Breaking News

ಎಸ್‌ಐಆರ್ 3 ತಿಂಗಳು ವಿಸ್ತರಿಸಿ – ದೇವನೂರು, ಗುಹಾ ಸಲ್ಲಿಸಿದ್ದ PIL ವಜಾ

Spread the love

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅವಧಿಯನ್ನ ಒಂದರಿಂದ ಮೂರು ತಿಂಗಳವರೆಗೆ ವಿಸ್ತರಣೆ ಕೋರಿ ಸಾಹಿತಿ ದೇವನೂರು ಮಹಾದೇವ ಹಾಗೂ ಇತಿಹಾಸ ತಜ್ಞ ರಾಮಚಂದ್ರ ಗುಹಾ ಸೇರಿದಂತೆ ಇನ್ನಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ಕೆ.ಎಸ್.ಹೇಮಲತಾ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಎಸ್‌ಐಆರ್ ಅವಧಿ ವಿಸ್ತರಣೆ ಕೇಂದ್ರ ಚುನಾವಣೆ ಆಯೋಗಕ್ಕೆ ಬಿಟ್ಟ ವಿಚಾರ. ಆಯೋಗದಲ್ಲಿ ತಜ್ಞರ ತಂಡ ಕೆಲಸ ಮಾಡುತ್ತಿದೆ. ಪರಿಹಾರ ಕ್ರಮಗಳನ್ನೂ ಆಯೋಗವೇ ಕೈಗೊಳ್ಳಬೇಕು. ಅಗತ್ಯವಿದ್ದರೆ ಅವರು ಅದನ್ನು ಮಾಡಲಿದ್ದಾರೆ ಎಂದು ತಿಳಿಸಿ ಅರ್ಜಿಯನ್ನ ವಜಾಗೊಳಿಸಿತು.

ಆಯೋಗ ನಿಮ್ಮ ಕೋರಿಕೆಗೆ ನಿರಾಕರಿಸಿದರೆ ನೀವು ಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ. ಅರ್ಜಿಯಲ್ಲಿ ಎತ್ತಿರುವ ಎಸ್‌ಐಆರ್ ಸಂಬಂಧಿತ ವಿಚಾರಗಳು ಸುಪ್ರೀಂ ಕೋರ್ಟ್ ಪರಿಗಣನೆಯಲ್ಲಿವೆ. ಹೀಗಾಗಿ, ಈ ಹಂತದಲ್ಲಿ ಹಾಲಿ ಅರ್ಜಿಯನ್ನು ನ್ಯಾಯಾಲಯವು ಪರಿಗಣಿಸುವುದು ಸರಿಯಲ್ಲ ಎಂಬ ಅಂಶಗಳನ್ನು ಉಲ್ಲೇಖಿಸಿ ನ್ಯಾಯಾಲಯವು ಪಿಐಎಲ್ ಇತ್ಯರ್ಥಪಡಿಸಿದೆ.

ಅರ್ಜಿಯಲ್ಲಿ ಎಸ್‌ಐಆರ್ ನಡೆಸುವುದಕ್ಕೆ ಅಳವಡಿಸಿಕೊಂಡಿರುವ ಪ್ರಕ್ರಿಯೆಗಳನ್ನ ಪ್ರಶ್ನಿಸಲಾಗಿದೆ. ಆಯೋಗವು ಎಸ್‌ಐಆರ್ ನಡೆಸಲು ವಿಶೇಷ ಸಂಸ್ಥೆಯಾಗಿದ್ದು, ಪ್ರಕ್ರಿಯೆಯಲ್ಲಿ ಎದುರಾಗುವ ಸಮಸ್ಯೆಯನ್ನು ನಿವಾರಿಸಲು ಬದ್ಧವಾಗಿಲ್ಲ ಎಂದು ಹೇಳಲು ಯಾವುದೇ ಕಾರಣವಿಲ್ಲ. ಎಸ್‌ಐಆರ್ ಪೂರ್ಣಗೊಳಿಸಲು ನಿಗದಿಪಡಿಸಿರುವ ಕಾಲಮಿತಿಯ ವಿಚಾರವು ಆಯೋಗದ ವಿಶೇಷ ವ್ಯಾಪ್ತಿಗೆ ಒಳಪಟ್ಟಿದ್ದು, ಈ ವಿಚಾರವನ್ನು ಈ ಹಂತದಲ್ಲಿ ಈ ನ್ಯಾಯಾಲಯ ನಿರ್ಧರಿಸಲಾಗದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಇದಕ್ಕೂ ಮುನ್ನ ಅರ್ಜಿದಾರರ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ ಅವರು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವ ಬಿಎಲ್‌ಒಗಳಿಗೆ 10 ದಿನ ಮಾತ್ರ ತರಬೇತಿ ನೀಡಲಾಗಿದೆ. ಅಂಗನವಾಡಿ ಕೆಲಸಗಾರರು, ಶಿಕ್ಷಕರನ್ನು ಈ ಕೆಲಸಕ್ಕೆ ನಿಯೋಜಿಸಲಾಗಿದೆ. ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರಿಗೆ ಆಗಸ್ಟ್ 5ರಿಂದ ಸೆಪ್ಟೆಂಬರ್ 4ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆನಂತರ ಒಂದು ತಿಂಗಳಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಬಿಹಾರದಲ್ಲಿ ಇದೇ ನೀತಿ ಪಾಲಿಸಲಾಗಿತ್ತು. ಬಿಹಾರದಲ್ಲಿ ಚುನಾವಣೆ ಇತ್ತು. ಆದರೆ, ಕರ್ನಾಟಕದಲ್ಲಿ 2028ರಲ್ಲಿ ಚುನಾವಣೆ ನಡೆಯುತ್ತದೆ. ಹೀಗಾಗಿ, ಇಲ್ಲಿ ಕಾಲಾವಕಾಶ ನೀಡಬಹುದು ಎಂದರು.

