ಬೆಳಗಾವಿ : ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದ್ದರೂ ಸರ್ಕಾರ ಕಣ್ಣು ಮುಚ್ಚಿ ಕುಳಿತುಕೊಂಡಿದ್ದು, ಕೂಡಲೇ ಬರಗಾಲ ಘೋಷಣೆ ಮಾಡಿ ಪ್ರತಿ ಎಕರೆಗೆ ಐವತ್ತು ಸಾವಿರ ರೂಪಾಯಿ ಪರಿಹಾರ ಘೋಷಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಗುರುವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ನೂರಕ್ಕೂ ಹೆಚ್ಚು ರೈತರು, ಚನ್ನಮ್ಮ ವೃತ್ತದಲ್ಲಿ ಜಮಾಯಿಸಿ ಕೆಲಹ್ತೊತು ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.
ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಬರಗಾಲ ಆವರಿಸಿದೆ. ಆದರೆ, ಯಾವುದೇ ಪರಿಹಾರ ಕಾರ್ಯ ಆರಂಭಗೊಂಡಿಲ್ಲ. ಯಾವ ಸಚಿವರೂ ರೈತರ ಸಂಕಷ್ಟ ಕೇಳುತ್ತಿಲ್ಲ. ಈಚೆಗೆ ಇಲ್ಲಿಗೆ ಬಂದು ಮುಖ್ಯಮಂತ್ರಿ ಸಭೆ ಮಾಡಿದ್ದರೂ ಬರಗಾಲದ ಬಗ್ಗೆ ಯಾವುದೇ ಆಶ್ವಾಸನೆ ನೀಡಿಲ್ಲ. ಆದ್ದರಿಂದ ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸಲು ಇಡೀ ರಾಜ್ಯವನ್ನು ಬರಗಾಲ ಪೀಡಿತ ಎಂದು ಘೋಷಿಸಿ ಪರಿಹಾರ ಕಾರ್ಯಗಳನ್ನು ಆರಂಭಿಸಬೇಕು ಎಂದು ಒತ್ತಾಯಿಸಿದರು.
ಕಳೆದ ಮೂರುವರ್ಷಗಳಿಂದ ಅತಿವೃಷ್ಟಿ ಮತ್ತು ಅನಾವೃಷ್ಠಿಯಿಂದ ರೈತರ ಕೈಗೆ ಯಾವುದೇ ಬೆಳೇ ಸಿಕ್ಕಿಲ್ಲ. ಮೂರು ವರ್ಷ ರೈತ ನಷ್ಟ ಅನುಭವಿಸಿದಲ್ಲಿ ಸರ್ಕಾರವೇ ರೈತರ ಸಾಲ ಮನ್ನಾ ಮಾಡಬೇಕು. ಈ ನಿಯಮದಡಿಯಲ್ಲಿ ಮಹಾರಾಷ್ಟ್ರ, ಆಂಧ್ರ ಹಾಗೂ ತೆಲಂಗಾಣದಲ್ಲಿ ರೈತರ ಸಾಲಮನ್ನಾ ಮಾಡಲಾಗಿದೆ. ಇದೇ ಮಾದರಿಯಲ್ಲಿ ಕರ್ನಾಟಕದಲ್ಲೂ ರೈತರ ಸಾಲಮನ್ನಾ ಆಗಬೇಕು. ನೀರಾವರಿ ಯೋಜನೆಗಳ ಬಗ್ಗೆ ಕೂಡಲೇ ಬೆಳಗಾವಿ ಜಿಲ್ಲಾಧಿಕಾರಿ ರೈತರು ಹಾಗೂ ಸಂಬಂಧಿಸಿದ ಅಧಿಕಾರಿಗಳ ಸಭೆ ಕರೆದು, ಈಗಾಗಲೇ ಬೆಳೆದಿರುವ ಬೆಳೆ ಉಳಿಸಿಕೊಳ್ಳಲು ನೆರವಿಗೆ ಬರಬೇಕು. ರೈತರ ಸಂಕಷ್ಟ ಕೇಳಲು ಶೀಘ್ರವೇ ಕೃಷಿ ಸಚಿವರ ನೇಮಕ ಮಾಡಬೇಕು ಎಂದು ಮನವಿ ಮಾಡಿಕೊಂಡರು.
ಸಂಘಟನೆ ಗೌರವಾಧ್ಯಕ್ಷ ಕಪರಟ್ಟಿಯ ಬಸವರಾಜ ಸ್ವಾಮೀಜಿ, ರಾಜ್ಯಾಧ್ಯಕ್ಷ ವಾಸುದೇವ ಮೇಟಿ, ಪುಟ್ಟು ಖಾನಾಪುರಿ, ಕಲ್ಮೇಶ ಗೋಕಾಕ, ಅನು ಹಳೇಮನಿ, ಶೈಲಾ ಹಿರೇಮಠ, ಕಮಲಾ ಪಾಟೀಲ ಇತರರಿದ್ದರು.
Laxmi News 24×7