ಪ್ರಜಾಪ್ರಭುತ್ವದ ಆಧಾರಸ್ತಂಭವೇ ಪಂಚಾಯತ್ರಾಜ್ ವ್ಯವಸ್ಥೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಸುವರ್ಣ ಸೌಧದಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ
ಸುವರ್ಣ ಸೌಧದಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ.
ಗ್ರಾಮ ಸ್ವರಾಜ್ಯ ಗಾಂಧೀಜಿಯವರ ಕನಸಾಗಿತ್ತು ಎಂದ ಸಚಿವರು.
ಅಭಿವೃದ್ಧಿಯಲ್ಲಿ ಪಿಡಿಒಗಳ ಪಾತ್ರ ಬಹಳ ದೊಡ್ಡದು.
ಬೆಳಗಾವಿಯಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ ಉಪಸ್ಥಿತಿ.
ಬೆಳಗಾವಿ: ದೇಶದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯು ಪ್ರಜಾಪ್ರಭುತ್ವದ ಆಧಾರಸ್ತಂಭವಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಅಧಿಕಾರ ವಿಕೇಂದ್ರೀಕರಣದಲ್ಲಿ ಪಂಚಾಯತ್ ರಾಜ್ ಇಲಾಖೆ ಪ್ರಮುಖ ಪಾತ್ರವಹಿಸಿದೆ ಎಂದು ಹೇಳಿದರು.
ಪಂಚಾಯತ್ ರಾಜ್ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಟ್ಟಿದ್ದು ನಮ್ಮ ಕಾಂಗ್ರೆಸ್ ಪಕ್ಷ. ಮಹಾತ್ಮ ಗಾಂಧಿ ಕಂಡ ಕನಸುಗಳಲ್ಲಿ ಒಂದು ಗ್ರಾಮಸ್ವರಾಜ್, ಇನ್ನೊಂದು ಮಹಿಳಾ ಅಭಿವೃದ್ಧಿ. ಮಹಿಳೆಯರಿಗೆ ಹೆಚ್ಚು ಹತ್ತಿರವಾಗಿರುವ ಮತ್ತೊಂದು ಇಲಾಖೆ ಎಂದರೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಎಂದರು.
ಗ್ರಾಮದ ಸಮಸ್ಯೆಗಳಿಗೆ ಗ್ರಾಮದಲ್ಲೇ ಪರಿಹಾರ ಕಂಡುಕೊಳ್ಳುವುದು, ಜನರು ತಮ್ಮ ಅಭಿವೃದ್ಧಿಯಲ್ಲಿ ತಾವೇ ಭಾಗಿಯಾಗುವುದು, ಇದೇ ಪಂಚಾಯತ್ ರಾಜ್ ವ್ಯವಸ್ಥೆಯ ಉದ್ದೇಶ ಎಂದು ಹೇಳಿದರು.
ಅಭಿವೃದ್ಧಿ ವಿಷಯದಲ್ಲಿ ಜನಪ್ರತಿನಿಧಿಗಳ ಜೊತೆ ಕೈಜೋಡಿಸುವುದೇ ಮೊದಲಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ). ನನ್ನ ಕ್ಷೇತ್ರದ ವ್ಯಾಪ್ತಿಗೆ ಬರುವ 50ಕ್ಕೂ ಹೆಚ್ಚು ಗ್ರಾಮ ಪಂಚಾಯತಿಗಳಲ್ಲಿ ಪಿಡಿಒಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ನಾನು ತರುವ ಅನುದಾನವನ್ನು ಸಮರ್ಪಕವಾಗಿ ಬಳಸಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಇವತ್ತು ಯಾವುದೇ ಕ್ಷೇತ್ರಗಳು ಸುಧಾರಣೆ ಆಗಬೇಕಾದರೆ, ಪಂಚಾಯತ್ ಇಲಾಖೆಯ ಅಧಿಕಾರಿಗಳ ಪಾತ್ರ ಮಹತ್ವದಾಗಿದೆ. ಬೆಂಗಳೂರು, ದೆಹಲಿಯಲ್ಲಿ ಕುಳಿತು ರೂಪಿಸುವ ಯೋಜನೆಗಳನ್ನು ಗ್ರಾಮಮಟ್ಟಕ್ಕೆ ತಲುಪಿಸಲು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ, ಸಿಬ್ಬಂದಿ ವರ್ಗದವರ ಪಾತ್ರ ದೊಡ್ಡದು ಎಂದು ಸಚಿವರು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಶಾಸಕರಾದ ಮಹಾಂತೇಶ್ ಕೌಜಲಗಿ, ಆಸೀಫ್ ಸೇಠ್, ಬಾಬಾಸಾಹೇಬ್ ಪಾಟೀಲ, ಗಣೇಶ್ ಹುಕ್ಕೇರಿ, ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಬುಡಾ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ, ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ವಿನಯ ನಾವಲಗಟ್ಟಿ, ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Laxmi News 24×7