ಮೂಡಲಗಿ: ಕೌಜಲಗಿಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗಿದ್ದರೂ, ಸಿಬ್ಬಂದಿ ಕೊರತೆ ಇದೆ. ಮುಂದಿನ ದಿನಗಳಲ್ಲಿ ಕೌಜಲಗಿ ಸಮುದಾಯ ಆರೋಗ್ಯ ಕೇಂದ್ರವನ್ನು ಬಿಎಲ್ಜೆ ಟ್ರಸ್ಟ್ ಮೂಲಕ ನಿರ್ವಹಿಸಲು ಚಿಂತನೆ ನಡೆದಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ತಾಲೂಕಿನ ಕಮಲದಿನ್ನಿ ಗ್ರಾಮದ ಮಹಾತ್ಮಾ ಗಾಂಧಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಸದುದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕೌಜಲಗಿ ಸೇರಿದಂತೆ ಕ್ಷೇತ್ರದ ವಿವಿಧೆಡೆ ಆಸ್ಪತ್ರೆಗಳಿದ್ದರೂ, ಜನರಿಗೆ ಅವುಗಳ ಸೌಲಭ್ಯ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸಲಾಗುವುದು. ವಿವಿಧ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಂಡು ಬಂದಿದೆ.
ಅಲ್ಲಿಯೂ ಸಹ ಟ್ರಸ್ಟ್ ಮೂಲಕ ಅಗತ್ಯವಿರುವ ಕಡೆಗಳಲ್ಲಿ ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗುವುದು ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಜೆಜೆಎಂ ಕಾಮಗಾರಿ ಜನರಿಗೆ ಮತ್ತಷ್ಟು ಹತ್ತಿರವಾಗಬೇಕು. ಈ ದಿಸೆಯಲ್ಲಿ ಅಧಿಕಾರಿಗಳು ಪ್ರತಿ ಗ್ರಾಮದ ಮನೆ, ಮನೆಗೆ ತೆರಳಿ ನಲ್ಲಿ ನೀರಿನ ಸಂಪರ್ಕದ ಕುರಿತು ಮಾಹಿತಿ ನೀಡಬೇಕು. ಕಲ್ಮಡ್ಡಿ ಮತ್ತು ರಾಮೇಶ್ವರ ಏತ ನೀರಾವರಿ ಭಾಗದ ರೈತರಿಗೆ ಅಗತ್ಯವಿರುವ ಸಂದರ್ಭದಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದರು.
ತಹಸೀಲ್ದಾರ್ ಶ್ರೀಶೈಲ ಗುಡುಮೆ, ತಾಪಂ ಇಒಗಳಾದ ಪ್ರಶಾಂತ ನೆರಳೆಕರ, ಪರಶುರಾಮ ಗಸ್ತಿ, ಸಿಪಿಐ ಶ್ರೀಶೈಲ ಬ್ಯಾಕೂಡ, ಬಿಇಒಗಳಾದ ಪ್ರಕಾಶ ಹಿರೇಮಠ, ಜಿ.ಬಿ.ಬಳಗಾರ ಇದ್ದರು.
Laxmi News 24×7