ಮುಂಬೈ: ಇಲ್ಲಿನ ಥಾಣೆ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಶಿವಸೇನೆ ಕಾರ್ಪೊರೇಟರ್ ಸೇರಿ ಆರು. ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಮೂವರನ್ನು ಬಂಧಿಸಿದ್ದಾರೆ
ಶಿವಸೇನೆ ಕಾರ್ಪೊರೇಟರ್ ರಮೇಶ್ ಸುಕ್ರಿಯಾ ಮಹಾತ್ರೆ ಹಾಗೂ ಅವರ ಐವರು ಬೆಂಬಲಿಗರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರನ್ನು ಬಂಧಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಗರ್ಭಿಣಿಯೊಬ್ಬರಿಗೆ ಹೆರಿಗೆ ಬಳಿಕ ಜನಿಸಿದ ಶಿಶುವಿನ ಆರೋಗ್ಯ ಗಂಭೀರವಾಗಿತ್ತು. ಥಾಣೆಯ ಡೊಂಬಿವ್ಲಿಯಲ್ಲಿರುವ ಕಲ್ಯಾಣ-ಡೊಂಬಿವ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಹಾಸಿಗೆ ಲಭ್ಯವಿರಲಿಲ್ಲ. ಹೀಗಾಗಿ ಅಲ್ಲಿನ ವೈದ್ಯರು ಮಗುವನ್ನು ಹೆಚ್ಚಿನ ಚಿಕಿತ್ಸಾ ಸೌಲಭ್ಯವಿರುವ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಕುಟುಂಬದವರಿಗೆ ಸಲಹೆ ನೀಡಿದ್ದರು. ಇದೇ ವಿಚಾರಕ್ಕೆ ಆಕ್ರೋಶಗೊಂಡ ಕುಟುಂಬದ ಸದಸ್ಯರು ವೈದ್ಯರೊಂದಿಗೆ ವಾಗ್ವಾದ ನಡೆಸಿದ್ದು, ನಂತರ ಕಾರ್ಪೊರೇಟರ್ ರಮೇಶ್ ಮಹಾತ್ರೆ ಹಾಗೂ ಅವರ ಬೆಂಬಲಿಗರು ಆಸ್ಪತ್ರೆಗೆ ಆಗಮಿಸಿ ವೈದ್ಯರು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಸಿಸಿಟಿವಿ ದೃಶ್ಯಗಳಲ್ಲಿ ಆಸ್ಪತ್ರೆಯೊಳಗೆ ಮಹಿಳಾ ವೈದ್ಯರೊಂದಿಗೆ ದುರ್ವರ್ತನೆ ತೋರಿರುವುದು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ತಳ್ಳಾಡಿರುವ ದೃಶ್ಯಗಳು ಕಂಡುಬಂದಿದೆ. ಈ ವಿಡಿಯೋ ಬಹಿರಂಗವಾದ ಬಳಿಕ ವೈದ್ಯಕೀಯ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಘಟನೆಯ ನಂತರ ವೈದ್ಯರು, ನರ್ಸ್ಗಳು ಹಾಗೂ ಅರೆವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ ನಡೆಸಿ, ಆಸ್ಪತ್ರೆಯ ಹೊರರೋಗಿ ಸೇರಿದಂತೆ ನಿಯಮಿತ ಸೇವೆಗಳನ್ನು ಸ್ಥಗಿತಗೊಳಿಸಿದರು. ತುರ್ತು ಚಿಕಿತ್ಸಾ ಸೇವೆಗಳನ್ನು ಮಾತ್ರ ಮುಂದುವರಿಸಲಾಗಿದ್ದು, ವೈದ್ಯಕೀಯ ಸಿಬ್ಬಂದಿಯ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯ ಪರಿಣಾಮ ಕೆಡಿಎಂಸಿ ವ್ಯಾಪ್ತಿಯ ಹಲವು ಆಸ್ಪತ್ರೆಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ.
ವಿಷ್ಣುನಗರ ಪೊಲೀಸರು, ಕಾರ್ಪೊರೇಟರ್ ರಮೇಶ್ ಮಹಾತ್ರೆ ಸೇರಿದಂತೆ ಆರು ಮಂದಿಯ ವಿರುದ್ಧ ಬಿಎನ್ಎಸ್ ವಿವಿಧ ಕಲಂಗಳಡಿ ಎಫ್ಐಆರ್ ದಾಖಲಿಸಿದ್ದಾರೆ. ಇದುವರೆಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದವರ ಬಂಧನಕ್ಕೆ ಕ್ರಮ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ವೇಳೆ ಕಾರ್ಪೊರೇಟರ್ ರಮೇಶ್ ಮಹಾತ್ರೆ ತಮ್ಮ ಮೇಲಿನ ಆರೋಪಗಳನ್ನು ತಳ್ಳಿಹಾಕಿದ್ದು, ತಾವು ಯಾವುದೇ ವೈದ್ಯರ ಮೇಲೆ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಿಲ್ಲ ಎಂದು ಹೇಳಿದ್ದಾರೆ.
Laxmi News 24×7