ದಾವಣಗೆರೆ : ಕೇಂದ್ರ ಸರ್ಕಾರ ವೈದ್ಯಕೀಯ ಕೋರ್ಸ್ಗಳಿಗೆ ನಡೆಸುತ್ತಿರುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ರದ್ದುಗೊಳಿಸಿ, ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನೇ ಮರು ಜಾರಿಗೆ ತರಬೇಕು ಎಂದು ಆಗ್ರಹಿಸಿ ಎನ್ಎಸ್ಯುಐ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಸಕ ಸಮರ್ಥ್ ಶಾಮನೂರು ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ನೀಟ್ ಹಾಳುಗೆಡವಿದೆ. ಒಟ್ಟು ಐದು ಬಾರಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಈ ಎಲ್ಲ ಕಾರಣಗಳಿಂದ ದೇಶದ ಹಲವೆಡೆ ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ಭವಿಷ್ಯ ಡೋಲಾಯಮಾನ ಸ್ಥಿತಿಯಲ್ಲಿರುವುದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ ಎಂದು ಹೇಳಿದರು.
ನೀಟ್ ಕಾರಣಕ್ಕಾಗಿ ಗ್ರಾಮೀಣ ಭಾಗದ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ಅನೇಕ ತೊಂದರೆ ಎದುರಿಸುತ್ತಿದ್ದಾರೆ. ಸಮಾನ ಶಿಕ್ಷಣಾವಕಾಶಕ್ಕೆ ಧಕ್ಕೆಯಾಗುತ್ತಿದೆ. ಹಲವು ಲೋಪಗಳಿಂದ ಕೂಡಿರುವ ಹಾಗೂ ವಿದ್ಯಾರ್ಥಿಗಳ ಭವಿಷ್ಯವನ್ನು ಅತಂತ್ರಗೊಳಿಸುತ್ತಿರುವ ನೀಟ್ನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದ ಶಿಕ್ಷಣ ವ್ಯವಸ್ಥೆ, ಪಠ್ಯಕ್ರಮ ಹಾಗೂ ವಿದ್ಯಾರ್ಥಿಗಳ ಅಗತ್ಯಗಳಿಗೆ ಅನುಗುಣವಾಗಿ ಸಿಇಟಿ ಪದ್ಧತಿಯೇ ಸೂಕ್ತವಾಗಿದೆ. ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಈ ಹಿಂದೆ ಯಶಸ್ವಿಯಾಗಿ ಜಾರಿಯಲ್ಲಿದ್ದ ಹಳೆಯ ಸಿಇಟಿ ಪದ್ಧತಿಯನ್ನು ಮತ್ತೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಯುವ ಕಾಂಗ್ರೆಸ್ನ ವರುಣ್ ಬೆಣ್ಣೆಹಳ್ಳಿ, ಮುಜಾಹಿದ್, ಅಲಿ ರೆಹಮತ್ ಹಾಗೂ ವಿವಿಧ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
Laxmi News 24×7