ಹುಬ್ಬಳ್ಳಿ: ಪತ್ನಿ ಹಾಗೂ ಪೊಲೀಸರ ಕಿರುಕುಳದಿಂದ ಮನನೊಂದು ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಬೆಂಗೇರಿ ಹರಿಜನ ಕಾಲೋನಿಯಲ್ಲಿ ನಡೆದಿದೆ.
ಸಂತೋಷ್ ಅಳ್ಳೂರು (39) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೃತ ಸಂತೋಷ್ ಅವರು ತಮ್ಮ ಪತ್ನಿ ಲಲಿತಾ ಅಳ್ಳೂರು ಹಾಗೂ ಮಹಿಳಾ ಠಾಣೆ ಪೊಲೀಸರ ಕಿರುಕುಳವೇ ತಮ್ಮ ಸಾವಿಗೆ ಕಾರಣ ಎಂದು ಡೆತ್ ನೋಟ್ನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.
ಸುಮಾರು 18 ವರ್ಷಗಳ ಹಿಂದೆ ಲಲಿತಾಳನ್ನು ಪ್ರೀತಿಸಿ ಮದುವೆಯಾಗಿದ್ದ ಸಂತೋಷ್ ದಂಪತಿಗೆ ಮೂವರು ಮಕ್ಕಳಿದ್ದಾರೆ. ಪತ್ನಿಗೆ ಅಂಗನವಾಡಿಯಲ್ಲಿ ಉದ್ಯೋಗ ಸಿಗುವಂತೆ ಸಹಾಯ ಮಾಡಿದ್ದ ಸಂತೋಷ್, ಹುದ್ದೆ ಖಾಯಂ ಆದ ಬಳಿಕ ಪತ್ನಿಯ ವರ್ತನೆಯಲ್ಲಿ ಬದಲಾವಣೆ ಕಂಡುಬಂದಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ.
ಇದೇ ವಿಚಾರವಾಗಿ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿದ್ದು, ನಂತರ ಲಲಿತಾ ಮಹಿಳಾ ಠಾಣೆಗೆ ದೂರು ನೀಡಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಂತೋಷ್ ಅವರನ್ನು ಪೊಲೀಸ್ ಠಾಣೆಗೆ ಕರೆಯಿಸಿ ಕಿರುಕುಳ ನೀಡಲಾಗಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ.
ಈ ಎಲ್ಲ ಬೆಳವಣಿಗೆಗಳಿಂದ ಮನನೊಂದ ಸಂತೋಷ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ಪತ್ನಿ ಹಾಗೂ ಪೊಲೀಸರ ವಿರುದ್ಧ ಆರೋಪ ಮಾಡಿರುವುದಾಗಿ ತಿಳಿದುಬಂದಿದೆ.
ಸಂತೋಷ್ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. ಈ ಸಂಬಂಧ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
Laxmi News 24×7