ಮಂಡ್ಯ: ರಾಜ್ಯದಲ್ಲಿ ಮಳೆಯ ಅಭಾವದಿಂದ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿರುವಾಗ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶದ ವಿರುದ್ಧ ಶಾಸಕ ದರ್ಶನ್ ಪುಟ್ಟಣ್ಣಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯದಲ್ಲಿ ಈ ಕುರಿತು ಮಾತನಾಡಿರುವ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು. ಒಂದು ವೇಳೆ ನೀರು ಬಿಟ್ಟರೆ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಕುಡಿಯಲಿಕ್ಕೂ ನೀರಿಲ್ಲದ ದುಸ್ಥಿತಿ ಇದ್ದರೂ, CWRC ಯಾವ ಮಾನದಂಡದ ಅಡಿ ಮತ್ತು ವಸ್ತುಸ್ಥಿತಿಯನ್ನು ಅರಿಯದೇ ಈ ರೀತಿಯ ಆದೇಶ ಮಾಡುತ್ತಿದೆ. ನಮ್ಮ ಜನರಿಗೆ ಕುಡಿಯಲು ನೀರಿಲ್ಲ, ಆದರೆ ತಮಿಳುನಾಡಿನವರು ಬೆಳೆಗಳಿಗೆ ನೀರು ಕೇಳುತ್ತಿದ್ದಾರೆ. ಇದನ್ನು ಪ್ರಾಧಿಕಾರ ಅರ್ಥ ಮಾಡಿಕೊಳ್ಳಬೇಕಿತ್ತು ಎಂದಿದ್ದಾರೆ.
ರಾಜ್ಯ ಸರ್ಕಾರವು ಯಾವುದೇ ಕಾರಣಕ್ಕೂ ನೀರು ಬಿಡಬಾರದು. 15 ದಿನಗಳ ಕಾಲ ನೀರು ಹರಿಸಲು ಸೂಚನೆ ನೀಡಿದ್ದರೂ ಸರ್ಕಾರ ಅದನ್ನ ಧಿಕ್ಕರಿಸಿ ಕಾನೂನಾತ್ಮಕ ಹೋರಾಟಕ್ಕೆ ಮುಂದಾಗಬೇಕು ಹಾಗೂ ಸ್ಥಳದ ವಸ್ತುಸ್ಥಿತಿಯನ್ನ ಪ್ರಾಧಿಕಾರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿದೆಯಾ ಎಂಬ ಅನುಮಾನ ಮೂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರತಿ ವರ್ಷವೂ ಇದೇ ಕಾವೇರಿ ಸಮಸ್ಯೆ ಮರುಕಳಿಸುತ್ತಿದ್ದು, ನಮ್ಮ ಜನ-ಜಾನುವಾರುಗಳ ರಕ್ಷಣೆಗಾಗಿ ಬೆಂಗಳೂರು ಸೇರಿದಂತೆ ಕಾವೇರಿ ನೀರನ್ನ ನಂಬಿರುವ ಪ್ರತಿಯೊಬ್ಬ ನಾಗರಿಕರೂ ಹೋರಾಟಕ್ಕೆ ಇಳಿಯಬೇಕು ಎಂದು ದರ್ಶನ್ ಪುಟ್ಟಣ್ಣಯ್ಯ ಕರೆ ನೀಡಿದ್ದಾರೆ.
Laxmi News 24×7