ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಇಂದು ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಕರ್ನಾಟಕ ಮತ್ತು ಮಲೇಷ್ಯಾ ನಡುವಿನ ಸಂಬಂಧವನ್ನು ಇನ್ನಷ್ಟು ಬಲಪಡಿಸುವ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದಾರೆ.
ಈ ಕುರಿತು ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಯಾಗಿ ಹೊಸ ಜವಾಬ್ದಾರಿ ವಹಿಸಿಕೊಂಡಿರುವ ಹಿನ್ನೆಲೆ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಶಿಕ್ಷಣ, ತಂತ್ರಜ್ಞಾನ, ನಾವೀನ್ಯತೆ ಹಾಗೂ ಜನರ ನಡುವಿನ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆ ನಡೆಸಿದ್ದೇವೆ. ಕರ್ನಾಟಕದಲ್ಲಿ ಹಲವು ಮಲೇಷ್ಯಾ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವುದರಿಂದ ಉಭಯ ದೇಶಗಳ ನಡುವಿನ ಸಹಭಾಗಿತ್ವವನ್ನು ಇನ್ನಷ್ಟು ಗಟ್ಟಿಗೊಳಿಸಲು ಉತ್ತಮ ಅವಕಾಶಗಳಿವೆ ಎಂದು ಬರೆದಿದ್ದಾರೆ.
ಕರ್ನಾಟಕ ಮತ್ತು ಮಲೇಷ್ಯಾ ನಡುವಿನ ಸಹಕಾರವನ್ನು ಇನ್ನಷ್ಟು ವಿಸ್ತರಿಸುವ ಉದ್ದೇಶದಿಂದ ಡಿ.ಕೆ.ಶಿವಕುಮಾರ್ ಅವರಿಗೆ ಮಲೇಷ್ಯಾಕ್ಕೆ ಭೇಟಿ ನೀಡುವಂತೆ ಅನ್ವರ್ ಇಬ್ರಾಹಿಂ ಆಹ್ವಾನ ನೀಡಿದ್ದಾರೆ. ಜೂನ್ 3 ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು 13 ಸಚಿವರೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದರು. ಮೊಟ್ಟಮೊದಲ ಬಾರಿ ಸಿಎಂ ಆದ ಹಿನ್ನೆಲೆ ಅನೇಕ ಗಣ್ಯರು ಅವರಿಗೆ ಶುಭಕೋರಿದ್ದರು.
ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿದ್ದ ಡಿ.ಕೆ.ಶಿವಕುಮಾರ್, ಪ್ರಧಾನಿಯವರಿಗೆ ಧನ್ಯವಾದ ತಿಳಿಸಿ, ರಾಜ್ಯದ ಅಭಿವೃದ್ಧಿ ವಿಚಾರವಾಗಿ ಅವರ ಭೇಟಿಗೆ ತೆರಳುವುದಾಗಿ ಹೇಳಿದ್ದಾರೆ. ಇದೇ ವೇಳೆ, ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಅಭಿವೃದ್ಧಿ ವಿಷಯದಲ್ಲಿ ಎಲ್ಲರೂ ಸಹಕಾರ ನೀಡಬೇಕು. ರಾಜ್ಯದ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಅಭಿವೃದ್ಧಿ ವಿಷಯದಲ್ಲಿ ಎಲ್ಲರೂ ಸಹಕಾರ ನೀಡಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
Laxmi News 24×7