ಬೆಂಗಳೂರು: ರಾಜ್ಯ ಸಚಿವ ಸಂಪುಟದ ಮೊದಲ ಹಂತದಲ್ಲಿ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ, ಇಂದು ಬೆಂಗಳೂರಿನ ಪಾದರಾಯನಪುರದಲ್ಲಿ ಅವರ ಬೆಂಬಲಿಗರು ಹಾಗೂ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಿದರು.
ಪಾಲಿಕೆ ಮಾಜಿ ಸದಸ್ಯ ಇಮ್ರಾನ್ ಪಾಷಾ ನೇತೃತ್ವದಲ್ಲಿ ಜಮೀರ್ ಅಹಮ್ಮದ್ ಅವರಿಗೆ ಸಚಿವ ಹಾಗೂ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿ ‘ವಿಧಾನಸೌಧ ಚಲೋ’ ಪಾದಯಾತ್ರೆಗೆ ಕರೆ ನೀಡಲಾಗಿತ್ತು. ಆದರೆ, ಹೈಕೋರ್ಟ್ ನಿರ್ದೇಶನದಂತೆ ಫ್ರೀಡಂ ಪಾರ್ಕ್ನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶ ಇರುವುದರಿಂದ ಪೊಲೀಸರು ಪಾದಯಾತ್ರೆಗೆ ಅನುಮತಿ ನಿರಾಕರಿಸಿದರು.
ಮುಂಜಾಗ್ರತಾ ಕ್ರಮವಾಗಿ ಹೊಸಹಳ್ಳಿ ಫ್ಲೈಓವರ್ ಮತ್ತು ಪಾದರಾಯನಪುರ ಮುಖ್ಯ ರಸ್ತೆಯನ್ನು ಬಂದ್ ಮಾಡಿ, ಬಿಗುವಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. ಸ್ಥಳದಲ್ಲಿ ಕೆಎಸ್ಆರ್ಪಿ ತುಕಡಿ ಹಾಗೂ ಸಿಆರ್ ತಂಡಗಳನ್ನು ನಿಯೋಜಿಸಲಾಗಿತ್ತು.
ಪ್ರತಿಭಟನೆಗೆ ಬೆಂಬಲ ಸೂಚಿಸಿ ಪಾದರಾಯನಪುರ ಮುಖ್ಯ ರಸ್ತೆಯ ವ್ಯಾಪಾರಿಗಳು ಸ್ವಯಂಪ್ರೇರಿತರಾಗಿ ಅಂಗಡಿಗಳನ್ನು ಬಂದ್ ಮಾಡಿದ್ದರು. ಜಮೀರ್ ಅಹಮ್ಮದ್ ಅವರ ಪೋಸ್ಟರ್ ಹಾಗೂ ಫೋಟೋಗಳನ್ನು ಹಿಡಿದ ನೂರಾರು ಮಹಿಳೆಯರು ಮತ್ತು ಪುರುಷರು ಇಮ್ರಾನ್ ಪಾಷಾ ಕಚೇರಿ ಬಳಿ ಜಮಾಯಿಸಿದರು. ಪೊಲೀಸರು ರಸ್ತೆಯ ಮಧ್ಯೆ ಬ್ಯಾರಿಕೇಡ್ಗಳನ್ನು ಹಾಕಿ ಜನರನ್ನು ಗಲ್ಲಿಗಳಲ್ಲಿಯೇ ತಡೆದರೂ, ನೂಕಾಟ-ತಳ್ಳಾಟ ನಡೆಸಿ ಪ್ರತಿಭಟನಾಕಾರರು ರಸ್ತೆಗೆ ಧಾವಿಸಿ ನ್ಯಾಯ ಬೇಕು ಎಂದು ಘೋಷಣೆ ಕೂಗಿದರು.
Laxmi News 24×7