ಗದಗ: ತುಂಗಭದ್ರಾ ನದಿ ಸಮೀಪದಲ್ಲಿರುವ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ಮೊಸಳೆ ಹಾಗೂ ಮೊಸಳೆ ಮರಿಗಳು ಪದೇಪದೆ ಕಾಣಿಸಿಕೊಳ್ಳುತ್ತಿರುವುದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.
ಗ್ರಾಮದ ದುರಗಪ್ಪ ಸ್ವಾಮಿ ಎಂಬುವರ ಮನೆಯ ಹಿತ್ತಲಿನ ಬಳಿ ಇಂದು ಮೊಸಳೆ ಕಾಣಿಸಿಕೊಂಡಿದೆ. ಇದನ್ನು ನೋಡಿದ ಸ್ಥಳೀಯರು ಕೂಗಾಡುತ್ತಿದ್ದಂತೆ ದೊಡ್ಡ ಮೊಸಳೆ ಅಲ್ಲಿಂದ ತಪ್ಪಿಸಿಕೊಂಡಿದೆ. ಆದರೆ, ಒಂದು ಮೊಸಳೆ ಮರಿಯನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ.
ಗ್ರಾಮದ ಸುತ್ತಮುತ್ತ ಪದೇಪದೆ ಮೊಸಳೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಜನರು ಭಯದಲ್ಲಿದ್ದಾರೆ. ಈ ಭಾಗದಲ್ಲಿ ಸುಮಾರು ಏಳೆಂಟು ಮೊಸಳೆಗಳು ಇವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದರ ನಡುವೆ ತುಂಗಭದ್ರಾ ಹಿನ್ನೀರಿನಿಂದ ವಿಠಲಾಪುರ ಸೇರಿದಂತೆ ಮೂರು ಗ್ರಾಮಗಳು ಮುಳುಗಡೆಯಾಗುವ ಆತಂಕವೂ ಇದೆ. ಹಮ್ಮಗಿ ಬಳಿ 3 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯದ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸಲಾಗಿದೆ. ಸದ್ಯ ಇಲ್ಲಿ ಸುಮಾರು ಒಂದೂವರೆ ಟಿಎಂಸಿ ನೀರು ಮಾತ್ರ ಸಂಗ್ರಹವಾಗುತ್ತಿದೆ.
ಮುಂದೆ 3 ಟಿಎಂಸಿ ನೀರು ಸಂಗ್ರಹಿಸಿದರೆ ವಿಠಲಾಪುರ, ಗುಮ್ಮಗೋಳ ಮತ್ತು ಬಿದರಳ್ಳಿ ಗ್ರಾಮಗಳನ್ನು ಸ್ಥಳಾಂತರಿಸಬೇಕು ಎಂಬ ಆದೇಶವಿದೆ. 2010ರಲ್ಲೇ ಈ ಬಗ್ಗೆ ಆದೇಶವಾಗಿದ್ದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಳೆಗಾಲ ಬಂದಾಗ ಗ್ರಾಮದಲ್ಲಿ ಹಲವು ಸಮಸ್ಯೆಗಳು ಎದುರಾಗುತ್ತಿವೆ. ಸರೀಸೃಪಗಳ ಕಾಟವೂ ಹೆಚ್ಚಾಗಿದ್ದು, ಮನೆಗಳಲ್ಲಿ ತೇವಾಂಶದಿಂದ ಅನಾರೋಗ್ಯದ ಸಮಸ್ಯೆಗಳು ಕಾಡುತ್ತಿವೆ ಎಂದು ಗ್ರಾಮಸ್ಥರು ಹೇಳಿದ್ದಾರೆ.
ಮೊಸಳೆಗಳ ಓಡಾಟ ಹಾಗೂ ಹಿನ್ನೀರಿನ ಸಮಸ್ಯೆಯಿಂದ ಗ್ರಾಮಸ್ಥರು ಆತಂಕದಲ್ಲಿದ್ದು, ಆದಷ್ಟು ಬೇಗ ಗ್ರಾಮವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
Laxmi News 24×7