ಸುಮಾರು 70 ಲಕ್ಷ ಮಂದಿ ಎಸ್‌ಐಆರ್ ಪ್ರಕ್ರಿಯೆಯಿಂದಾಗಿ ಮತದಾನದ ಹಕ್ಕಿನಿಂದ ವಂಚಿತವಾಗಲಿದ್ದಾರೆ ಎನ್ನಲಾಗಿದೆ. ಎಸ್‌ಐಆರ್ ನಗರ ಕೇಂದ್ರಿತ ಜನ ಮಾತ್ರವಲ್ಲ, ಗ್ರಾಮೀಣ, ಅನಕ್ಷರಸ್ಥರೂ ಸೇರಿದ್ದಾರೆ. ಹೀಗಾಗಿ, ಸೂಕ್ತ ಕಾಲಾವಕಾಶ ನೀಡಲು ನಿರ್ದೇಶಿಸಬೇಕು ಎಂದು ಕೋರಿದರು.

ಕೇಂದ್ರ ಚುನಾವಣಾ ಆಯೋಗದ ಪರ ವಕೀಲ ಶರತ್ ದೊಡ್ವಾಡ್, ಅರ್ಜಿದಾರರು ಕರಡು ಪಟ್ಟಿ ಪ್ರಕಟವಾಗುವುದರೊಳಗೆ ಎಲ್ಲವನ್ನು ಮಾಡಬೇಕು ಎನ್ನುತ್ತಿದ್ದಾರೆ. ಒಂದೊಮ್ಮೆ ಅಗತ್ಯ ಎನಿಸಿದರೆ ಆಯೋಗವು ಕಾಲಮಿತಿಯನ್ನು ವಿಸ್ತರಿಸಲಿದೆ. ಕಾಲಮಿತಿ ನಿಗದಿಪಡಿಸಿರುವುದಕ್ಕೆ ಸಂಬಂಧಿಸಿದಂತೆ ಇಸಿಐ ಎಚ್ಚರಿಕೆ ವಹಿಸಿದ್ದು, ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಮಸ್ಯೆಯಾದರೆ ಆಯೋಗವು ಅಗತ್ಯ ಕ್ರಮಕೈಗೊಳ್ಳಲಿದೆ. ಕರಡು ಮತಪಟ್ಟಿ ಬಿಡುಗಡೆ ಮಾಡುವುದಕ್ಕೂ ಮುನ್ನ ಹೆಸರು ಇಲ್ಲದವರಿಗೆ ನೋಟಿಸ್ ಜಾರಿಗೊಳಿಸಬೇಕು ಎಂಬುದು ಸರಿಯಲ್ಲ. ಕರಡು ಪರಿಷ್ಕತ ಮತಪಟ್ಟಿ ಬಿಡುಗಡೆಯಾದ ಬಳಿಕ ನೋಟಿಸ್ ಜಾರಿಗೊಳಿಸಲಾಗುವುದು ಎಂದರು.

ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು, ಸಚಿವ ಸಂಪುಟವು ಕೆಲವು ಸಲಹೆ, ಶಿಫಾರಸುಗಳನ್ನು ಆಯೋಗಕ್ಕೆ ಮಾಡಿದೆ. ಇದುವರೆಗೆ ಆಯೋಗ ಪ್ರತಿಕ್ರಿಯೆ ನೀಡಿಲ್ಲ. ಜನರ ಮೂಲಭೂತ ಹಕ್ಕು ರಕ್ಷಿಸಬೇಕು ಎಂದು ಕೋರಲಾಗಿದೆ. ಕಾಲಮಿತಿಯ ಅನುಗುಣವಾಗಿ ಹೋಗದೆ ಜನರ ಅನುಕೂಲಕ್ಕೆ ತಕ್ಕಂತೆ ಕ್ರಮಕೈಗೊಳ್ಳುವಂತೆ ಆಯೋಗಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಅರ್ಜಿಯನ್ನ ವಜಾಗೊಳಿಸಿತು.


Spread the love

About Laxminews 24x7

Check Also

ಮದ್ವೆಗೆ ನಿರಾಕರಿಸಿದ್ದಕ್ಕೆ ಬೈಕ್ ತಡೆದಿದ್ದ ಪ್ರೇಯಸಿ – ಹ್ಯಾಂಡಲ್‌ಗೆ ಜೋತುಬೀಳಿಸಿಕೊಂಡೇ ರಸ್ತೆಯಲ್ಲಿ ಎಳೆದೊಯ್ದ ಪ್ರಿಯಕರ

Spread the loveಪಾಟ್ನಾ: ಮದುವೆಗೆ ನಿರಾಕರಿಸಿದ್ದಕ್ಕೆ ಬೈಕ್ ತಡೆದು ನಿಂತಿದ್ದ ಪ್ರೇಯಸಿಯನ್ನು ಹ್ಯಾಂಡಲ್‌ಗೆ ಜೋತುಬೀಳಿಸಿಕೊಂಡೇ ಪ್ರಿಯಕರ ರಸ್ತೆಯಲ್ಲೇ ಎಳೆದಾಡಿದ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