Breaking News

ಪ್ರಶ್ನೆ ಪತ್ರಿಕೆ ಸೋರಿಕೆ; ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು: ಸಿಎಂ ಡಿ ಕೆ ಶಿವಕುಮಾರ್ ಆಗ್ರಹ

Spread the love

ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆ  ವಿರುದ್ಧ ಪ್ರಧಾನಿ ನರೇಂದ್ರ ಮೋದಿ  ಯವರು ಈಗ ಮಾತನಾಡುವ ಬದಲು ಪ್ರಾರಂಭದಲ್ಲೇ ಮಾತನಾಡಬೇಕಿತ್ತು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಯಾರನ್ನೂ ಕಾಪಾಡುವ ಪ್ರಶ್ನೆಯೇ ಕೇಂದ್ರ ಸರ್ಕಾರದ ಮುಂದಿರಬಾರದು ಎಂದು ಸಿಎಂ ಡಿ ಕೆ ಶಿವಕುಮಾರ್  ಅವರು ಆಗ್ರಹಿಸಿದರು.

ಬೆಂಗಳೂರಿನ ಕೆ ಜಿ ರಸ್ತೆ ಬಳಿ ಮಾಧ್ಯಮಗಳಿಗೆ ಅವರು ಗುರುವಾರ ಪ್ರತಿಕ್ರಿಯಿಸಿ, ಬಿಜೆಪಿಯವರೇ ನಿಮ್ಮ ಮಕ್ಕಳೂ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ದೇಶದ ಯುವ ಜನತೆಯ ಭವಿಷ್ಯ ಹಾಳಾಗುತ್ತಿದೆ. ವೈಫಲ್ಯವನ್ನು ಬಿಜೆಪಿಯವರು ಒಪ್ಪಿಕೊಳ್ಳಬೇಕು. ಒಬ್ಬ ವ್ಯಕ್ತಿ ರಾಜಿನಾಮೆ ಕೊಡುವುದರಿಂದ ಏನಾಗಲಿದೆ? ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದಾಗ ಇಂತಹ ಘಟನೆ ಬಗ್ಗೆ ಯಾರಾದರೂ ಜವಾಬ್ದಾರಿ ಹೊರಬೇಕಲ್ಲವೇ? ಇದಕ್ಕೆ ಯಾರು ಹೊಣೆ? ಎಂದು ಕಿಡಿಕಾರಿದರು.

ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲವೂ ಚರ್ಚೆಯಾಗಬೇಕು. ಟೀಕೆ ಮಾಡಿದಾಗ ನಾವು ಹಾಗೂ ನೀವು ಇಬ್ಬರೂ ಒಪ್ಪಿ ತಿದ್ದಿಕೊಳ್ಳಬೇಕು. ನಾವು ಯುವಕರ ಭವಿಷ್ಯದ ಬಗ್ಗೆ ಆಲೋಚನೆ ಮಾಡುತ್ತಿದ್ದೇವೆ. ಈಗಾಗಲೇ ಸುಮಾರು 100 ಕ್ಕೂ ಹೆಚ್ಚು ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ ಎಂದರು.

