ಜಿಲ್ಲೆಯ ಎಲ್ಲ ಶಾಲೆ ಹಾಗೂ ಅಂಗನವಾಡಿಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಸೌಕರ್ಯ ಕಲ್ಪಿಸಬೇಕು ಎಂದು ಜಿಪಂ ಸಿಇಒ ರಾಹುಲ ಶಿಂಧೆ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಶಾಲೆ ಹಾಗೂ ಅಂಗನವಾಡಿಗಳ ಪ್ರಾರಂಭೋತ್ಸವ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಶಾಲೆ ಹಾಗೂ ಅಂಗನವಾಡಿಗಳ ಒಳ, ಹೊರಭಾಗದಲ್ಲಿ ಸ್ವಚ್ಛತೆ ಕೈಗೊಳ್ಳಲು ಆದ್ಯತೆ ನೀಡಬೇಕು. ಆಹಾರ ಪದಾರ್ಥಗಳ ದಾಸ್ತಾನು ಕೊಠಡಿ ಶುಚಿಯಾಗಿಟ್ಟುಕೊಳ್ಳಬೇಕು. ಆಹಾರ ಪದಾರ್ಥ ಗುಣಮಟ್ಟ ಪರಿಶೀಲಿಸಬೇಕು. ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಇತರ ಸೌಕರ್ಯ ಕಲ್ಪಿಸಬೇಕು ಎಂದು ಹೇಳಿದರು.
ಎಲ್ಲ ಗ್ರಾಪಂ, ಸ್ಥಳಿಯ ಸಂಸ್ಥೆಗಳು ಹಾಗೂ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿನ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳ ಸ್ಥಿತಿಗತಿ ಪರಿಶೀಲಿಸಿ, ಅಗತ್ಯವಿದ್ದರೆ ಬೇರೆ ಕಡೆ ಸ್ಥಳಾಂತರಕ್ಕೆ ಕ್ರಮ ವಹಿಸಬೇಕು. ಶಾಲೆ, ಅಂಗನವಾಡಿಗಳಿಗೆ ಪೂರೈಕೆಯಾಗುವ ಕುಡಿಯುವ ನೀರನ್ನು ಪರಿಶೀಲಿಸಿ ಪೂರೈಸಬೇಕು. ಶಾಲೆಗಳ ಸುತ್ತಲಿನ ಅಪಾಯಕಾರಿ ವಿದ್ಯುತ್ ತಂತಿ, ವಿದ್ಯುತ್ ದೀಪ ಸ್ಥಳಾಂತರಿಸಬೇಕು ಎಂದು ಸೂಚಿಸಿದರು.
ಜೂನ್ 1ರಿಂದ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಬೇಕು. ಯಾವ ಮಕ್ಕಳೂ ಶಾಲೆಯಿಂದ ಹೊರಗುಳಿಯದಂತೆ ಕ್ರಮವಹಿಸಬೇಕು. ಅಂಗನವಾಡಿಗಳಲ್ಲಿ ಮೂರನೇ ಶನಿವಾರ, ಶಾಲೆಗಳಲ್ಲಿ 4ನೇ ಶನಿವಾರ ಪಾಲಕರ ಸಭೆ ಕೈಗೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲೆಯ ಎಲ್ಲ ವಸತಿ ನಿಲಯಗಳಲ್ಲೂ ಅಗತ್ಯ ಸೌಕರ್ಯ ಕಲ್ಪಿಸಬೇಕು. ಮಕ್ಕಳ ಸುರತೆಗೆ ಆದ್ಯತೆ ನೀಡಬೇಕು. ಅಗತ್ಯ ಭದ್ರತಾ ಸಿಬ್ಬಂದಿ ಹಾಗೂ ಸಿಸಿ ಕ್ಯಾಮರಾ ಅಳವಡಿಸಬೇಕು. ಈ ಹಿಂದಿನಂತೇ ಸಂಜೆ ವೇಳೆ ಆನ್ಲೈನ್ ತರಗತಿ ನಡೆಸಬೇಕು ಎಂದು ನಿರ್ದೇಶಿಸಿದರು.
ಸಭೆಯಲ್ಲಿ ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ, ಉಪ ಕಾರ್ಯದರ್ಶಿ ಬಸವರಾಜ ಅಡವಿಮಠ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ ಇತರರಿದ್ದರು.
ಜಿಲ್ಲಾದ್ಯಂತ ಎಲ್ಲ ಶಾಲೆ, ಅಂಗನವಾಡಿ, ಸರ್ಕಾರಿ ಕಚೇರಿಗಳಲ್ಲಿ ಸಸಿ ನೆಡುವ ಮೂಲಕ ವನಮಹೋತ್ಸವ ಅದ್ದೂರಿಯಾಗಿ ಆಚರಿಸಬೇಕು. ಪರಿಸರದ ಕುರಿತು ಜಾಗೃತಿ ಮೂಡಿಸಬೇಕು. ಶಾಲಾ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಮಾದರಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಸಿಇಒ ರಾಹುಲ್ ಶಿಂಧೆ ಸೂಚಿಸಿದರು.
Laxmi News 24×7