ಬೆಳಗಾವಿ: ರಾಜ್ಯದಲ್ಲಿ ಪಕ್ಷ ತಳಮಟ್ಟದಿಂದ ಸಂಘಟನೆಯ ಜತೆಗೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಎದುರಿಸಲು ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು. ವಾರ್ಡ್, ಬೂತ ಮಟ್ಟದಿಂದಲೇ ಕಾರ್ಯಕರ್ತರನ್ನು ಸಂಘಟಿತರನ್ನಾಗಿ ಮಾಡಬೇಕು ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಭೈರತಿ ಬಸವರಾಜ ಹೇಳಿದರು.
ನಗರದ ಬಿಜೆಪಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಿಜೆಪಿ ಸಂಘಟನಾತ್ಮಕ ಸಭೆಯಲ್ಲಿ ಮಾತನಾಡಿ, ಪಕ್ಷದ ತಾಲೂಕು, ಜಿಲ್ಲಾ ಹಾಗೂ ವಿಧಾನ ಮಂಡಲ ಮಟ್ಟದ ಮುಖಂಡರು ತಮ್ಮ ವ್ಯಾಪ್ತಿಯ ಪ್ರದೇಶದಲ್ಲಿ ಪಕ್ಷ ಸಂಘಟನೆಗೆ ಮೊದಲ ಆದ್ಯತೆ ನೀಡಬೇಕು. ಕಾರ್ಯಕರ್ತರು ಬೇರೆ ಪಕ್ಷದ ಕಡೆಗೆ ಹೋಗದಂತೆ ಉಳಿಸಿಕೊಳ್ಳಬೇಕು ಎಂದರು.
ಪಕ್ಷ ನೀಡುವ ಪ್ರತಿಯೊಂದು ಕಾರ್ಯಕ್ರಮಗಳನ್ನು ಮುಖಂಡರು,ಪದಾಧಿಕಾರಿಗಳು ಬೂತ ಮಟ್ಟದಲ್ಲಿ ಹೋಗಿ ಪಕ್ಷದ ಕಾರ್ಯಕರ್ತರಿಗೆ ತಿಳಿಸಬೇಕು. ಈಗಿನಿಂದಲೇ ಪಕ್ಷ ಸಂಘಟನೆ ಬಲಿಷ್ಠಗೊಳಿಸಿದರೆ ಮಾತ್ರ 2028ರ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಬಹುದು, ಸಂಘಟನೆ ನಿರ್ಲಕ್ಷೃಸಿದೆ ಚುನಾವಣೆ ಎದುರಿಸುವುದು ಕೂಡ ಕಷ್ಟವಾಗಲಿದೆ. ಹೀಗಾಗಿ ಎಲ್ಲ ಬೇಧಬಾವ ಮಾಡದೆ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು.
ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಮಾತನಾಡಿ, ಜಿಲ್ಲೆಯ 18 ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪ್ರತಿಯೊಂದು ಹಳ್ಳಿಯಲ್ಲಿ ಪಕ್ಷ ಸಂಘಟನೆ ಆರಂಭವಾಗಿದೆ. ವಿಧಾನಸಭಾ ಕ್ಷೇತ್ರದಲ್ಲಿ ಕಾರಣಾಂತರಗಳಿಂದ ಪಕ್ಷದ ಕೆಲ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ಗೆ ಸೇರ್ಪಡೆಯಾಗುತ್ತಿದ್ದಾರೆ. ಹಾಗಂತ ಪಕ್ಷ ಸಂಘಟನೆ ಕೆಲಸ ನಿಲ್ಲುವುದಿಲ್ಲ. ಪಕ್ಷದಿಂದ ಪಕ್ಷಕ್ಕೆ ಹೋಗುವವರಿಗೆ ಆದ್ಯತೆ ನೀಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.
ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಮಾತನಾಡಿ, ಮುಂಬರುವ ಜಿಪಂ, ತಾಪಂ, ಗ್ರಾಪಂ ಹಾಗೂ ನಗರ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಮೊದಲ ಆದ್ಯತೆ ಕೊಡಬೇಕು. ಈಗಿನಿಂದಲೇ ಸಂಘಟನೆಯ ಜತೆಗೆ ಚುನಾವಣೆ ಸಿದ್ಧತೆ ಆರಂಭಿಸಬೇಕು. ಪಕ್ಷಕ್ಕಾಗಿ ದುಡಿಯುವವರಿಗೆ ಸ್ಥಾನಮಾನ ಸಿಗುತ್ತವೆ ಎಂದು ಹೇಳಿದರು.
ಬಿಜೆಪಿ ವಿಭಾಗ ಪ್ರಭಾರಿ ಸಂಜಯ ಪಾಟೀಲ, ಮಾಜಿ ಶಾಸಕರಾದ ಡಾ.ವಿಶ್ವನಾಥ ಪಾಟೀಲ, ಸುರೇಶ ಮಾರಿಹಾಳ, ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ ದೇಶಪಾಂಡೆ, ಮಲ್ಲಿಕಾರ್ಜುನ ಮಾದಮ್ಮನವರ, ಧನಶ್ರೀ ದೇಸಾಯಿ ಇತರರಿದ್ದರು.
Laxmi News 24×7