ಬೆಳಗಾವಿ : ಗ್ಯಾರಂಟಿ ಯೋಜನೆಗಳಲ್ಲಿನ ಸಣ್ಣ ಪುಟ್ಟ ನೂನ್ಯತೆಗಳನ್ನು ಶೀಘ್ರ ಪರಿಹರಿಸಲಾಗುವುದು. ಇದಕ್ಕೆ ಪೂರಕವಾಗಿ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಕಾರ್ಯದ ಮೇಲೆ ತಾಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷರು, ಸದಸ್ಯರು ನಿಯಮಿತವಾಗಿ ಮೇಲ್ವಿಚಾರಣೆ ಮಾಡಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ (ಬ್ಯಾಡಗಿ) ನಿರ್ದೇಶನ ನೀಡಿದರು.
ಜಿಪಂ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ಗ್ಯಾರಂಟಿ ಯೊಜನೆಗಳ ಅನುಷ್ಠ್ಠಾನ ಪ್ರಾಧಿಕಾರ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಯಡಿ ನೋಂದಾಯಿಸಿಕೊಂಡ ಫಲಾನುಭವಿಗಳು ಮೃತಪಟ್ಟ ನಂತರವು ಖಾತೆಗೆ ನಗದು ಜಮೆಯಾಗುತ್ತಿರುವುದು ಕಂಡು ಬಂದಿದೆ. ಈವರೆಗೆ ಮೃತಪಟ್ಟವರ ಖಾತೆಗೆ ಜಮೆಯಾದ ಅಂದಾಜು 16 ಕೋಟಿ ರೂ. ವಾಪಸ್ಸಾಗಿದೆ ಎಂದು ವಿವರಿಸಿದರು.
ಗೃಹ ಜ್ಯೋತಿ ಯೋಜನೆಯ ಸದುಪಯೋಗ ಬೇರೆ ರಾಜ್ಯದ ಫಲಾನುಭವಿಗಳು ಬಳಸುತ್ತಿರುವುದನ್ನೂ ಗುರುತಿಸುವ ಕಾರ್ಯ ಪ್ರಾರಂಭಿಸಲಾಗಿದೆ. ಗ್ಯಾರಂಟಿ ಯೋಜನೆಯಡಿ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಪಟ್ಟಿಯಿಂದ ಕೈಬಿಟ್ಟಲ್ಲಿ ಅರ್ಹ ಫಲಾನುಭವಿಗಳಿಗೆ ಇನ್ನೂ ಹೆಚ್ಚಿನ ಸೌಲಭ್ಯ ನೀಡಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಪ್ರಾಧಿಕಾರದ, ಜಿಲ್ಲಾ, ತಾಲೂಕು ಅಧ್ಯಕ್ಷರು, ಸದಸ್ಯರು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಜಿಪಂ ಸಿಇಒ ರಾಹುಲ ಶಿಂಧೆ ಮಾತನಾಡಿ, ಗೃಹಲಕ್ಷ್ಮೀ ಯೋಜನೆಯ ಮೃತ ಫಲಾನುಭವಿಗಳ ಹೆಸರನ್ನು ಫಲಾನುಭವಿಗಳ ಪಟ್ಟಿಯಿಂದ ಕೈಬಿಡಬೇಕಿದೆ. ಈ ಕಾರ್ಯದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಅಂಗನವಾಡಿ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯ ಮನೆ ಮನೆಗೆ ಭೇಟಿ ನೀಡಿ ಮೃತರ ವಿವರಗಳನ್ನು ತ್ವರಿತವಾಗಿ ಪಡೆಯಬೇಕು. ಮುಂದಿನ ಮೂರು ವಾರಗಳಲ್ಲಿ ಈ ಕಾರ್ಯ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ, ವಿವಿಧ ತಾಲೂಕು ಅಧ್ಯಕ್ಷರು, ಸದಸ್ಯರುಗಳು, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
Laxmi News 24×7