ಪ್ರಶ್ನೆ ಪತ್ರಿಕೆ ಸೋರಿಕೆ ರಾಜಕೀಯ ವಿಚಾರವಲ್ಲ
ಪ್ರಶ್ನೆ ಪತ್ರಿಕೆ ಸೋರಿಕೆ ಎಂಬುದು ರಾಜಕೀಯ ಪಕ್ಷಗಳ ವಿಚಾರವಲ್ಲ, ದೇಶದ ಭವಿಷ್ಯದ ವಿಚಾರ. ಪಾರದರ್ಶಕ, ಶಕ್ತಿಯುತ, ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಯಾವುದೇ ಪರೀಕ್ಷೆಗಳು ನಡೆದರು ಅವು ಪಾರದರ್ಶಕವಾಗಿರಬೇಕು. ಇಡೀ ಪ್ರಪಂಚ ಭಾರತದ ಯುವ ಜನತೆಯ ಭವಿಷ್ಯದ ಬಗ್ಗೆ ಆಲೋಚನೆ ಮಾಡುತ್ತಿದೆ. ನಮ್ಮ ದೇಶ ಪ್ರತಿಭಾವಂತರ ದೇಶ. ಇಡೀ ಪ್ರಪಂಚದಲ್ಲಿಯೇ ನಮ್ಮಲ್ಲಿ ಇರುವಷ್ಟು ಪ್ರತಿಭೆಗಳು ಎಲ್ಲಿಯೂ ಇಲ್ಲ ಎಂದು ಅನೇಕರು ಒಪ್ಪಿಕೊಂಡಿದ್ದಾರೆ. ನಮ್ಮನ್ನು ಇಡೀ ಪ್ರಪಂಚವೇ ನೋಡುತ್ತಿರುವ ಹೊತ್ತಿನಲ್ಲಿ ನಮ್ಮ ಶಿಕ್ಷಣದ ಗುಣಮಟ್ಟವನ್ನು ನಾವು ಕಾಪಾಡಬೇಕಿದೆ ಎಂದರು.

ಮೊಟ್ಟೆ ಹೊಡೆದಿದ್ದು ಸರಿಯಲ್ಲ
ನಾವೂ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ಮಾಡಿದ್ದೇವೆ. ಮಂಗಳವಾರದಂದು ಕಾಂಗ್ರೆಸ್ ಕಚೇರಿ ಬಳಿ ಮೊಟ್ಟೆ ಹೊಡೆದಿದ್ದನ್ನು ಸರಿ ಎಂದು ಹೇಳುವುದಿಲ್ಲ. ಕಾನೂನಿನ ಪ್ರಕಾರ ಯಾವ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನಮ್ಮ ಗೃಹಸಚಿವರು ಈಗಾಗಲೇ ತಿಳಿಸಿದ್ದಾರೆ. ಬಿಜೆಪಿಯವರು ಹಿಂದೆ ಏನೇನು ಮಾಡಿದ್ದರು ಎಂದು ಅವರೂ ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಲಾಠಿ, ಮಚ್ಚು, ರೈಫಲ್ ಗಳು ಸಿಕ್ಕಿದ್ದವು. ಪೊನ್ನಂಪೇಟೆಯ ಶಾಲೆಯ ಆವರಣದಲ್ಲಿ ರೈಫಲ್ ತರಭೇತಿ ನೀಡಿದ್ದರು. ನಿಮ್ಮದೂ ಇತಿಹಾಸಗಳಿವೆ ಎಂದರು

ರಾಜ್ಯದಲ್ಲಿ ಕೊತ್ವಾಲ್ ಆಡಳಿತ ನಡೆಯುತ್ತಿದೆ ಎನ್ನುವ ಬಿಜೆಪಿ ಹೇಳಿಕೆ ಬಗ್ಗೆ ಕೇಳಿದಾಗ, ಅವರ ಖುಷಿಗೆ ಏನು ಬೇಕಾದರೂ, ಹೆಂಗೆ ಬೇಕಾದರೂ ಮಾತನಾಡಿಕೊಳ್ಳಲಿ. ನಾನು ಈ ಸ್ಥಾನಕ್ಕೆ ಬರಲು ವಿದ್ಯಾರ್ಥಿ ನಾಯಕನಾಗಿ ಬೆಳೆದವನು. ಹಳ್ಳಿಯಲ್ಲಿ ಹುಟ್ಟಿದ ನಾನು ಪರಿಶುದ್ಧವಾದ ರಾಜಕಾರಣ, ಆಡಳಿತ ಮಾಡುತ್ತಿದ್ದೇನೆ. ಇದನ್ನು ಅವರ ಕೈಯಲ್ಲಿ ತಡೆದುಕೊಳ್ಳಲು ಆಗುತ್ತಿಲ್ಲ ಎಂದರೆ ಏನು ಮಾಡಲು ಆಗುವುದಿಲ್ಲ ಎಂದು ವ್ಯಂಗ್ಯವಾಡಿದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