಲ್ಲಿ ಗುರುವಾರ ಕನ್ನಡ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಮೇಯರ್ ಪ್ರೀತಿ ಕಾಮಕರ, ಉಪಮೇಯರ್ ಹಣಮಂತ ಕೊಂಗಾಲಿ ಅವರನ್ನು ಸನ್ಮಾನಿಸಿ ಹಲವು ಬೇಡಿಕೆ ಒಳಗೊಂಡಿರುವ ಮನವಿ ಸಲ್ಲಿಸಿದರು.
2005 ಅಕ್ಟೋಬರ್ 10ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಬೆಂಬಲಿತ ಮೇಯರ್, ಉಪಮೇಯರ್ ಅವರು ಪರಿಷತ್ ಸಭೆಯಲ್ಲಿ ಬೆಳಗಾವಿ, ಕಾರವಾರ, ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಿದ್ದು ಎಂದು ಬಹುಮತ ನಿರ್ಣಯ ಕೈಗೊಂಡು ಮಹಾರಾಷ್ಟ್ರ ಸರ್ಕಾರ, ಸುಪ್ರೀಂ ಕೋರ್ಟ್ಗೆ ವರದಿ ಸಲ್ಲಿಸಿದ್ದರು.
ಇದು ಕರ್ನಾಟಕ ಸರ್ಕಾರದ ಕಾನೂನು ಹೋರಾಟಕ್ಕೆ ಅಡ್ಡಿಯಾಗಿದೆ. ಇದಕ್ಕೆ ಪ್ರತಿಯಾಗಿ ಪಾಲಿಕೆ ಆಡಳಿತ ಮಂಡಳಿ ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ, ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳುವುದು ಅವಶ್ಯವಾಗಿದೆ ಎಂದು ಒತ್ತಾಯಿಸಿದರು.
ಪಾಲಿಕೆಯ 58ರ ಪೈಕಿ 55 ಸದಸ್ಯರು ಕನ್ನಡಿಗರೇ ಇದ್ದಾರೆ. ಅಲ್ಲದೆ, ಕನ್ನಡ ಭಾಷಿಕ ಮೇಯರ್, ಉಪಮೇಯರ್ ಆಗಿದ್ದರಿಂದ ಕನ್ನಡಪರ ನಿರ್ಣಯ ಕೈಗೊಂಡು ಸರ್ಕಾರ, ಸುಪ್ರೀಂ ಕೋರ್ಟ್ಗೆ ಕಳುಹಿಸಬೇಕು. ವಿಳಂಬ ಮಾಡದೆ ತಕ್ಷಣ ಸಾಮಾನ್ಯ ಸಭೆ ಕರೆದು
ಠರಾವು ಪಾಸ್ ಮಾಡಬೇಕೆಂದು ಕನ್ನಡಪರ ಸಂಘಟನೆಗಳು ಆಗ್ರಹಿಸಿದವು.
ಈ ಸಂದರ್ಭದಲ್ಲಿ ಮಹಾದೇವ ತಳವಾರ, ಶ್ರೀನಿವಾಸ ತಾಳೂಕರ ಇತರರಿದ್ದರು.
Laxmi News 24×7