ದಾವಣಗೆರೆ ಬೆನ್ನಲ್ಲೇ ಈಗ ಬಾಗಲಕೋಟೆ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಉಪಚುನಾವಣೆ ವೇಳೆ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ ಆರೋಪದಡಿ ಇಬ್ಬರು ಜನಪ್ರತಿನಿಧಿಗಳು ಸೇರಿದಂತೆ ಮೂವರು ಹಿರಿಯ ಮುಖಂಡರನ್ನು ಪಕ್ಷದಿಂದ ಉಚ್ಛಾಟಿಸಲು ಜಿಲ್ಲಾ ಘಟಕ ಮುಂದಾಗಿದೆ.
ಬಾಗಲಕೋಟೆ ಉಪಚುನಾವಣೆಯ ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಕೆಲಸ ಮಾಡದೆ, ಬಿಜೆಪಿ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಿದ ಆರೋಪದ ಮೇಲೆ ಕಮತಗಿ ಪಟ್ಟಣ ಪಂಚಾಯತಿಯ ಇಬ್ಬರು ಸದಸ್ಯರಾದ ರಮೇಶ್ ಜಮಖಂಡಿ ಮತ್ತು ಗುರುಲಿಂಗಪ್ಪ ಪಾಟೀಲ್ ಹಾಗೂ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸ್ಸು ಮಾಡಲಾಗಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಎನ್. ರಾಂಪೂರ ನೀಡಿದ ದೂರಿನನ್ವಯ, ಈ ಮೂವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಲು ಜಿಲ್ಲಾ ಕಾಂಗ್ರೆಸ್ ಕಮಿಟಿ ತೀರ್ಮಾನಿಸಿದೆ. ಈ ಬೆಳವಣಿಗೆಯು ಜಿಲ್ಲಾ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಪಕ್ಷದ ಬಿ-ಫಾರ್ಮ್ ಮೂಲಕ ಆಯ್ಕೆಯಾಗಿ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಗುಡುಗಿದ್ದಾರೆ. ಕಮತಗಿ ಭಾಗದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವುದು ಸಾಬೀತಾಗಿದ್ದು, ಇಬ್ಬರು ಸದಸ್ಯರನ್ನು ಅನರ್ಹಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು ಎಂದು ತಿಳಿಸಿದ್ದಾರೆ. “ಇಂದು ದಾಖಲಾತಿಗಳನ್ನು ಪರಿಶೀಲಿಸಿ ಉಚ್ಛಾಟನೆಯ ಡ್ರಾಫ್ಟಿಂಗ್ ಸಿದ್ಧಪಡಿಸಲಾಗುವುದು, ಏನೇ ಅಡೆತಡೆಗಳಿದ್ದರೂ ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Laxmi News 24×7