Breaking News

ಶಾಲಾ-ಕಾಲೇಜುಗಳಲ್ಲಿ ಹಿಜಬ್‌ಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ – ಕೇಸರಿ ಶಾಲಿಗಿಲ್ಲ ಅವಕಾಶ

Spread the love

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ರಾಜ್ಯ ಸರ್ಕಾರ ಮತ್ತೆ ಅವಕಾಶ ಕಲ್ಪಿಸಿದೆ. ಎಲ್ಲಾ ಧರ್ಮಗಳ ಧಾರ್ಮಿಕ, ಸಾಂಪ್ರದಾಯಿಕ ವಸ್ತುಗಳಿಗೆ ಅವಕಾಶ ಕೊಡಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಶೈಕ್ಷಣಿಕ ವರ್ಷದಿಂದಲೇ ಆದೇಶ ಜಾರಿಗೆ ಬರಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಹಿಜಬ್‌ ನಿರ್ಬಂಧಿಸಿ 2022 ರಲ್ಲಿ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನ ಹಿಂಪಡೆದ ಸರ್ಕಾರ, ಹಿಜಬ್‌ ಧರಿಸಲು ಅವಕಾಶ ಕಲ್ಪಿಸಿ ಹೊಸ ಆದೇಶ ಜಾರಿ ಮಾಡಿದೆ. ಇದೇ ವೇಳೆ ಕೇಸರಿ ಶಾಲಿಗೆ ಅವಕಾಶ ಇದೆಯಾ ಎಂಬ ಪ್ರಶ್ನೆಗೆ ಸಚಿವರು ʻಇಲ್ಲʼ ಎಂದು ಉತ್ತರಿಸಿದ್ದಾರೆ.

ಸರ್ವಶಿಕ್ಷಣ ಕಚೇರಿಯಲ್ಲಿ ಸಚಿವ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್ ಅವರೊಂದಿಗೆ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ಆದೇಶ ಜಾರಿಗೊಳಿಸಿರುವುದಾಗಿ ಹೇಳಿದರು.
ಶಿಕ್ಷಣ ಇಲಾಖೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಮಾಡಿದ್ದೇವೆ. ಜನಿವಾರ ಘಟನೆ ಇತ್ತೀಚೆಗೆ ಆಗಿತ್ತು. ಇದರಿಂದ ಮಕ್ಕಳಿಗೆ ಸಮಸ್ಯೆ ಆಗ್ತಿತ್ತು. ಮಾನಸಿಕ ಹಿಂಸೆ ಆಗ್ತಿತ್ತು. ಆದ್ದರಿಂದ ಧಾರ್ಮಿಕ ವಸ್ತ್ರಗಳಿಗೆ ಶಾಲಾ-ಕಾಲೇಜುಗಳಿಗೆ ಅವಕಾಶ ನೀಡಲಾಗಿದೆ. ಜನಿವಾರ, ಶಿವದಾರ ಸೇರಿ ಧಾರ್ಮಿಕ ವಸ್ತುಗಳಿಗೆ ಅವಕಾಶ ನೀಡಲಾಗಿದೆ. 1-12ನೇ ತರಗತಿವರೆಗೂ ಇದು ಅನ್ವಯವಾಗಲಿದೆ. ಎಲ್ಲಾ ಧರ್ಮದ ಧಾರ್ಮಿಕ, ಸಂಪ್ರದಾಯದ ವಸ್ತುಗಳಿಗೂ ಅವಕಾಶ ಕೊಡಲಾಗಿದೆ ಎಂದು ತಿಳಿಸಿದರು.
ಇನ್ನೂ ಹಿಜಬ್‌ಗೆ ಶಾಲಾ – ಕಾಲೇಜುಗಳಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ. ವಿದ್ಯಾರ್ಥಿಗಳು ಸಾಮಾನ್ಯವಾಗಿ ಧರಿಸುವ ಪೇಟ/ಟರ್ಬನ್‌, ಜನಿವಾರ/ಪವಿತ್ರ ದಾರ, ಶಿವದಾರ, ರುದ್ರಾಕ್ಷಿ ತಲೆವಸ್ತ್ರ/ಹಿಜಬ್‌ಗೆ ಅವಕಾಶ ಕಲ್ಪಿಸಲಾಗಿದೆ. ಮಕ್ಕಳ ಪರವಾಗಿ ಈ ನಿರ್ಧಾರ ಮಾಡಲಾಗಿದೆ ಎಂದು ವಿವರಿಸಿದರು.

