ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ತಪ್ಪಲು ಹಾಗೂ ರಾಜ್ಯದ ಅತ್ಯಂತ ಎತ್ತರದ ಶಿಖರ ಎಂದೇ ಖ್ಯಾತಿಯಾಗಿರುವ ಮುಳ್ಳಯ್ಯನಗಿರಿ ಶ್ರೇಣಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಭೂಮಿಯ ತೇವಾಂಶ ಹೆಚ್ಚಾಗಿ ದತ್ತಪೀಠ ಮಾರ್ಗದಲ್ಲಿ ಗುಡ್ಡ ಕುಸಿದಿದೆ.
ನಿತ್ಯ ನೂರಾರು ಪ್ರವಾಸಿಗರು ಓಡಾಡುವ ಪ್ರಸಿದ್ಧ ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಚ್ಚು ಗುಡ್ಡದ ಮಣ್ಣು ರಸ್ತೆ ಮೇಲೆ ಕುಸಿದಿದೆ.
ಈ ಮಾರ್ಗವು ಅತ್ತಿಗುಂಡಿ, ಮಹಲ್ ಸೇರಿದಂತೆ ಹತ್ತಾರು ಹಳ್ಳಿಗಳನ್ನು ಸಂಪರ್ಕಿಸುವ ಮಾರ್ಗವಾಗಿದೆ. ಮುಳ್ಳಯ್ಯನಗಿರಿ ತಪ್ಪಲಿನ ಕಾಫಿ ತೋಟಗಳಿಗೆ ನಿತ್ಯ ಸಾವಿರಾರು ಕೂಲಿ ಕಾರ್ಮಿಕರು ಕೂಡ ಇದೇ ಮಾರ್ಗದಲ್ಲಿ ಓಡಾಡುತ್ತಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು, ರಸ್ತೆಗೆ ಬಿದ್ದಿದ್ದ ಮಣ್ಣನ್ನ ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.
ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದ್ದು ಭೂಮಿಯ ತೇವಾಂಶ ಹೆಚ್ಚಾಗಿ ಮತ್ತಷ್ಟು ಭಾಗಗಳಲ್ಲಿ ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಜಿಲ್ಲಾಡಳಿತ ಕೂಡ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು ಪ್ರವಾಸಿಗರು ಹಾಗೂ ಸ್ಥಳೀಯರು ಎಚ್ಚರಿಕೆಯಿಂದ ಓಡಾಡುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
Laxmi News 24×7