ಧಾರವಾಡ: ಪ್ರತ್ಯೇಕ ಪಾಲಿಕೆ ವಿಚಾರವನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಂಡು ಬಿಜೆಪಿ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿರುವುದು ಖಂಡನೀಯ ಎಂದು ವಿಧಾನಸಭೆ ಪ್ರತಿಪಕ್ಷ ಉಪನಾಯಕ ಮತ್ತು ಶಾಸಕ ಅರವಿಂದ ಬೆಲ್ಲದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಧಾರವಾಡ ಭಾಗದ ಅಭಿವೃದ್ಧಿ ಕುಂಠಿತವಾಗಿರುವುದನ್ನು ಮನಗಂಡು, ಈ ಹಿಂದೆ ಬಿಜೆಪಿಯೇ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಸ್ಥಳಿಯ ಶಾಸಕರ ನೇತೃತ್ವದಲ್ಲಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸಬೇಕೆಂಬ ನಿರ್ಧಾರ ಕೈಗೊಂಡಿತ್ತು.
ಬದಲಾದ ಪರಿಸ್ಥಿತಿಯಲ್ಲಿ 16ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಸಂದರ್ಭದಲ್ಲಿ ಅವಳಿನಗರಗಳು ಒಟ್ಟಾಗಿ ಉಳಿದರೆ ಜನಸಂಖ್ಯೆ ಆಧಾರದ ಮೇಲೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ದೊರೆಯಲಿದೆ. ಅಭಿವೃದ್ಧಿ ಯೋಜನೆಗಳಿಗೆ ವೇಗ ಸಿಗಬಹುದು ಎಂಬ ಉದ್ದೇಶದಿಂದ ಪುನರ್ ವಿಮರ್ಶೆ ಮಾಡಲು ಬಿಜೆಪಿ ನಿರ್ಧರಿಸಿತ್ತು. ಈ ಸಂಬಂಧ ಸಚಿವ ಜೋಶಿ ಹಾಗೂ ನನ್ನ ನೇತೃತ್ವದ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದು, ಪ್ರಕ್ರಿಯೆ ಕಾರ್ಯಗತ ಹಂತದಲ್ಲಿದೆ.
ಕಾಂಗ್ರೆಸ್ ಸರ್ಕಾರವು ಸುಮಾರು 11 ತಿಂಗಳ ಹಿಂದೆಯೇ ಪ್ರಸ್ತಾವನೆ ಸಲ್ಲಿಸಿದ್ದರೂ, ರಾಜ್ಯಪಾಲರನ್ನು ಭೇಟಿ ಮಾಡಿ ಮುಂದಿನ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಈ ಹೋರಾಟವನ್ನು ಕಾಂಗ್ರೆಸ್ನವರು ತಮ್ಮ ರಾಜಕೀಯ ಅಜೆಂಡಾಕ್ಕೆ ಬಳಸಿಕೊಳ್ಳದಂತೆ ನೇತೃತ್ವ ವಹಿಸಿರುವ ಬಿ.ಡಿ. ಹಿರೇಮಠ ಅವರು ಎಚ್ಚರಿಕೆ ವಹಿಸಬೇಕು ಎಂದು ಅರವಿಂದ ಬೆಲ್ಲದ ಅವರು ಮನವಿ ಮಾಡಿದ್ದಾರೆ.
Laxmi News 24×7