ಕೇಸರಿ ಶಾಲು ಧಾರ್ಮಿಕ ಅಂತ ಬರೋದಿಲ್ಲ, ಆದ್ದರಿಂದ ಕೇಸರಿ ಶಾಲಿಗೆ ಶಾಲಾ – ಕಾಲೇಜುಗಳಲ್ಲಿ ಅವಕಾಶ ಇಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದರು.2022 ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಶಾಲಾ – ಕಾಲೇಜುಗಳಲ್ಲಿ ಹಿಜಬ್‌ ನಿಷೇಧ ಮಾಡಿ ಆದೇಶ ಹೊರಡಿಸಿತ್ತು. ನಾವು 2022 ರ ಸರ್ಕಾರದ ಆದೇಶ ಹಿಂಪಡೆದು ಹೊಸ ಆದೇಶ ಮಾಡಿದ್ದೇವೆ ಎಂದು ತಿಳಿಸಿದರು.

ಇನ್ನೂ ಬಿಜೆಪಿ ಸರ್ಕಾರದ ಆದೇಶ ಎತ್ತಿಹಿಡಿದಿದ್ದ ಹೈಕೋರ್ಟ್‌ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿ, ಹೈಕೋರ್ಟ್ ಆದೇಶದ ಬಗ್ಗೆ ಮಾತಾಡಲ್ಲ, ಅದನ್ನು ಲೀಗಲ್ ಟೀಂ ಅವರು ನೋಡಿಕೊಳ್ತಾರೆ ಎಂದು ಉತ್ತರಿಸಿದರು.

ರಾಜ್ಯ ಸರ್ಕಾರದ ಹೊಸ ಆದೇಶದಲ್ಲಿ ಏನಿದೆ?

* ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಪದವಿಪೂರ್ವ ಕಾಲೇಜುಗಳು, ಸಂಸ್ಥೆಯ ಅಗತ್ಯಗಳು ಮತ್ತು ಸರ್ಕಾರದ ನಿರ್ದೇಶನಗಳಿಗೆ ಅನುಗುಣವಾಗಿ ನಿಯಮಾನುಸಾರ ಸಮವಸ್ತ್ರವನ್ನ ನಿಗದಿಪಡಿಸಿ ಕಡ್ಡಾಯಗೊಳಿಸುವುದನ್ನ ಮುಂದುವರಿಸತಕ್ಕದ್ದು.

* ವಿದ್ಯಾರ್ಥಿಗಳು ನಿಗದಿಪಡಿಸಲಾದ ಸಮವಸ್ತ್ರದೊಂದಿಗೆ ಸೀಮಿತ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳನ್ನ ಧರಿಸಲು ಅನುಮತಿಸಲಾಗಿದೆ. ಆದರೆ, ಇಂತಹ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳು ಸಮವಸ್ತ್ರಕ್ಕೆ ಪೂರಕವಾಗಿರಬೇಕು ಮತ್ತು ನಿಗದಿತ ಸಮವಸ್ತ್ರವನ್ನ ಬದಲಿಸುವ, ಮೂಲ ಉದ್ದೇಶವನ್ನ ಮಾರ್ಪಡಿಸುವ ಅಥವಾ ವಿಫಲಗೊಳಿಸುವಂತಿರಬಾರದು.

