ಪಾಟ್ನಾ: ನಿಂಬೆ ಹಣ್ಣು ಕಿತ್ತಿದ್ದಕ್ಕೆ ಬಾಲಕನಿಗೆ ಮನಬಂದಂತೆ ಥಳಿಸಿ ಕೊಲೆ ಮಾಡಿರುವ ಘಟನೆ ಬಿಹಾರದ ನಳಂದಾದ ಸಕ್ರವಾ ಗ್ರಾಮದಲ್ಲಿ ನಡೆದಿದೆ.
ಸಕ್ರವಾ ಗ್ರಾಮದ ನಿವಾಸಿಯೊಬ್ಬರ ತೋಟದಿಂದ ಬಾಲಕ ಕೆಲವು ನಿಂಬೆಹಣ್ಣುಗಳನ್ನು ಕಿತ್ತಿದ್ದ. ಇದರಿಂದ ಕೆರಳಿದ ಮಾಲೀಕ ಬಾಲಕನನ್ನು ಮನಬಂದಂತೆ ಥಳಿಸಿ ಕೊಲೆ ಮಾಡಿದ್ದಾನೆ. ಭೀಕರವಾಗಿ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಘಟನೆ ನಡೆದ ಬೆನ್ನಲ್ಲೇ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರಿಗೆ ಗ್ರಾಮಸ್ಥರು ಅಡ್ಡಿಪಡಿಸಿ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಇದೀಗ ಪ್ರಕರಣದ ತನಿಖೆ ನಡೆಯುತ್ತಿದ್ದು, ಘಟನೆಗೆ ನಿಖರ ಕಾರಣ ತಿಳಿಯುವಲ್ಲಿ ಕಾರ್ಯನಿರತರಾಗಿದ್ದಾರೆ.
ಬಾಲಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸದರ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಇತರ ಹಿರಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
Laxmi News 24×7