ಖಾನಾಪುರದಲ್ಲಿ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಎದುರಾಗುವ ತೊಂದರೆ ತಪ್ಪಿಸಲು ಏಕಗವಾಕ್ಷಿ (ಸಿಂಗಲ್ ವಿಂಡೋ) ವ್ಯವಸ್ಥೆ ಜಾರಿಗೆ ತರಬೇಕೆಂದು ಸಾರ್ವಜನಿಕ ಗಣೇಶೋತ್ಸವ ಮಹಾಮಂಡಳ ಒತ್ತಾಯಿಸಿದೆ. ಮಹಾಮಂಡಳದ ಪದಾಧಿಕಾರಿಗಳು ತಹಶೀಲ್ದಾರ್ ದುಂಡಪ್ಪ ಕೋಮಾರ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಈ ಕುರಿತು ಪ್ರತ್ಯೇಕವಾಗಿ ಮನವಿ ಸಲ್ಲಿಸಿ, ಗಣೇಶೋತ್ಸವಕ್ಕೂ ಮುನ್ನ ರಸ್ತೆ ಗುಂಡಿ ಮುಚ್ಚಲು ಹಾಗೂ ಸ್ವಚ್ಛತೆ ಕಾಪಾಡಲು ಆಗ್ರಹಿಸಿದರು.
ಖಾನಾಪುರ ತಾಲೂಕಿನ ಸಾರ್ವಜನಿಕ ಗಣೇಶೋತ್ಸವ ಮಹಾಮಂಡಳದ ಅಧ್ಯಕ್ಷ ಪಂಡಿತ್ ಓಗಲೆ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ತಹಶೀಲ್ದಾರ್ ದುಂಡಪ್ಪ ಕೋಮಾರ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಗಣೇಶ ಮಂಡಳಿಗಳು ಪಟ್ಟಣ ಪಂಚಾಯಿತಿ, ಹೆಸ್ಕಾಂ ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಲು ಪ್ರತ್ಯೇಕ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ‘ಸಿಂಗಲ್ ವಿಂಡೋ’ ವ್ಯವಸ್ಥೆ ಜಾರಿಗೊಳಿಸಬೇಕೆಂದು ಆಗ್ರಹಿಸಲಾಯಿತು. ಇದಕ್ಕೆ ಸ್ಪಂದಿಸಿದ ತಹಶೀಲ್ದಾರ್ ದುಂಡಪ್ಪ ಕೋಮಾರ ಅವರು ಸಿಂಗಲ್ ವಿಂಡೋ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಬಳಿಕ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಂತೋಷ ಕುರಬೇಟ ಅವರ ಅನುಪಸ್ಥಿತಿಯಲ್ಲಿ ಕಂದಾಯ ಅಧಿಕಾರಿ ಗಂಗಾಧರ ಕಾಂಬಳೆ ಮನವಿ ಸ್ವೀಕರಿಸಿದರು. ಈ ವೇಳೆ ಅಧಿಕಾರಿ ಪ್ರೇಮಾನಂದ ನಾಯಕ್ ಉಪಸ್ಥಿತರಿದ್ದರು.
ಗಣೇಶೋತ್ಸವದ ಮೆರವಣಿಗೆ ಹಾಗೂ ಭಕ್ತರ ಅನುಕೂಲಕ್ಕಾಗಿ ಪಟ್ಟಣದ ರಸ್ತೆ ಗುಂಡಿಗಳನ್ನು ತಕ್ಷಣ ಮುಚ್ಚಬೇಕು ಮತ್ತು ನೈರ್ಮಲ್ಯ ಕಾಪಾಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಹಾಮಂಡಳದ ಕಾರ್ಯಾಧ್ಯಕ್ಷ ರವಿ ಕಾಟಗಿ, ಪ್ರಕಾಶ ದೇಶಪಾಂಡೆ, ಮಾಜಿ ನಗರಸಭಾ ಸದಸ್ಯ ನಾರಾಯಣ ಓಗಲೆ, ಅನಂತ ಸಡೆಕರ, ರಾಹುಲ್ ಸಾವಂತ್, ಸನ್ನಿ ಮಯೇಕರ್, ಸಂದೀಪ ಶೆಂಬಳೆ, ಪುಟ್ಯಾ ಹಾವಣೂರ, ಪ್ರಜ್ಯೋತ್ ದಲಾಲ್, ಪ್ರದೀಪ್ ದೇಸಾಯಿ ಸೇರಿದಂತೆ ಪ್ರಮುಖ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. (ವರದಿ: ಅಲ್ತಾಫ್ ಎಂ ಬಸರೀಕಟ್ಟಿ,
Laxmi News 24×7