* ಇಂತಹ ಅನುಮತಿಸಬಹುದಾದ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳು ವಿದ್ಯಾರ್ಥಿಗಳು ಸಾಮಾನ್ಯವಾಗಿ ಧರಿಸುವ ಪೇಟ/ಟರ್ಬನ್, ಜನಿವಾರ/ಪವಿತ್ರ ದಾರ, ಶಿವದಾರ, ರುದ್ರಾಕ್ಷಿ, ತಲೆವಸ್ತ್ರ/ಹಿಜಾಬ್ ಅಥವಾ ಇತರೆ ಯಾವುದೇ ಸಮಾನ ಸ್ವರೂಪದ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳು ಸೇರಿರಬಹುದು. ಆದರೆ, ಇವು ಶಿಸ್ತು, ಸುರಕ್ಷತೆ ಮತ್ತು ವಿದ್ಯಾರ್ಥಿಯ ಗುರುತಿಸುವಿಕೆಗೆ ಅಡ್ಡಿಯಾಗಬಾರದು.

* ನಿಗದಿತ ಸಮವಸ್ತ್ರದೊಂದಿಗೆ ಇಂತಹ ಸೀಮಿತ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳು ಧರಿಸಿರುವ ಕಾರಣಕ್ಕಾಗಿ ಯಾವುದೇ ವಿದ್ಯಾರ್ಥಿಗೆ ಶಿಕ್ಷಣ ಸಂಸ್ಥೆ ತರಗತಿ ಪರೀಕ್ಷಾ ಕೊಠಡಿ ಅಥವಾ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರವೇಶವನ್ನು ನಿರಾಕರಿಸುವಂತಿಲ್ಲ.

* ಇಂತಹ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳನ್ನು ಧರಿಸುವಂತೆ ಯಾವುದೇ ವಿದ್ಯಾರ್ಥಿಯನ್ನು ಒತ್ತಾಯಿಸುವಂತಿಲ್ಲ. ಅದೇ ರೀತಿ ಸರ್ಕಾರವು ಅನುಮತಿಸಿರುವ ಸೀಮಿತ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳನ್ನು ಬಲವಂತವಾಗಿ ತೆಗೆಯುವಂತೆಯೂ ಒತ್ತಾಯಿಸುವಂತಿಲ್ಲ. ಆದರೆ, ಪರೀಕ್ಷಾ ಸಂದರ್ಭಗಳಲ್ಲಿ ರಾಷ್ಟ್ರ ಮತ್ತು ರಾಜ್ಯ ಮಟ್ಟದ ವಸ್ತ್ರ, ಸಂಹಿತೆಯ ನಿಯಮಗಳನ್ನು ಸಂದರ್ಭೋಚಿತವಾಗಿ ಸಂಬಂಧಿಸಿದ ಪ್ರಾಧಿಕಾರಗಳು ಅಳವಡಿಸಿಕೊಳ್ಳತಕ್ಕದ್ದು.

* ಈ ಆದೇಶದ ಅನುಷ್ಠಾನವು ಏಕರೂಪವಾಗಿರಬೇಕು. ಧಾರ್ಮಿಕ, ಸಾಂಪ್ರದಾಯಿಕ ನಿಷ್ಪಕ್ಷಪಾತತೆಯಿಂದ ಕೂಡಿರಬೇಕು ಮತ್ತು ತಾರತಮ್ಯ ರಹಿತವಾಗಿರಬೇಕು.

* ಸಮಾನತೆ, ಘನತೆ, ಭಾತೃತ್ವ, ಜಾತ್ಯತೀತತೆ, ವೈಜ್ಞಾನಿಕತೆ, ವೈಚಾರಿಕತೆ ಮತ್ತು ಶಿಕ್ಷಣದ ಹಕ್ಕು ಎಂಬ ಸಾಂವಿಧಾನಿಕ ಮೌಲ್ಯಗಳಿಗೆ ಅನುಗುಣವಾಗಿರತಕ್ಕದ್ದು.


Spread the love

About Laxminews 24x7

Check Also

ತಕ್ಷಣವೇ ದಲಿತರ ಮೀಸಲಾತಿ ಹೆಚ್ಚಿಸಬೇಕು – ಛಲವಾದಿ ಆಗ್ರಹ

Spread the loveಬೆಂಗಳೂರು: ಈ ಹಿಂದೆ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರ ಇದ್ದಾಗ ಏರಿಕೆ ಮಾಡಿದ್ದ ದಲಿತರ ಮೀಸಲಾತಿಯನ್ನು ಕಾಂಗ್ರೆಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