ನವದೆಹಲಿ: ಜಿಬಿಎ ಚುನಾವಣೆ ನಡೆಸಲು ಡಿ.31ರವರೆಗೆ ಕಾಲಾವಕಾಶ ನೀಡುವಂತೆ ಕರ್ನಾಟಕ ಸರ್ಕಾರ ಹಾಗೂ ಗ್ರೇಟರ್ ಬೆಂಗಳೂರು ಅಥಾರಿಟಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಜುಲೈ 17ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ಜಿಬಿಎ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅರ್ಜಿಯನ್ನು ಉಲ್ಲೇಖಿಸಿ, ಜುಲೈ 17ರಂದು ನಿಗದಿಯಾಗಿರುವ ವಿಚಾರಣೆಯನ್ನು ಪಟ್ಟಿಯಿಂದ ಕೈಬಿಡದಂತೆ ಮನವಿ ಮಾಡಿದರು. ಇದಕ್ಕೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಹಾಗೂ ವಿ.ಮೋಹನ ಅವರನ್ನೊಳಗೊಂಡ ಪೀಠ ಸಮ್ಮತಿಸಿದ್ದು, ಶುಕ್ರವಾರ ಪ್ರಕರಣವನ್ನು ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಕರ್ನಾಟಕ ಸರ್ಕಾರ ಮತ್ತು ಜಿಬಿಎ ತಮ್ಮ ಅರ್ಜಿಯಲ್ಲಿ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿರುವುದರಿಂದ ಆಡಳಿತಾತ್ಮಕ ಸವಾಲುಗಳು ಎದುರಾಗಿವೆ. ಮನೆಮನೆಗೆ ತೆರಳಿ ಮತದಾರರ ವಿವರ ಪರಿಶೀಲಿಸುವ ಕಾರ್ಯದಲ್ಲಿ ಸಿಬ್ಬಂದಿ ನಿರತರಾಗಿರುವ ಕಾರಣ, ಅದೇ ಸಮಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಗತ್ಯವಿರುವ ಭಾರೀ ಪ್ರಮಾಣದ ಸಿಬ್ಬಂದಿಯನ್ನು ನಿಯೋಜಿಸುವುದು ಸಾಧ್ಯವಾಗುತ್ತಿಲ್ಲ ಎಂದು ವಾದಿಸಿವೆ.
ಬೆಂಗಳೂರು ನಗರದಲ್ಲೇ ಸುಮಾರು 1.03 ಕೋಟಿ ಮತದಾರರು ಹಾಗೂ 40 ಲಕ್ಷ ಮನೆಗಳಿದ್ದು, ಐದು ನಗರ ಪಾಲಿಕೆಗಳ ಚುನಾವಣೆಗೆ ಮತದಾನದ ದಿನ ಮಾತ್ರವೇ ಭದ್ರತಾ ಸಿಬ್ಬಂದಿಯನ್ನು ಹೊರತುಪಡಿಸಿ ಸುಮಾರು 60 ಸಾವಿರ ಸಿಬ್ಬಂದಿ ಅಗತ್ಯವಿದೆ. ಹೀಗಾಗಿ ಎರಡೂ ಪ್ರಕ್ರಿಯೆಗಳನ್ನು ಏಕಕಾಲದಲ್ಲಿ ನಿರ್ವಹಿಸುವುದು ಅತ್ಯಂತ ಕಷ್ಟಕರವಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
Laxmi News 24×7